ನವದೆಹಲಿ: ಟೀಂ ಇಂಡಿಯಾ ಹಾಗೂ ಬಾಂಗ್ಲಾ ದೇಶದ ವಿರುದ್ಧ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಕ್ಷಿಯಾಗಲಿದ್ದಾರೆ.
ನ.22 ರಿಂದ ಆರಂಭವಾಗಲಿರುವ ಟೆಸ್ಟ್ ಪಂದ್ಯ ಟೀಂ ಇಂಡಿಯಾ ಆಡಲಿರುವ ಮೊದಲ ಹೊನಲು ಬೆಳಕಿನ (ಡೇ-ನೈಟ್) ಪಂದ್ಯವಾಗಿದ್ದು, ಬಂಗಾಳ ಕ್ರಿಕೆಟ್ ಸಂಸ್ಥೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಆಹ್ವಾನ ನೀಡಿತ್ತು. ಈ ಆಹ್ವಾನಕ್ಕೆ ಪೂರಕವಾಗಿ ಪ್ರತಿಕ್ರಿಯೆ ನೀಡಿರುವ ಅಮಿತ್ ಶಾ, ಪಂದ್ಯಕ್ಕೆ ಆಗಮಿಸುವುದಾಗಿ ತಿಳಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಈಡನ್ ಗಾರ್ಡನ್ಸ್ ಪಂದ್ಯಕ್ಕೆ ಬಾಂಗ್ಲಾ ದೇಶದ ಪ್ರಧಾನಿ ಶೇಖ್ ಹಸೀನಾ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗಮಿಸುವುದು ಬಹುತೇಕ ಖಚಿತವಾಗಿದೆ. ಇದರೊಂದಿಗೆ ಟೀಂ ಇಂಡಿಯಾ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ, ಸೇರಿದಂತೆ ಅಭಿನವ್ ಬಿಂದ್ರಾ, ಬಾಕ್ಸರ್ ಮೇರಿ ಕೋಮ್, ಪಿವಿ ಸಿಂಧು ಕೂಡ ಆಗಮಿಸಲಿದ್ದಾರೆ. ಒಲಂಪಿಕ್ ಪದಕ ಪಡೆದ ಆಟಗಾರರಿಗೆ ಈ ಸಂದರ್ಭದಲ್ಲಿ ಸನ್ಮಾನ ಮಾಡಿ ವಿಶೇಷ ಗೌರವ ನೀಡಲಾಗುವುದು ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.