ರಾಯಚೂರು: ಸಿಎಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್ ವಿರೋಧಿಸಿ ಜಿಲ್ಲೆಯ ಸಿಂಧನೂರು ನಗರದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸಲಾಗಿತ್ತು. ನಗರದ ಆರ್ ಜಿಎಂ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ನೂರಾರು ಯುವಕರು ರಕ್ತದಲ್ಲಿ ಪತ್ರ ಬರೆದು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ರವಾನೆ ಮಾಡಲಾಯಿತು.
ಎನ್.ಆರ್.ಸಿ ಹಾಗೂ ಸಿಎಎ ವಿರೋಧಿಸಿ ನಡೆದ ರಕ್ತದ ಪತ್ರ ಚಳುವಳಿಯಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಬಂದ ಯುವಕರು ತಮ್ಮ ರಕ್ತದಲ್ಲಿ ಪತ್ರ ಬರೆದರು. ಈ ವೇಳೆ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಬಿಜೆಪಿ ಪಕ್ಷ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ಸೇವೆ ಮಾಡುತ್ತೇವೆ ಎಂದು ತಲೆ ಸವರಿದರೆ, ನೀವು ನಂಬಿಕೆಗೆ ಯೋಗ್ಯವಾದ ಜನ ಅಲ್ಲ. ಬಿಜೆಪಿ ಅಂದ್ರೆ ಬೇಡ ಅನ್ನಲ್ಲ, ಬಿಜೆಪಿಯನ್ನ ನಡೆಸುವ ಆಂತರಿಕ ಸಂಘಟನೆಗಳನ್ನ ನಾವು ಒಪ್ಪಲ್ಲ. ಬಸವಣ್ಣನನ್ನು ಕೊಂದವರು, ಅವತ್ತು ಗಾಂಧಿಯನ್ನ ಕೊಂದವರು, ಬುದ್ಧನನ್ನು ಕೊಂದವರು ನಮ್ಮನ್ನು ಉಳಿಸ್ತಾರಾ ಅಂತ ಪ್ರಶ್ನಿಸಿದರು. ಯಡಿಯೂರಪ್ಪ ಸ್ವತಂತ್ರವಾಗಿ ಸರ್ಕಾರ ನಡೆಸಲು ಆಗುತ್ತಿಲ್ಲ. ಯಡಿಯೂರಪ್ಪ ಮತ್ತು ಸಚಿವರಿಗೆ ಸ್ವತಂತ್ರ ಕೊಟ್ಟಿದ್ದೀರಾ? ಸರ್ಕಾರ ನಡಸೋದಿಕ್ಕೆ ಯಾವುದೇ ಸ್ವಾತಂತ್ರ್ಯ ಇಲ್ಲ ಅಂತ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.
ಇನ್ನೂ ಸಮಾವೇಶದಲ್ಲಿ ಮಹಿಳಾ ಹೋರಾಟಗಾರ್ತಿ ಕೆ.ನೀಲಾ, ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ, ಸೇರಿದಂತೆ ಹಲವಾರು ಸಂಘಟನೆಗಳ ಮುಖಂಡರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಯುವಕರು, ವಿದ್ಯಾರ್ಥಿಗಳು ಸೇರಿದಂತೆ ಎರಡು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಸಮಾವೇಶಕ್ಕೆ ಬಂದಿದ್ದರು.