ಅಧಿವೇಶನದ ಮಧ್ಯೆ ತಿರುಪತಿಗೆ ತೆರಳಲಿದ್ದಾರೆ ಸಿಎಂ ಯಡಿಯೂರಪ್ಪ

Public TV
1 Min Read

ಬೆಂಗಳೂರು: ಒಂದು ಕಡೆ ಕೊರೊನಾ ಮಧ್ಯೆಯೂ ಅಧಿವೇಶನ ನಡೆಯುತ್ತಿದೆ. ಮತ್ತೊಂದೆಡೆ ಕೇಂದ್ರ ಸರ್ಕಾರದ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಶುಕ್ರವಾರ ರಾಜ್ಯಾದ್ಯಂತ ಬಂದ್ ಮಾಡುವ ಸಾಧ್ಯತೆ ಇದೆ. ಈ ನಡುವೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೇಗಲ ದರ್ಶನಕ್ಕೆ ಮುಂದಾಗಿದ್ದಾರೆ.

ಸಿಎಂ ಯಡಿಯೂರಪ್ಪ ಬುಧವಾರ ರಾತ್ರಿ ತಿರುಪತಿಗೆ ತೆರಳಲಿದ್ದಾರೆ. ಅಧಿಕೃತ ಕಾರ್ಯಕ್ರಮದೊಂದಿಗೆ ದೇವರ ದರ್ಶನ ಪಡೆಯಲಿದ್ದಾರೆ. ಸಿಎಂ ಯಡಿಯೂರಪ್ಪ ಅವರು ಬುಧವಾರ ಸಂಜೆ 5 ಗಂಟೆಗೆ ವಿಶೇಷ ವಿಮಾನದ ಮೂಲಕ ತಿರುಪತಿಗೆ ಪ್ರಯಾಣ ಬೆಳಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬುಧವಾರ ರಾತ್ರಿ ಸುಮಾರು 7.15ಕ್ಕೆ ತಿರುಮಲದ ಪದ್ಮಾವತಿ ಗೆಸ್ಟ್ ಹೌಸ್‍ನಲ್ಲಿ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಜೊತೆ ಭೋಜನ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಗುರುವಾರ ಬೆಳಗ್ಗೆ ಸುಮಾರು 6.20ಕ್ಕೆ ಸಿಎಂ ಯಡಿಯೂರಪ್ಪ ಅವರು ತಿರುಮಲದಲ್ಲಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

ದೇವರ ದರ್ಶನದ ನಂತರ ತಿರುಮಲದಲ್ಲಿ ಕರ್ನಾಟಕ ಭವನ ನಿರ್ಮಾಣ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಕರ್ನಾಟಕ ಸಿಎಂ ಯಡಿಯೂರಪ್ಪ ಮತ್ತು ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಪಾಲ್ಗೊಳ್ಳಲಿದ್ದಾರೆ. ಗುರುವಾರ ಬೆಳಗ್ಗೆ 10 ಗಂಟೆಗೆ ಯಡಿಯೂರಪ್ಪ ತಿರುಪತಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ ಬರಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *