ಆಗಸ್ಟ್ 16ರಿಂದ ರಾಜ್ಯದಲ್ಲಿ 4 ಕೇಂದ್ರ ಸಚಿವರ ಬಿಜೆಪಿ ‘ಜನಾಶೀರ್ವಾದ ಯಾತ್ರೆ’

Public TV
2 Min Read

ಬೆಂಗಳೂರು: ಸಂಸತ್ತಿನ ಅಧಿವೇಶನದಲ್ಲಿ ಕೇಂದ್ರದ ನೂತನ ಸಚಿವ ಸಂಪುಟದ ಸಚಿವರನ್ನು ಪರಿಚಯಿಸಲು ಪ್ರಧಾನಿಯವರಿಗೆ ಅವಕಾಶ ನೀಡದೆ ಕಾಂಗ್ರೆಸ್ ಅಡ್ಡಿ ಪಡಿಸಿದ ಘಟನೆ ಅತ್ಯಂತ ದುರದೃಷ್ಟಕರ. ಇದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು, ನೂತನ ಸಚಿವರನ್ನು ಜನರಿಗೆ ಪರಿಚಯಿಸಲು ಆಗಸ್ಟ್ 16ರಿಂದ ‘ಜನಾಶೀರ್ವಾದ ಯಾತ್ರೆ’ ನಡೆಸಲು ನಿರ್ಧರಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಉದ್ದಗಲಕ್ಕೆ ಜನಾಶೀರ್ವಾದ ಯಾತ್ರೆ ತೆರಳಲಿದೆ. ರಾಜ್ಯದಲ್ಲಿ ನಾಲ್ಕು ತಂಡಗಳು ಸಂಚರಿಸಲಿದ್ದು, ಸಚಿವರಾದ ಎ.ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್ ಮತ್ತು ಭಗವಂತ ಖೂಬಾ ಅವರ ನೇತೃತ್ವದಲ್ಲಿ ಈ ತಂಡಗಳು ಪ್ರವಾಸ ಮಾಡಲಿವೆ. ಇದಕ್ಕಾಗಿ ಸಂಚಾಲಕರು, ಸಹ ಸಂಚಾಲಕರನ್ನು ನೇಮಿಸಲಾಗಿದೆ ಎಂದು ತಿಳಿಸಿದರು. ದೇಶದಲ್ಲಿ ಒಟ್ಟು 160 ದಿನ ವಿವಿಧ ತಂಡಗಳು ಪ್ರವಾಸ ಮಾಡಲಿವೆ. ರಾಜ್ಯದಲ್ಲಿ 5 ದಿನಗಳ ಪ್ರವಾಸದಲ್ಲಿ 2,030 ಕಿ.ಮೀ. ದೂರವನ್ನು ಕ್ರಮಿಸಲಿವೆ. 24 ಲೋಕಸಭಾ ಕ್ಷೇತ್ರಗಳು, 72 ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ 25 ಕಂದಾಯ ಜಿಲ್ಲೆಗಳಲ್ಲಿ 161 ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಕೇಂದ್ರ ಸರ್ಕಾರವು ನರೇಂದ್ರ ಮೋದಿ ನೇತೃತ್ವದಲ್ಲಿ ಅನುಷ್ಠಾನಗೊಳಿಸಿದ ಯೋಜನೆಗಳು, ರೈತರ ಆದಾಯ ದ್ವಿಗುಣ, ದೀನ ದಲಿತರು, ಬಡವರ ಅಭ್ಯುದಯಕ್ಕಾಗಿ ಕೈಗೊಂಡ ಕಾರ್ಯಕ್ರಮಗಳನ್ನು ಪರಿಚಯಿಸಲಾಗುವುದು. ದೇಶದಲ್ಲಿ 55 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ ನೀಡಲಾಗಿದೆ. ದೀಪಾವಳಿವರೆಗೆ ಬಡವರಿಗೆ ಉಚಿತ ಪಡಿತರ ನೀಡುತ್ತಿದ್ದು, ಲಸಿಕಾ ಕೇಂದ್ರ, ರೇಶನ್ ಅಂಗಡಿಗಳಿಗೆ ಈ ಯಾತ್ರೆ ಭೇಟಿ ಕೊಡಲಿದೆ ಎಂದು ವಿವರಿಸಿದರು.

ರಸಗೊಬ್ಬರದ ಅಂಗಡಿಗೆ ಭೇಟಿ ನೀಡಿ ಗೊಬ್ಬರ ಸರಿಯಾಗಿ ಸಿಗುತ್ತಿದೆಯೇ ಎಂದು ಮಾಹಿತಿ ಪಡೆಯಲಾಗುವುದು. ಸಾಹಿತಿಗಳು, ಗಡಿ ಕಾಯುವ ಯೋಧರ ಮನೆ, ಗಣ್ಯ ವ್ಯಕ್ತಿಗಳ ಮನೆ, ಜನಸಂಘ ಮತ್ತು ಬಿಜೆಪಿಯ ಹಿರಿಯ ನಾಯಕರ ಮನೆಗಳಿಗೆ ಭೇಟಿ ಕೊಟ್ಟು ಅವರ ಆಶೀರ್ವಾದ ಪಡೆಯಲಾಗುವುದು ಎಂದರು. ಬಳಿಕ ಯಾತ್ರೆಯ ರೂಟ್ ಮ್ಯಾಪ್ ಬಿಡುಗಡೆಗೊಳಿಸಿದರು. ಕೋವಿಡ್ ನಿಯಮಾವಳಿ ಕಡ್ಡಾಯವಾಗಿ ಪಾಲಿಸಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಆನಂದ್ ಸಿಂಗ್ – ಸಿಎಂ ಸಂಧಾನ ಸಭೆ ಸಕ್ಸಸ್

ಮಾಧ್ಯಮಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ಕೇಶವ್ ಪ್ರಸಾದ್ ಮತ್ತು ಜಗದೀಶ್ ಹಿರೇಮನೆ, ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕರಾದ ಕರುಣಾಕರ ಖಾಸಲೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಇಂದಿರಾ ಗಾಂಧಿ ಅವರ ಕುರಿತು ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್‍ಗೆ ಕೋಪ ಬಂದಿದೆ: ಸಿ.ಟಿ.ರವಿ

Share This Article
Leave a Comment

Leave a Reply

Your email address will not be published. Required fields are marked *