ಆಲಮಟ್ಟಿ, ನಾರಾಯಣಪುರ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ, ಪ್ರವಾಹ ಭೀತಿ

Public TV
1 Min Read

ವಿಜಯಪುರ/ ಯಾದಗಿರಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ‌ ಮಳೆಯಿಂದ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ.ಆಲಮಟ್ಟಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ಒಳಹರಿವು ಹೆಚ್ಚಳವಾಗಿದ್ದು 26 ಗೇಟ್ ಗಳ ಪೈಕಿ 22 ಗೇಟ್ ಗಳ ಮೂಲಕ ಅಪಾರ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.

1.47 ಲಕ್ಷ ಕ್ಯುಸೆಕ್‌ ಒಳ ಹರಿವು ದಾಖಲಾಗಿದ್ದು,1.50 ಲಕ್ಷ ಕ್ಯುಸೆಕ್‌ ನೀರನ್ನ ಹೊರಬಿಡಲಾಗುತ್ತಿದೆ. ಕ್ಷಣ ಕ್ಷಣಕ್ಕೂ ನೀರು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಹತ್ತಿರದ ಗ್ರಾಮಗಳ ಮೀನುಗಾರರು, ಗ್ರಾಮಸ್ಥರು ನದಿಗೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

123.081 ಟಿಎಂಸಿ ಸಂಗ್ರಹ ಸಮರ್ಥ್ಯ ಇರುವ ಜಲಾಶಯದಲ್ಲಿ ಈಗ 97.70 ಟಿಎಂಸಿ ನೀರು ಸಂಗ್ರಹಗೊಂಡಿದೆ. 519 ಮೀಟರ್‌ ಎತ್ತರದ ಜಲಾಶಯದಲ್ಲಿ ಈಗ 518 ಮೀಟರ್‌ ನೀರು ಸಂಗ್ರಹಗೊಂಡಿದೆ.

ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಮತ್ತೆ ಕೃಷ್ಣಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆಯಾಗಿದೆ.

ಜಲಾಶಯಕ್ಕೆ 1.50 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, 1,63,650 ಕ್ಯೂಸೆಕ್ ನೀರನ್ನು 10 ಗೇಟ್‌ ತೆರೆದು ಬಿಡುಗಡೆ ಮಾಡಲಾಗಿದೆ. ಜಲಾಶಯದ ಸಂಗ್ರಹ ಸಾಮರ್ಥ್ಯ 33.313 ಟಿಎಂಸಿ ಇದ್ದು, ಈಗಾಗಲೇ 29.570 ಟಿಎಂಸಿ ನೀರು ಸಂಗ್ರಹವಿದೆ. ಮಧ್ಯಾಹ್ನ ವೇಳೆಗೆ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಯಾಗುವ ಸಾಧ್ಯತೆಯಿದೆ.

ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು Cubic feet per Second ಹ್ರಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *