ಎರಡನೇ ಬಾರಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಹೋಂ ಕ್ವಾರಂಟೈನ್

Public TV
1 Min Read

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಎರಡನೇ ಬಾರಿ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಮನೆಯಲ್ಲಿ ಅಡುಗೆ ಮಾಡುವವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಜಿಲ್ಲಾಧಿಕಾರಿಗಳು ಕೂಡ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.

ಜಿಲ್ಲಾಧಿಕಾರಿಗಳ ಮನೆಯ ಅಡುಗೆ ಭಟ್ಟರಿಗೆ ಕೊರೊನಾ ಸೋಂಕು ತಗುಲಿದ್ದು, ಪ್ರಾಥಮಿಕ ಸಂಪರ್ಕದಲ್ಲಿ ಇರೋದರಿಂದ ಸ್ವಯಂ ಪ್ರೇರಿತವಾಗಿ ಹೋಂ ಕ್ವಾರಂಟೈನ್‍ನಲ್ಲಿದ್ದಾರೆ. ಬಗಾದಿ ಗೌತಮ್ ಹೋಂ ಕ್ವಾರಂಟೈನ್‍ಗೆ ಒಳಗಾಗ್ತಿರೋದು ಇದು ಎರಡನೇ ಬಾರಿ. ಕಂದಾಯ ಸಚಿವ ಆರ್. ಅಶೋಕ್ ಚಿಕ್ಕಮಗಳೂರಿಗೆ ಬಂದು ಹೋದ ಬಳಿಕ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿಯವರಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಆಗಲೂ ಡಿಸಿ ಬಗಾದಿ ಗೌತಮ್ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದರು. ವೈದ್ಯರ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಒಂದು ವಾರಗಳ ಕಾಲ ಹೋಂ ಕ್ವಾರಂಟೈನ್‍ಗೆ ಮುಂದಾಗಿದ್ದಾರೆ.

ಸದ್ಯಕ್ಕೆ ಡಿಸಿ ಬಗಾದಿ ಗೌತಮ್ ಅವರಿಗೆ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ಆದರೂ ಒಂದು ವಾರಗಳ ಕಾಲ ಡಿಸಿ ಹೋಂ ಕ್ವಾರಂಟೈನ್‍ಗೆ ಮುಂದಾಗಿದ್ದಾರೆ. ಇದೇ ವೇಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಮತ್ತೋರ್ವ ನೌಕರನಿಗೂ ಪಾಸಿಟಿವ್ ಬಂದಿದೆ. ಈಗಾಗಲೇ ಜಿಲ್ಲಾಧಿಕಾರಿ ಕಚೇರಿಯ 20ಕ್ಕೂ ಹೆಚ್ಚು ಸಿಬ್ಬಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಅವರೆಲ್ಲರ ವರದಿಯೂ ನೆಗೆಟಿವ್ ಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *