ಎಲುಬಿಲ್ಲದ ನಾಲಿಗೆಯ ಹರಿಬಿಡಬೇಡಿ – ಕೃಷಿ ಸಚಿವರಿಗೆ ಹೆಚ್‍ಡಿಕೆ ಕ್ಲಾಸ್

Public TV
1 Min Read

ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳೊವ ರೈತರು ಹೇಡಿಗಳು ಅನ್ನೋ ಸಚಿವ ಬಿ.ಸಿ ಪಾಟೀಲ್ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಸಚಿವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕು ತೋಚದಂತಾಗಿ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತ ಹೇಡಿಯಲ್ಲ ಅಂತ ಕಿಡಿಕಾರಿದ್ದಾರೆ.

https://twitter.com/hd_kumaraswamy/status/1334458801370460160

ಹೆಂಡತಿ, ಮಕ್ಕಳು, ನೆಂಟರು, ಊರಿನವರ ಮುಂದೆ ಮರ್ಯಾದೆ ಹೋಯಿತಲ್ಲ ಎಂದು ಸಾವಿಗೆ ಶರಣಾಗುತ್ತಾನೆ. ಹೇಡಿತನದ ಪಟ್ಟ ಕಟ್ಟಿಕೊಳ್ಳಲು ಅಲ್ಲ. ಕೃಷಿ ಸಚಿವರ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅಪಮಾನ. ರೈತ ರಾಜಕಾರಣಿಗಳಂತೆ ಅಧಿಕಾರಕ್ಕಾಗಿ ಬಣ್ಣ ಬದಲಿಸುವ ಗೋಸುಂಬೆ ವ್ಯಕ್ತಿತ್ವದವನಲ್ಲ. ನೆಲವನ್ನೇ ನಂಬಿ ಬದುಕುವ ಕಡು ಕಷ್ಟ ಜೀವಿ ಎಂದು ರೈತರ ಪರವಾಗಿ ನಿಂತಿದ್ದಾರೆ.

ರೈತ ಸಮುದಾಯಕ್ಕೆ ಕೇಂದ್ರ-ರಾಜ್ಯ ಸರ್ಕಾರಗಳು ರಟ್ಟೆಗೆ ಬಲ ತುಂಬುವ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು. ಅದು ಬಿಟ್ಟು ಹೇಡಿ ಎಂಬ ಪಟ್ಟ ಕಟ್ಟಿ ಹೊಣೆಗೇಡಿತನ ಪ್ರದರ್ಶಿಸಬಾರದು. ಕೃಷಿ ಸಚಿವರೇ ರೈತ ಸಮುದಾಯದ ವಿರುದ್ಧ ಎಲುಬಿಲ್ಲದ ನಾಲಿಗೆ ಹರಿ ಬಿಟ್ಟಿರುವುದು ಖಂಡನೀಯ. ರೈತ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *