SSLC ಫಲಿತಾಂಶ-ಶಿರಸಿ ಸನ್ನಿಧಿ, ಮಂಗಳೂರಿನ ಅನೂಷ್‌ಗೆ 625ಕ್ಕೆ 625 ಅಂಕ

Public TV
1 Min Read

ಕಾರವಾರ/ಮಂಗಳೂರು: ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಪ್ರಥಮ ಸ್ಥಾನವನ್ನು ಇಬ್ಬರು ಹಂಚಿಕೊಂಡಿದ್ದಾರೆ. ಮಂಗಳೂರಿನ ಅನೂಷ್ ಎ.ಎಲ್ ಮತ್ತು ಶಿರಸಿ ಸನ್ನಿಧಿ ಎಲ್ಲ ಅಂಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅನೂಷ್ ಸುಬ್ರಹ್ಮಣ್ಯದ ಕುಮಾರಸ್ವಾಮಿ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದಾನೆ.

ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಮಹಾಬಲೇಶ್ವರ ಹೆಗಡೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದು, 625 ಕ್ಕೆ 625 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಶಿರಸಿಯ ಪ್ರಗತಿ ನಗರದ ಮಹಾಬಲೇಶ್ವರ ಹೆಗಡೆ ಹಾಗೂ ವೀಣಾ ಹೆಗಡೆ ದಂಪತಿಯ ಪುತ್ರಿಯಾಗಿರುವ ಸನ್ನಿಧಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದು, ಅವರ ತಂದೆ ಕಾರವಾರದ ಆರೋಗ್ಯ ಇಲಾಖೆಯಲ್ಲಿ ಹಿರಿಯ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕಳೆದ ಹಲವು ವರ್ಷಗಳಿಂದ ಉತ್ತಮ ಸಾಧನೆ ಮಾಡಿಕೊಂಡು ಬಂದಿರುವ ಶಿರಸಿಯ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದು, ಆಕೆಯ ಸಾಧನೆಗೆ ಶಿಕ್ಷಕ ವೃಂದ ಹಾಗೂ ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ 11 ವಿದ್ಯಾರ್ಥಿಗಳು 624, 43 ಮಂದಿ 623, 56 ವಿದ್ಯಾರ್ಥಿಗಳು 622, 68 ಮಂದಿ 621 ಹಾಗೂ 117 ವಿದ್ಯಾರ್ಥಿಗಳು 620 ಅಂಕ ಪಡೆದಿದ್ದಾರೆ. ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಈ ಬಾರಿ ಪ್ರಥಮ ಹಾಗೂ ಯಾದಗಿರಿ ಕೊನೆಯ ಸ್ಥಾನ ಪಡೆದುಕೊಂಡಿದೆ.

https://twitter.com/mla_sudhakar/status/1292762268606713856

ಈ ಬಾರಿ 8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು. 19,086 ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯಾಗಿತ್ತು. 18,067 ವಿದ್ಯಾರ್ಥಿಗಳು ಕೊರೋನಾ ಕಾರಣದಿಂದ ಗೈರು ಹಾಜರಾಗಿದ್ದರು. 8,11,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 34 ಶೈಕ್ಷಣಿಕ ಜಿಲ್ಲೆಗಳ 227 ಕೇಂದ್ರಗಳಲ್ಲಿ 52,219 ಮೌಲ್ಯಮಾಪಕರು ಮೌಲ್ಯಮಾಪನ ನಡೆಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *