ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು

Public TV
1 Min Read

– ಪರೀಕ್ಷಾ ಕೇಂದ್ರಕ್ಕೆ ತೆರಳುವ ವೇಳೆ ಸೋಂಕು ಪತ್ತೆ

ಕೊಪ್ಪಳ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವೇಳೆ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿರುವುದು ಬೆಳಕಿಗೆ ಬಂದಿದ್ದು, ಇದೀಗ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಆತಂಕ ಎದರಾಗಿದೆ.

ಜಿಲ್ಲೆಯ ಕಾರಟಗಿ ನಗರದ ಖಾಸಗಿ ಶಾಲಾ ಪರೀಕ್ಷಾ ಕೇಂದ್ರದಲ್ಲಿನ ವಿದ್ಯಾರ್ಥಿನಿಗೆ ಸೋಂಕು ದೃಢವಾಗಿದೆ. ಕಳೆದ ಎರಡು ವಿಷಯಗಳ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿನಿಗೆ ಇಂದು ಸೋಂಕು ದೃಢವಾಗಿದೆ. ಈ ಹಿನ್ನಲೆಯಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಸಮಯದಲ್ಲಿಯೇ ವಿದ್ಯಾರ್ಥಿನಿಗೆ ಕೊರೊನಾ ಚಿಕಿತ್ಸೆ ನೀಡುವ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾ ಕೊರೊನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಮೂರು ತಿಂಗಳ ಹಿಂದೆ ವಿದ್ಯಾರ್ಥಿನಿ ಕೂಲಿ ಅರಿಸಿಕೊಂಡು ತಂದೆ ತಾಯಿಗಳ ಜೊತೆಗೆ ಬೆಂಗಳೂರಿಗೆ ತೆರಳಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹಿನ್ನಲೆಯಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರನಲ್ಲಿರುವ ಚಿಕ್ಕಮ್ಮ ಅವರ ಮನೆಯಲ್ಲಿ ವಾಸವಾಗಿದ್ದಳು. ಈ ಹಿಂದಿನ ಎರಡು ಪರೀಕ್ಷೆಗಳನ್ನು 18 ವಿದ್ಯಾರ್ಥಿಗಳಿರುವ ಕೊಠಡಿಯಲ್ಲಿ ಬರೆದಿರುವ ಹಿನ್ನಲೆಯಲ್ಲಿ 18 ವಿದ್ಯಾರ್ಥಿಗಳು ಸೇರಿದಂತೆ 4 ಜನ ಕೊಠಡಿ ಮೇಲ್ವಿಚಾರಕರನ್ನು ಕ್ವಾರಂಟೈನ್ ಮಾಡಲು ಕೊಪ್ಪಳ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಜಿಲ್ಲೆಯಲ್ಲಿ ಇಂದು 13 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಜಿಲ್ಲೆಯ ಗಂಗಾವತಿ ತಾಲೂಕಿನ 8 ಜನರಿಗೆ, ಕೊಪ್ಪಳ ತಾಲೂಕಿನ ಇಬ್ಬರಿಗೆ ಹಾಗೂ ಕುಷ್ಟಗಿ ತಾಲೂಕಿನ ಮೂವರಿಗೆ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 97 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಇದರಲ್ಲಿ 41 ಜನ ಗುಣಮುಖವಾಗಿದ್ದರೆ. 55 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆ.

Share This Article
Leave a Comment

Leave a Reply

Your email address will not be published. Required fields are marked *