ಏನೇ ಸರ್ಕಸ್ ಮಾಡಿದ್ರೂ ಬಿಜೆಪಿಯ ಶಾಸಕರ ಒಗ್ಗಟ್ಟು ಒಡೆಯಲು ಸಾಧ್ಯವಿಲ್ಲ: ಈಶ್ವರಪ್ಪ

Public TV
1 Min Read

– ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ

ಶಿವಮೊಗ್ಗ: ಮುಖ್ಯಮಂತ್ರಿ ಬದಲಾವಣೆ ವಿಚಾರ ಕೇವಲ ಊಹಾಪೋಹ ಅಷ್ಟೇ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.

ಶಿವಮೊಗ್ಗದಲ್ಲಿ ಇಂದು ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಈಶ್ವರಪ್ಪ ನಾಯಕತ್ವ ಬದಲಾವಣೆ ವಿಚಾರ ಕೆಲವು ಪತ್ರಿಕೆ, ಟಿವಿಗಳಲ್ಲಿ ಸುದ್ದಿಯಾಗಿರುವುದನ್ನು ನಾನು ಗಮನಿಸಿದ್ದೇನೆ. ಅವರಿಗೆ ಸುದ್ದಿ ಬೇಕು ಅದಕ್ಕೆ ಹಾಕಿದ್ದಾರೆ ಅಷ್ಟೇ. ಇದರಲ್ಲಿ ಯಾವುದೇ ಹುರುಳಿಲ್ಲ ಎಂದರು.

ಯಾರೂ ಏನೇ ಸರ್ಕಸ್ ಮಾಡಿದರೂ ಕೂಡಾ ಬಿಜೆಪಿ ಶಾಸಕರ ಒಗ್ಗಟ್ಟು ಒಡೆಯಲು ಸಾಧ್ಯವಿಲ್ಲ. ಕೇಂದ್ರದ ನಾಯಕರು ತೀರ್ಮಾನ ಮಾಡಿದ್ದಾರೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಯಡಿಯೂರಪ್ಪ ಅವರ ಬದಲಾವಣೆ ಇಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರು ಎಂದರು.

ಶಾಸಕಾಂಗ ಸಭೆ ಕರೆಯಬೇಕು ಎಂದು ಯಾರು ಕೇಳಿದ್ದಾರೆ. ಅವಶ್ಯಕತೆ ಇದ್ದಾಗ ಶಾಸಕಾಂಗ ಸಭೆ ಕರೆಯುತ್ತಾರೆ. ಶಾಸಕಾಂಗ ಸಭೆಯ ಅವಶ್ಯಕತೆ ಆದರೂ ಏನಿದೆ ಎಂದು ಪ್ರಶ್ನಿಸಿದರು. ಕೊರೊನಾ ಸೋಂಕು ಇರುವ ಕಾರಣ ವಿಧಾನ ಮಂಡಲದ ಸಮಿತಿ ಸಭೆಯೇ ನಡೆಯುತ್ತಿಲ್ಲ. ಕ್ಯಾಬಿನೆಟ್ ಸಭೆ ನಡೆಸಲು ಸಹ ಹಿಂದೆ ಮುಂದೆ ನೋಡುತ್ತಿದ್ದೇವೆ. ನಮ್ಮ ಎಲ್ಲಾ ಶಾಸಕರು ಅವರವರ ಕ್ಷೇತ್ರದಲ್ಲಿ ಕೋವಿಡ್ ದೂರ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರವರ ಕ್ಷೇತ್ರದಲ್ಲಿ ಕೆಲಸ ಮಾಡಲು ಶಾಸಕರಿಗೆ ಸಮಯ ಇಲ್ಲ. ಹೀಗಿರುವಾಗ ಈ ವಿಷಯದಲ್ಲಿ ಸುಮ್ಮನೆ ರಾಜಕಾರಣ ಬೆರೆಸುವ ಪ್ರಯತ್ನ ಮಾಡುವುದು ಸರಿಯಲ್ಲ ಎಂದು ಸಚಿವ ಈಶ್ವರಪ್ಪ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *