ಕಾಂಗ್ರೆಸ್ ಸೇರಲಿದ್ದಾರೆ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್

Public TV
1 Min Read

– ತಮಿಳುನಾಡಿನಲ್ಲಿ ಬಿಜೆಪಿಗೆ ಅಣ್ಣಾಮಲೈ, ಕಾಂಗ್ರೆಸ್ಸಿಗೆ ಸೆಂಥಿಲ್

ಚೆನ್ನೈ: ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಸೋಮವಾರ ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

2009ರ ಬ್ಯಾಚ್ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಕಳೆದ ವರ್ಷ ಸೆಪ್ಟೆಂಬರಿನಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಜೊತೆಗೆ ಕೇಂದ್ರ ಸರ್ಕಾರದ ನೀತಿಗಳು ನನಗೆ ಇಷ್ಟವಾಗುತ್ತಿಲ್ಲ. ಕೇಂದ್ರ ಸರ್ಕಾರದ ಪಾಲಿಸಿಗಳು ಸೈದ್ಧಾಂತಿಕವಾಗಿ ನನಗೆ ಒಪ್ಪಿಗೆ ಇಲ್ಲವೆಂದು ಕಾರಣ ಹೇಳಿ ರಾಜೀನಾಮೆ ನೀಡಿದ್ದರು.

ರಾಜೀನಾಮೆ ನೀಡಿದ ಬಳಿಕ ಮೌನವಾಗಿದ್ದ ಸೆಂಥಿಲ್ ಇಂದು ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ದೇಶದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಮತ್ತು ಕೇಂದ್ರ ಸರ್ಕಾರದ ನೀತಿ ಬೇಸತ್ತು ನಾನು ರಾಜೀನಾಮೆ ನೀಡಿದ್ದೆ. ಈಗ ನಾನು ರಾಜಕೀಯಕ್ಕೆ ಬರುವುದಕ್ಕೆ ಒಳ್ಳೆಯ ಸಮಯ ಕೂಡಿ ಬಂದಿದೆ. ನನ್ನ ರಾಜಕೀಯ ಭವಿಷ್ಯಕ್ಕೆ ಕಾಂಗ್ರೆಸ್ ಉತ್ತಮ ವೇದಿಕೆಯಾಗಿದೆ ಎಂದು ಹೇಳಿದ್ದಾರೆ.

ನಾನು ಪಕ್ಷ ಸೇರಿರುವುದಕ್ಕೆ ಕಾಂಗ್ರೆಸ್ ನಾಯಕರು ಕೂಡ ಬಹಳ ಸಂತೋಷಪಟ್ಟಿದ್ದಾರೆ. ನಾನು ಎಂಎಲ್‍ಎ ಎಂಪಿಯಾಗಬೇಕು ಎಂದು ಇಲ್ಲಿಗೆ ಬಂದಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅವಶ್ಯಕತೆಯನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಎಲ್ಲರನ್ನೂ ಒಂದುಗೂಡಿಸುವುದು ನನ್ನ ಕೆಲಸವಾಗಿದೆ. ನನಗೆ ನಂಬಿಕೆ ಇದೆ 2024ರಲ್ಲಿ ರಾಜಕೀಯದಲ್ಲಿ ಹೊಸ ಅಲೆ ಬೀಸಲಿದೆ ಎಂದು ಸೆಂಥಿಲ್ ತಿಳಿಸಿದ್ದಾರೆ.

ಕಳೆದ ಅಗಸ್ಟ್ 25ರಂದು ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಅಣ್ಣಾಮಲೈ ಅವರು ತಮಿಳುನಾಡಿನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಈಗ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಸಸಿಕಾಂತ್ ಸೆಂಥಿಲ್ ಅವರು ಕೂಡ ತಮಿಳುನಾಡಿನಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *