ಕಾರ್ಪೊರೇಟರ್ ಇಮ್ರಾನ್ ಪಾಷಾ ವಿರುದ್ಧ ಎಫ್‍ಐಆರ್ ದಾಖಲು

Public TV
2 Min Read

ಬೆಂಗಳೂರು: ಪಾದರಾಯನಪುರ ಕಾರ್ಪೊರೇಟರ್ ಇರ್ಮಾನ್ ಪಾಷಾ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 188 (ಸರ್ಕಾರಿ ಅಧಿಕಾರಿಗಳ ಕೆಲಸಕ್ಕೆ ಅಡ್ಡಿ), 270 (ವೈರಸ್ ಹಬ್ಬಿಸಲು ಯತ್ನ), 271 (ರೋಗ ನಿರೋಧಕ ನಿರ್ಬಂಧ ನಿಯಮವನ್ನು ಉಲ್ಲಂಘಿಸುವುದು) ಹಾಗೂ ಕ್ವಾರಂಟೈನ್ ನಿಯಮ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಇಮ್ರಾನ್ ಪಾಷಾ ಅವರನ್ನು ಆರೋಗ್ಯ ಅಧಿಕಾರಿಗಳು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಪಾದರಾಯನಪುರಕ್ಕೆ ಹೋಗಿದ್ದರು. ಈ ವೇಳೆ ಇಮ್ರಾನ್ ಪಾಷಾ ಮನೆ ಬಳಿ ಹೈಡ್ರಾಮಾ ಸೃಷ್ಟಿಸಿ ನೂರಾರು ಜನ ಸೇರುವಂತೆ ಮಾಡಿದ್ದರು. ಈ ಸಂಬಂಧ ಆರೋಗ್ಯ ಅಧಿಕಾರಿಗಳು ಜೆಜೆ ನಗರ ಪೊಲೀಸರಿಗೆ ದೂರು ನೀಡಿದ್ದರು. ಆರೋಗ್ಯ ಅಧಿಕಾರಿಗಳ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕಾರ್ಪೊರೇಟರ್ ಹೈಡ್ರಾಮಾ:
ಪಾದರಾಯನಪುರ ವಾರ್ಡ್ ಕಾರ್ಪೊರೇಟರ್ ಇಮ್ರಾನ್ ಪಾಷಾ ಅವರಿಗೆ ಶುಕ್ರವಾರ ಕೊರೊನಾ ಸೋಂಕು ದೃಢಪಟ್ಟಿದ್ದರೂ ಅವರು ಆಸ್ಪತ್ರೆ ಸೇರಿದ್ದು ಶನಿವಾರ ಮಧ್ಯಾಹ್ನದ ಹೊತ್ತಿಗೆ. ಇಮ್ರಾನ್ ಪಾಷಾ ಆಸ್ಪತ್ರೆಗೆ ದಾಖಲು ನಿರಾಕರಿಸಿ ಮೊಂಡಾಟ ಪ್ರದರ್ಶಿಸಿದ್ದರು. ಮನೆ ಬಳಿಗೆ ಪೊಲೀಸರು, ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಬಂದರೂ ಇಮ್ರಾನ್ ಪಾಷಾ ಮನೆಯಿಂದ ಹೊರಬರಲಿಲ್ಲ.

ಕಾರ್ಪೊರೇಟರ್ ಇಮ್ರಾನ್ ತಂದೆ ಆರೀಫ್, ಶಾಸಕ ಜಮೀರ್ ಅಹ್ಮದ್ ಮಾತನ್ನೂ ಕೇಳಲಿಲ್ಲ. ಕೊನೆಗೆ ಪೊಲೀಸರು, ನೀವು ಆಸ್ಪತ್ರೆಗೆ ಬರಲಿಲ್ಲ ಅಂದ್ರೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡ್ತೀವಿ ಎಂದು ವಾರ್ನಿಂಗ್ ಕೊಟ್ಟರು. ಸತತ ಮೂರು ಗಂಟೆಗಳ ಹೈಡ್ರಾಮಾ ಬಳಿಕ ಇಮ್ರಾನ್ ಪಾಷಾ ಪಿಪಿಇ ಕಿಟ್ ಸಮೇತ ಮನೆಯಿಂದ ಹೊರಬಂದು, ಜನರತ್ತ ಕೈಬೀಸಿ ಅಂಬುಲೆನ್ಸ್ ಹತ್ತಿ ವಿಕ್ಟೋರಿಯಾ ಆಸ್ಪತ್ರೆ ಸೇರಿದ್ದರು.

ಇಮ್ರಾನ್ ಬೆಂಬಲಿಗರನ್ನು ನಿಯಂತ್ರಿಸುವುದು ಪೊಲೀಸರಿಗೆ ಕಷ್ಟವಾಗಿಬಿಟ್ಟಿತ್ತು. ಇಮ್ರಾನ್ ಪಾಷಾ 200ಕ್ಕೂ ಹೆಚ್ಚು ಮಂದಿ ಜೊತೆ ಸಂಪರ್ಕದಲ್ಲಿದ್ದು, ಎಲ್ಲರನ್ನೂ ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗುತ್ತಿದೆ. ಕಾರ್ಪೊರೇಟರ್ ನಡುವಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇಂಥಾದ್ದೆಲ್ಲಾ ಸಹಿಸೋಕೆ ಆಗಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಶನಿವಾರ ಗರಂ ಆಗಿದ್ದರು. ಅಷ್ಟೇ ಅಲ್ಲದೆ ಕಾರ್ಪೊರೇಟರ್ ಇಮ್ರಾನ್ ಪಾಷಾ ವಿರುದ್ಧ ಕ್ರಮಕ್ಕೆ ಕಂದಾಯ ಸಚಿವ ಅಶೋಕ್ ಆಗ್ರಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *