ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಆಸ್ಪತ್ರೆಗೆ ದಾಖಲು

Public TV
1 Min Read

ನವದೆಹಲಿ: ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಸಂಬಂಧ ಮಂಗಳವಾರ ಸಂಜೆ ಟ್ವೀಟ್ ಮಾಡಿರುವ ಕೇಂದ್ರ ಸಚಿವರು, ನನಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ದೆಹಲಿ ಬಳಿಯ ಗುರುಗ್ರಾಮದ ಮೆಡಂತ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಆರೋಗ್ಯವಾಗಿರುವುದಾಗಿ ಅವರು ತಿಳಿಸಿದ್ದಾರೆ.

ಭಾನುವಾರವಷ್ಟೇ ಗೃಹ ಸಚಿವ ಅಮಿತ್ ಶಾ ಅವರು ಕೊರೊನಾ ಪಾಸಿಟಿವ್ ಬಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಧರ್ಮೆಂದ್ರ ಪ್ರಧಾನ್ ಅವರಿಗೂ ಕೋವಿಡ್ 19 ದೃಢವಾಗಿದ್ದು, ಈ ಮೂಲಕ ಕೇಂದ್ರದ ಇಬ್ಬರು ಸಚಿವರಿಗೆ ಮಹಾಮಾರಿ ಕೊರೊನಾ ಒಕ್ಕರಿಸಿಕೊಂಡಿದೆ.

ಶಾ ಅವರಿಗೆ ಕೊರೊನಾ ಬಂದಿರುವುದು ದೃಢವಾದ ಬಳಿಕ ಬುಧವಾರ ಕ್ಯಾಬಿನೆಟ್ ಸಭೆ ನಡೆದಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಪಸ್ಥಿತರಿದ್ದರು. ಈ ಹಿನ್ನೆಲೆಯಲ್ಲಿ ಸಭೆಗೆ ಭಾಗವಹಿಸಿದ ಎಲ್ಲರನ್ನೂ ಕೋವಿಡ್ 19 ಟೆಸ್ಟ್ ಮಾಡಿಕೊಳ್ಳುವಂತೆ ತಿಳಿಸಲಾಗಿತ್ತು. ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ವರದಿ ನೆಗೆಟಿವ್ ಎಂದು ಬಂದಿದ್ದು, ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಸ್ವತಃ ತಾವೇ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.

ಸಭೆಯಲ್ಲಿ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಮೋದಿ ಅಧಿಕೃತ ನಿವಾಸದಲ್ಲಿ ಎಲ್ಲಾ ಕ್ಯಾಬಿನೆಟ್ ಸಭೆಗಳು ಕೂಡ ಕಟ್ಟುನಿಟ್ಟಾದ ಕೊರೊನಾ ನಿಯಮದಂತೆ ನಡೆಯುತ್ತವೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆದರೆ ಈ ಸಭೆಯಲ್ಲಿ ಧರ್ಮೇಂದ್ರ ಪ್ರಧಾನ್ ಅವರು ಭಾಗವಹಿಸಿರಲಿಲ್ಲ. ಆದರೆ ಸಭೆಯ ಬಳಿಕ ಅವರು ಗೃಹ ಸಚಿವರನ್ನು ಭೇಟಿಯಾಗಿದ್ದರು ಎನ್ನಲಾಗಿದೆ.

ಅಮಿತ್ ಶಾ, ಪ್ರಧಾನ್ ಅಲ್ಲದೆ ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ, ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರಿಗೂ ಕೊರೊನಾ ದೃಢವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *