ಕೊರೊನಾವನ್ನೇ ಬಂಡವಾಳ ಮಾಡಿಕೊಂಡಿದ್ದ ನಕಲಿ ವೈದ್ಯ ಡಿಸಿ ಬಲೆಗೆ

Public TV
1 Min Read

ದಾವಣಗೆರೆ: ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನ ಸಹ ಭಯಭೀತರಾಗಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ನಕಲಿ ವೈದ್ಯರು, ಜನರಿಗೆ ಇಲ್ಲಸಲ್ಲದ ಚಿಕಿತ್ಸೆ ನೀಡಿ ಹಣ ವಸೂಲಿ ಮಾಡುತ್ತಿದ್ದಾರೆ. ಅಂತಹ ನಕಲಿ ವೈದ್ಯರ ಮೇಲೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ದಾಳಿ ನಡೆಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಜಿಲ್ಲೆಯ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ನಕಲಿ ವೈದ್ಯರು ಕೊರೊನಾಗೆ ಔಷಧಿ ನೀಡುತ್ತಿದ್ದಾರೆ ಎಂದು ಗ್ರಾಮದ ಯುವಕರು ಜಿಲ್ಲಾಧಿಕಾರಿಗಳ ವಾಟ್ಸಾಪ್ ಗೆ ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡಿ, ನಕಲಿ ವೈದ್ಯನನ್ನು ವಶಕ್ಕೆ ಪಡೆದಿದ್ದಾರೆ. ಈ ವೈದ್ಯ ಯಾವುದೇ ಪದವಿ ಪಡೆದಿಲ್ಲ. ಕೆಎಂಪಿಇಯಲ್ಲಿಯೂ ನೋಂದಣಿಯಾಗಿಲ್ಲ. ಆದರೂ ಕುಂಬಳೂರು ಗ್ರಾಮದ ಮನೆಯಲ್ಲಿ ಎಲ್ಲ ವೈದ್ಯಕೀಯ ಉಪಕರಣ ಇಟ್ಟುಕೊಂಡು ಚಿಕಿತ್ಸೆ ನೀಡುತ್ತಿದ್ದ. ಇದರಿಂದ ಕೊರೊನಾದಿಂದ ಬದುಕಬೇಕಾದ ಒಂದಿಬ್ಬರು ಸತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ಮಾಡಿ, ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪೊಲೀಸರು ಹೆಚ್ವಿನ ವಿಚಾರಣೆ ನಡೆಸುತ್ತಿದ್ದಾರೆ.

ಜಿಲ್ಲೆಯಲ್ಲಿರುವ ನಕಲಿ ವೈದ್ಯರು ಕೊರೊನಾಗೆ ಚಿಕಿತ್ಸೆ ನೀಡುವುದಾಗಿ ವಂಚಿಸುತ್ತಿದ್ದು, ಇಂಥ ನಕಲಿ ವೈದ್ಯರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹತೇಶ್ ಬಿಳಗಿ ಎಚ್ಚರಿಕೆ ನೀಡಿದ್ದಾರೆ. ಗ್ರಾಮೀಣ ಭಾಗದ ಜನರು ನಕಲಿ ವೈದ್ಯರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಬೇಕು. ಕೊರೊನಾ ಲಕ್ಷಣ ಬಂದ ತಕ್ಷಣ ಚಿಕಿತ್ಸೆ ಪಡೆಯಬೇಕು. ನಕಲಿ ವೈದ್ಯರ ಬಳಿ ತೆರಳಿ ಮೋಸ ಹೋಗಬೇಡಿ ಎಂದು ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ನಕಲಿ ವೈದ್ಯರ ಬಗ್ಗೆ ಪಟ್ಟಿ ತಯಾರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಂಥವರ ವಿರುದ್ಧ ಕೆಎಂಪಿಇ ಮತ್ತು ಕೊರೊನಾ ವಿಪತ್ತು ಕಾಯ್ದೆ ಅಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಕಲಿ ವೈದ್ಯರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *