ಕೋವಿಡ್‍ನಿಂದ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ – ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಭದ್ರತೆಯ

Public TV
2 Min Read

– ಸಾಂಸ್ಕೃತಿಕ ಕಾರ್ಯಕ್ರಮ ಇಲ್ಲ, ಸಾರ್ವಜನಿಕರಿಗೂ ಪ್ರವೇಶ ಇಲ್ಲ

ಬೆಂಗಳೂರು: ಇಂದು 74ನೇ ಸ್ವಾತಂತ್ರ್ಯ ದಿನಾಚರಣೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ.

ರಾಜ್ಯ ರಾಜಧಾನಿಯಲ್ಲಿ ಸಿಎಂ ಯಡಿಯೂರಪ್ಪ ಧ್ವಜಾರೋಹಣ ಮಾಡಲಿದ್ದಾರೆ. ಉಳಿದ ಜಿಲ್ಲಾ ಕೇಂದ್ರಗಳಲ್ಲಿ ಸ್ಥಳೀಯ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಲಿದ್ದಾರೆ. ಇನ್ನೂ ಕೆಲ ಜಿಲ್ಲೆಗಳಲ್ಲಿ ಡಿಸಿಗಳಿಂದ ಧ್ವಜಾರೋಹಣ ಆಗಲಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಬೆಳಗ್ಗೆ 9 ಗಂಟೆಗೆ ಸಿಎಂ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಧ್ವಜಾರೋಹಣ ಬಳಿಕ ರಾಷ್ಟ್ರಗೀತೆ, ನಂತರ ಮುಖ್ಯಮಂತ್ರಿ ಅವರು ಸ್ವಾತಂತ್ರ್ಯೋತ್ಸವದ ಭಾಷಣ ಮಾಡಲಿದ್ದಾರೆ. ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಹಾಗೂ ಡಿಜಿಪಿ ಪ್ರವೀಣ್ ಸೂದ್, ಬೆಂಗಳೂರು ನಗರ ಡಿಸಿ ಶಿವಮೂರ್ತಿ, ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್, ಹಾಗೂ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಇವರ ಜೊತೆಗೆ ಸ್ಥಳೀಯ ಶಾಸಕರು ಹಾಗೂ ಕೆಲ ಪ್ರಮುಖ ಗಣ್ಯರು ಭಾಗಿಯಾಗಲಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ. ದಿನಾಚರಣೆಗೆ ಈ ಬಾರಿ ಹೆಚ್ಚು ಜನರು ಭಾಗವಹಿಸುವಂತಿಲ್ಲ. ಅಲ್ಲದೇ ಸಾರ್ವಜನಿಕರಿಗೂ ಪ್ರವೇಶ ಇಲ್ಲವಾಗಿದೆ. ಬರೀ ಕೋವಿಡ್ ವಾರಿಯರ್ಸ್ ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. 75 ವಾರಿಯರ್ಸ್ ಗಳಿಗೆ ಕಾರ್ಯಕ್ರಮಕ್ಕೆ ಬರಲು ಆಹ್ವಾನ ನೀಡಲಾಗಿದೆ. 25 ಜನ ಕೋವಿಡ್‍ನಿಂದ ಗುಣಮುಖ ಆದವರಿಗೆ ಆಹ್ವಾನ ನೀಡಲಾಗಿದೆ.

ಈ ಬಾರಿ ಗೌರವ ವಂದನೆ ನೀಡುವ ತುಕಡಿಗಳು ಹೆಚ್ಚು ಇರೋದಿಲ್ಲ. ಬರೀ 16 ತುಕಡಿಗಳ 350 ಮಂದಿಯಿಂದ ಮಾತ್ರ ಗೌರವ ವಂದನೆ ಇರುತ್ತದೆ. ಟ್ರಾಫಿಕ್ ಪೊಲೀಸ್, ಕೆಎಸ್‌ಆರ್‌ಪಿ, ಬಿಎಸ್‍ಎಫ್, ಸಿಎಆರ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್ ಸೇರಿದಂತೆ 16 ತುಕಡಿಗಳಿಗೆ ಅವಕಾಶ ನೀಡಲಾಗಿದೆ. ಪಥ ಸಂಚಲದಲ್ಲಿ ಭಾಗವಹಿಸುವವರು ಒಂದು ದಿನ ಮುಂಚಿತವಾಗಿ ಆಂಟಿಜೆನ್ ಟೆಸ್ಟ್ ಮಾಡಿಸಿರಬೇಕು. ಜೊತೆಗೆ ಶಾಲಾ ಮಕ್ಕಳಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ಮಕ್ಕಳು ಹಾಗೂ 65 ವರ್ಷ ಮೇಲ್ಪಟ್ಟ ಮಕ್ಕಳಿಗೆ ಪ್ರವೇಶ ನಿರ್ಬಂಧ ಮಾಡಲಾಗಿದೆ.

ಸರಳ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಬಿಗಿ ಭದ್ರತೆಯನ್ನು ಮಾಡಲಾಗಿದೆ. ಬೆಂಗಳೂರಲ್ಲಿ ಗಲಭೆ ಹಿನ್ನೆಲೆಯೂ ಹೆಚ್ಚು ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ. ಯಾವುದೇ ಸಮಸ್ಯೆ ಆಗದ ರೀತಿ ಪೊಲೀಸ್ ಕಟ್ಟೆಚ್ಚರವಹಿಸಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರವನ್ನು ದೂರದರ್ಶನ ಹಾಗೂ ವೆಬ್ ಕ್ಯಾಸ್ಟ್ ಮೂಲಕ ಪ್ರಸಾರ ಮಾಡಲಾಗುತ್ತದೆ.

9 ಜನ ಡಿಸಿಪಿ ಸೇರಿದಂತೆ 680 ಜನ ಪೊಲೀಸರಿಂದ ಭದ್ರತೆ ನಿಯೋಜನೆ ಮಾಡಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಅಲ್ಲದೇ 70 ಸಿಸಿ ಕ್ಯಾಮರಾಗಳು ಹಾಗೂ 2 ಬ್ಯಾಗೇಜ್ ಸ್ಕ್ಯಾನರ್‌ಗಳು ವ್ಯವಸ್ಥೆ ಮಾಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *