ಗ್ಯಾಂಗ್‍ಸ್ಟರ್ ವಿಕಾಸ್ ದುಬೆ ಎನ್‍ಕೌಂಟರ್- ಎಸ್ಕೇಪ್ ಆಗಲು ಯತ್ನಿಸ್ತಿದ್ದಂತೆ ಶೂಟೌಟ್

Public TV
2 Min Read

ಲಕ್ನೋ: ಎಂಟು ಪೊಲೀಸರನ್ನು ಹತ್ಯೆ ಮಾಡಿದ್ದ ಗ್ಯಾಂಗ್‍ಸ್ಟರ್ ವಿಕಾಸ್ ದುಬೆಯನ್ನು ಉತ್ತರಪ್ರದೇಶದ ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ.

ವಿಕಾಸ್ ದುಬೆಯನ್ನು ಬಂಧಿಸಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (ಎಸ್‍ಟಿಎಫ್) ಮಧ್ಯ ಪ್ರದೇಶದಿಂದ ಕಾನ್ಪುರಕ್ಕೆ ವಾಪಸ್ ಕರೆತರಲಾಗುತ್ತಿತ್ತು. ಆದರೆ ಇಂದು ಮುಂಜಾನೆ ಕಾನ್ಪುರದ ಬಾರ್ರಾ ಪೊಲೀಸ್ ವಲಯಕ್ಕೆ ತಲುಪುತ್ತಿದ್ದಂತೆ ವಿಕಾಸ್ ದುಬೆ ಕುಳಿತಿದ್ದ ವಾಹನವು ಭಾರೀ ಮಳೆಯಿಂದಾಗಿ ರಸ್ತೆಯಲ್ಲಿ ಪಲ್ಟಿಯಾಗಿದೆ.

ಆಗ ಪೊಲೀಸರು ವಿಕಾಸ್‍ನನ್ನು ವಾಹನದಿಂದ ಹೊರಗೆ ಎಳೆದುಕೊಂಡಿದ್ದಾರೆ. ಈ ವೇಳೆ ಆರೋಪಿ ಗಾಯಗೊಂಡ ಪೊಲೀಸರೊಬ್ಬರಿಂದ ಬಂದೂಕನ್ನು ಕಿತ್ತುಕೊಂಡು ಪೊಲೀಸರ ಮೇಲೆ ಗುಂಡು ಹಾರಿಸಲು ಯತ್ನಿಸಿದ್ದಾನೆ. ಆಗ ಪೊಲೀಸರು ಕೂಡ ಗುಂಡಿನ ದಾಳಿ ಮಾಡಿದ್ದಾರೆ. ಈ ಶೂಟೌಟ್‍ನಲ್ಲಿ ಪೊಲೀಸರು ಆರೋಪಿ ವಿಕಾಸ್ ದುಬೆಯನ್ನ ಎನ್‍ಕೌಂಟರ್ ಮಾಡಿದ್ದಾರೆ. ಪರಿಣಾಮ ಗ್ಯಾಂಗ್‍ಸ್ಟರ್ ವಿಕಾಸ್ ದುಬೆ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ.

ಪೊಲೀಸ್ ಕಸ್ಟಡಿಯಲ್ಲಿರುವ ಉತ್ತರ ಪ್ರದೇಶದ ಕಾನ್ಪುರದ ಪೊಲೀಸ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆಯ ಮತ್ತಿಬ್ಬರು ಸಹಚರರನ್ನು ಪೊಲೀಸರು ಗುರುವಾರ ಎನ್‍ಕೌಂಟರ್ ಮಾಡಿದ್ದಾರೆ. ನಿನ್ನೆಯಷ್ಟೇ ಕಾನ್ಪುರ ಎಕ್‍ಕೌಂಟರ್ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆಯನ್ನು ಮಧ್ಯಪ್ರದೇಶದ ಉಜ್ಜೈನ್‍ನಲ್ಲಿ ಬಂಧಿಸಲಾಗಿತ್ತು. ಗುರುವಾರ ಬೆಳಗ್ಗೆ ವಿಕಾಸ್ ದುಬೆ ಉಜ್ಜೈನ್ ನಲ್ಲಿರುವ ಮಹಾಕಾಲ್ ದೇವಸ್ಥಾನಕ್ಕೆ ಹೋಗಿದ್ದನು. ದೇವಸ್ಥಾನದ ಭದ್ರತಾ ಸಿಬ್ಬಂದಿ ದುಬೆಯನ್ನು ಗುರುತಿಸಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ದೇವಸ್ಥಾನದಿಂದ ಹೊರ ಬರೋಷ್ಟರಲ್ಲಿ ಬಂದ ಪೊಲೀಸರು ಆತನನ್ನು ಬಂಧಿಸಿದ್ದರು.

ಅಲ್ಲದೇ ಆರೋಪಿ ವಿಕಾಸ್ ದುಬೆಯ ಅನುಚರರಾದ ಪ್ರಭಾತ್ ಮಿಶ್ರಾ, ಭವನ್ ಶುಕ್ಲಾರನ್ನು ಪೊಲೀಸರು ಕಾನ್ಪುರಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಮಾರ್ಗ ಮಧ್ಯೆ ಪೊಲೀಸರಿಂದ ಪಿಸ್ತೂಲ್ ಕಸಿದುಕೊಂಡಿದ್ದ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದರು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಶೂಟೌಟ್ ಮಾಡಿದ್ದ ಪರಿಣಾಮ ಆರೋಪಿಗಳು ಸಾವನ್ನಪ್ಪಿದ್ದಾರೆ ಎಂದು ಕಾನ್ಪೂರ ಎಡಿಜಿ ಪ್ರಶಾಂತ್ ಕುಮಾರ್ ತಿಳಿಸಿದ್ದರು.

ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲೆಂದು ದಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವಿಚಾರ ಮೊದಲೇ ತಿಳಿದಿದ್ದ ವಿಕಾಸ್ ದುಬೆ ಬೆಂಬಲಿಗರು ರಸ್ತೆಗೆ ಅಡ್ಡಲಾಗಿ, ಕಲ್ಲು ಹಾಗೂ ಇಟ್ಟಿಗೆಗಳನ್ನು ಇಟ್ಟಿದ್ದರು. ಇದನ್ನು ತೆರವುಗೊಳಿಸಿ ಪೊಲೀಸರು ದುಬೆ ಅವಿತಿದ್ದ ಮನೆಯತ್ತ ಆಗಮಿಸುತ್ತಿದ್ದರು. ಈ ವೇಳೆ ಗುಂಡಿನ ಮಳೆ ಸುರಿಸಿದ್ದಾರೆ. ಪರಿಣಾಮ ಡಿವೈಎಸ್ಪಿ ದೇವೇಂದ್ರ ಮಿಶ್ರಾ, ಮೂವರು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಗಳು ಹಾಗೂ 4 ಪೊಲೀಸರು ಮೃತಪಟ್ಟಿದ್ದರು. ಇದೇ ಸಂದರ್ಭದಲ್ಲಿ ದುಬೆ ಬೆಂಬಲಿಗರು ಪೊಲೀಸರ ಬಳಿಯಿದ್ದ ಎಕೆ-47 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದರು.

Share This Article
Leave a Comment

Leave a Reply

Your email address will not be published. Required fields are marked *