ತಪ್ಪೊಪ್ಪಿಕೊಂಡು, ಬಹಿರಂಗವಾಗಿ ಕ್ಷಮೆಯಾಚಿಸಿದ ಬಳ್ಳಾರಿ ಜಿಲ್ಲಾಧಿಕಾರಿ

Public TV
1 Min Read

– ಅಮಾನವೀಯ ರೀತಿಯಲ್ಲಿ ಶವ ಸಂಸ್ಕಾರ ಪ್ರಕರಣ
– ಕೊರೊನಾದಿಂದ ಸಾವನ್ನಪ್ಪಿದವರ ನಿರ್ವಹಣೆಗೆ ಬೇರೆ ತಂಡ

ಬಳ್ಳಾರಿ: ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯ ಸಂಸ್ಕಾರ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಕುರಿತು ಇದೀಗ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ನಕುಲ್ ಅವರು ಪ್ರತಿಕ್ರಿಯಿಸಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ತಪ್ಪಿಸ್ಥರ ವಿರಿದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಸೋಮವಾರ ಒಂದೇ ದಿನ ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾಗೆ 9 ಜನ ಸಾವನ್ನಪ್ಪಿದ್ದರು. ಇವರ ಮೃತ ದೇಹವನ್ನು ಅಮಾನವೀಯವಾಗಿ ಬೇಕಾಬಿಟ್ಟಿಯಾಗಿ ಗುಂಡಿಗೆ ಎಸೆದು ಮಣ್ಣು ಮಾಡಲಾಗಿತ್ತು. ಈ ದೃಶ್ಯವನ್ನು ಕಂಡರೆ ಎಂಥವರಿಗೂ ಕರುಳು ಹಿಂಡುವಂತಿತ್ತು. ಒಂದೇ ಬಾರಿ ಶವ ಸಂಸ್ಕಾರ ಮಾಡಬೇಕಾದರೆ ಆರೋಗ್ಯ ಇಲಾಖೆಯ ಸಿಬ್ಬಂದಿ ಶವವನ್ನು ಮೇಲಿಂದ ಎಸೆದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ವಿಡಿಯೋ ವೈರಲ್ ಆಗಿತ್ತು. ಅಲ್ಲದೆ ಆಕ್ರೋಶ ಸಹ ವ್ಯಕ್ತವಾಗಿತ್ತು. ಈ ವಿಡಿಯೋ ಕುರಿತು ಜಿಲ್ಲಾಧಿಕಾರಿ ಸಹ ಬೇಸರ ವ್ಯಕ್ತಪಡಿಸಿದ್ದರು.

ಇದೀಗ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಆದೇಶಿಸಿದ್ದು, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ನೇತೃತ್ವದಲ್ಲಿ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಎರಡು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಬೇಸರ ವ್ಯಕ್ತಪಡಿಸಿದ್ದು, ಬಹಿರಂಗವಾಗಿ ಕುಟುಂಬಸ್ಥರು ಹಾಗೂ ಸಾರ್ವಜನಿಕರ ಬಳಿ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ಮಾರ್ಚುರಿ ಸ್ಟ್ಯಾಫ್ ಬದಲಾವಣೆ ಮಾಡಿ ಡಿಸಿ ಆದೇಶಿಸಿದ್ದಾರೆ. ಅಲ್ಲದೆ ಇನ್ನು ಮುಂದೆ ಶವಗಳ ನಿರ್ವಹಣೆಗೆ ವಿಧಿವಿಜ್ಞಾನ ಮತ್ತು ವಿಮ್ಸ್‍ನ ನುರಿತ ತಂಡ ನೇಮಕ ಮಾಡುವಂತೆ ಸೂಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *