ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿ ತೆಂಕಲಗೋಡು ಮಠದ ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮೀಜಿ (68) ಅನಾರೋಗ್ಯದಿಂದ ನಿನ್ನೆ ದೈವಾಧೀನರಾಗಿದ್ದು ಇಂದು ಅವರ ಅಂತ್ಯಕ್ರಿಯೆ ನಡೆಯಲಿದೆ.
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಮುಂಜಾನೆಯಿಂದ ಪರಿಸ್ಥಿತಿ ಬಿಗಡಾಯಿಸಿದ್ದು ಕೃತಕ ಉಸಿರಾಟದ ನೆರವಿನಲ್ಲಿದ್ದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ಮೃತಪಟ್ಟಿದ್ದಾರೆ. ಅಪಾರವಾದ ವಿದ್ವತ್ ಹೊಂದಿದ್ದ ಸ್ವಾಮೀಜಿಗಳು ಹಿಂದೂ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ವಿಶ್ವ ಹಿಂದೂ ಪರಿಷತ್ ಹಾಗೂ `ಭಜರಂಗದಳದ ಕಾರ್ಯಕ್ರಮಗಳಲ್ಲಿ ಆಗಾಗ ಭಾಗವಹಿಸಿ ಉಪನ್ಯಾಸ ನೀಡುತ್ತಿದ್ದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೆಂದು ಸ್ವಾಮಿಜಿಯವರು 80ರ ದಶಕದಿಂದಲೆ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಸ್ವಾಮೀಜಿ ನಿಧನಕ್ಕೆ ಅಪಾರವಾದ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಯಸಳೂರಿನಲ್ಲಿ ಇಂದು ಅಂತ್ಯ ಸಂಸ್ಕಾರ ನಡೆಯಲಿದ್ದು ನಾಡಿನ ವಿವಿಧೆಡೆಯಿಂದ ಆಗಮಿಸಿರುವ ಸಂತರು, ಗಣ್ಯರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.