ದೂರುದಾರ, ಪಿಎಸ್‍ಐ ವಿರುದ್ಧ 24 ಗಂಟೆಯ ಒಳಗಡೆ ಕ್ರಮ ಕೈಗೊಳ್ಳಿ – ಡಿಕೆಶಿ ಆಗ್ರಹ

Public TV
2 Min Read

– ಸೋನಿಯಾ ಗಾಂಧಿ ವಿರುದ್ಧ ಕೇಸ್ ದಾಖಲು
– ಸಂಬಂಧಿ ಪೊಲೀಸ್ ಮೂಲಕ ಎಫ್‍ಐಆರ್

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವ್ಯಕ್ತಿ ಮತ್ತು ಪ್ರಕರಣ ದಾಖಲಿಸಿಕೊಂಡ ಪೊಲೀಸ್ ಅಧಿಕಾರಿಯ ವಿರುದ್ಧ 24 ಗಂಟೆಯ ಒಳಗಡೆ ಕ್ರಮ ಜರುಗಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ಸೋನಿಯಾ ಗಾಂಧಿ ವಿರುದ್ಧ ಎಫ್‍ಐಆರ್ ದಾಖಲಾದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಇಂದು ಸಂಜೆ ಕೃಷ್ಣಾದಲ್ಲಿ ಡಿಕೆಶಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಪ್ರಕರಣವನ್ನು ಕೈ ಬಿಡುವಂತೆ ಮನವಿ ಮಾಡಿಕೊಂಡರು.

 

 

ಸಿಎಂ ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯುವಕ ಪ್ರವೀಣ್ ತನ್ನ ಸಂಬಂಧಿ ಪೊಲೀಸ್ ಮೂಲಕ ಎಫ್‍ಐಆರ್ ದಾಖಲು ಮಾಡಿಸಿದ್ದಾರೆ. ಇದೊಂದು ಗಂಭೀರ ವಿಚಾರ. ದ್ವೇಷದ ಮನೋಭಾವ, ಅಧಿಕಾರ ದುರುಪಯೋಗ ಮಾಡಿಕೊಳ್ಳುವ ವಿಚಾರ. ವಿರೋಧ ಪಕ್ಷ ಕೆಲಸ ಮಾಡದೇ ಇರಲು ಈ ರೀತಿಯ ದೂರು ದಾಖಲಾಗಿದೆ ಎಂದು ಹೇಳಿದರು.

ಸೊನಿಯಾ ಗಾಂಧಿ ವಿರುದ್ದ ಎಫ್ ಐಆರ್ ದಾಖಲು ಮಾಡಿರೋದು ಇಡೀ ದೇಶವೇ ಆಶ್ಚರ್ಯ ಪಡುವ ಪ್ರಸಂಗ. ನಮ್ಮ ನಾಯಕಿ ತಮ್ಮ ಬಳಿ ಇರುವ ಮಾಹಿತಿಯನ್ನ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ನಿಖರ ಮಾಹಿತಿ ಮೇರೆಗೆ ನಮ್ಮ ನಾಯಕಿ ಪೋಸ್ಟ್ ಮಾಡಿದ್ದಾರೆ ಎಂದು ತಿಳಿಸಿದರು.

ಗೃಹ ಸಚಿವರ ಜೊತೆ ಬೆಳಗ್ಗೆ ಮಾತನಾಡಿದ್ದೇನೆ. ಇದೊಂದು ಸೂಕ್ಷ್ಮ ವಿಚಾರವಾದ ಹಿನ್ನೆಲೆಯಲ್ಲಿ ಸಿಎಂ ಅವರನ್ನು ಭೇಟಿ ಮಾಡಿದ್ದೇವೆ. ನಾವು ಹೋರಾಟ ಮಾಡುವ ಮುನ್ನ ಸಿಎಂ ಭೇಟಿ ಮಾಡಿ ಮನವಿ ಮಾಡಿದ್ದೇವೆ. ದೂರು ನೀಡಿದ ವ್ಯಕ್ತಿ ಮತ್ತು ಎಫ್‍ಐಆರ್ ದಾಖಲಿಸಿದ ಪಿಎಸ್‍ಐ ವಿರುದ್ಧ 24 ಗಂಟೆಯೊಳಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮಾತನಾಡುವ ವೇಳೆ ಸಿಎಂ ಅವರು ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇನೆ. ಕೂಡಲೇ ಬಿ ರಿಪೋರ್ಟ್ ಹಾಕುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದು ಡಿಕೆಶಿ ತಿಳಿಸಿದರು.

ಬಿ ರಿಪೋರ್ಟ್ ಎಂದರೇನು?
ದಾಖಲಾದ ಪ್ರಕರಣಕ್ಕೆ ಯಾವುದೇ ಸಾಕ್ಷ್ಯಗಳು ಸಿಗದ ಹಿನ್ನೆಲೆಯಲ್ಲಿ ಬಿ ರಿಪೋರ್ಟ್ ಹಾಕಲಾಗುತ್ತದೆ.

ಏನಿದು ಪ್ರಕರಣ?
ಕೋವಿಡ್-19 ಸಂದರ್ಭದಲ್ಲಿ ಪ್ರಧಾನಿ ಮೋದಿ ಪಿಎಂ ಕೇರ್ ಫಂಡ್ ಸದ್ಬಳಕೆ ಮಾಡುತ್ತಿಲ್ಲ. ಬದಲಾಗಿ ಬಂದಿರುವ ಹಣವನ್ನು ವಿದೇಶ ಪ್ರಯಾಣಕ್ಕೆ ಬಳಸಲಾಗುತ್ತದೆ. ಪಿಎಂ ಕೇರ್ ಫಂಡ್ ಅನ್ನು ಪ್ರಧಾನಿ ಮೋದಿ ಅವರಿಗೋಸ್ಕರ ಮಾಡಲಾಗಿದೆ. ದಾನಿಗಳಿಂದ ಬಂದ ಹಣವನ್ನು ಯಾವುದೇ ಜನ ಸಾಮಾನ್ಯರಿಗೆ ಬಳಸುತ್ತಿಲ್ಲವೆಂದು ಟ್ವಿಟ್ಟರ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ವಕೀಲ ಪ್ರವೀಣ್ ದೂರು ನೀಡಿದ್ದರು. ಈ ಸಂಬಂಧ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ವಿರುದ್ಧ ಜಿಲ್ಲೆಯ ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

‘ಪಿಎಂ ಕೇರ್ ಫ್ರಾಡ್’ ಎಂಬ ಶೀರ್ಷಿಕೆಯೊಂದಿಗೆ ಪ್ರಧಾನಿ ಮೋದಿ ಅವರ ವಿರುದ್ಧ ಅವಹೇಳನಕಾರಿ ಗಾಳಿ ಸುದ್ದಿಯನ್ನು ಕಾಂಗ್ರೆಸ್ ಮಾಡಿದೆ. ಈ ಎಲ್ಲಾ ಟ್ವೀಟ್‍ಗಳು ಉದ್ದೇಶ ಪೂರ್ವಕವಾಗಿ ಭಾರತ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರನ್ನು ಅವಹೇಳನ ಮಾಡುವಂತಿವೆ. ಜೊತೆಗೆ ನಾಗರೀಕರನ್ನು ಸರ್ಕಾರದ ವಿರುದ್ಧ ಎತ್ತಿ ಕಟ್ಟುವ ಸುಳ್ಳು ಸಂದೇಶವಾಗಿದೆ ಎಂದು ವಕೀಲ ಪ್ರವೀಣ್ ದೂರಿನಲ್ಲಿ ಉಲ್ಲೇಖಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *