ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದರೇ ಮತ್ತೊಂದು ಕಡೆ ಕ್ವಾರಂಟೈನ್ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ಸಿಎಂ ಅರವಿಂದ್ ಕೇಜ್ರಿವಾಲ್ ನಡುವೆ ಮತ್ತೆ ಜಟಾಪಟಿ ಶುರುವಾಗಿದೆ
ದೆಹಲಿಯಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ದೆಹಲಿ ಆಗಮಿಸುವವರಿಗೆ ಐದು ದಿನ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಆದೇಶ ಹೊರಡಿಸಿದ್ದಾರೆ. ಈ ಹೊಸ ಆದೇಶ ವಿವಾದಕ್ಕೆ ಕಾರಣವಾಗಿದ್ದು, ಸಿಎಂ ಅರವಿಂದ್ ಕೇಜ್ರಿವಾಲ್ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಐದು ದಿನ ಸಾಂಸ್ಥಿಕ ಕ್ವಾರಂಟೈನ್ ವ್ಯವಸ್ಥೆ ಅವಶ್ಯಕತೆ ಇಲ್ಲ ಎಂದು ಆಗ್ರಹಿಸಿದ್ದಾರೆ.
ಹೊಸ ಆದೇಶ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ದೆಹಲಿ ತುರ್ತು ನಿರ್ವಹಣಾ ಪ್ರಾಧಿಕಾರದ ಜೊತೆಗೆ ಸಭೆ ನಡೆಸಿದರು. ಸಭೆಯಲ್ಲಿ ಅನಿಲ್ ಬೈಜಾಲ್ ಆದೇಶದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಸಣ್ಣ ಪ್ರಮಾಣ ಗುಣಲಕ್ಷಣಗಳು ಇದ್ದರೇ ಮನೆಯಲ್ಲಿ ಕ್ವಾರಂಟೈನ್ ಮಾಡಲು ಐಸಿಎಂಆರ್ ಸೂಚನೆ ನೀಡಿದೆ. ಈ ಹಂತದಲ್ಲಿ ದೆಹಲಿಗೆ ಆಗಮಿಸಿದವರಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡುವ ಅವಶ್ಯಕ ಇರಲಿಲ್ಲ ಎಂದು ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಹಂತದಲ್ಲೇ ಆಸ್ಪತ್ರೆ ಮತ್ತು ಆರೋಗ್ಯ ಸಿಬ್ಬಂದಿ ಕೊರತೆ ಸೃಷ್ಟಿಯಾಗಿದೆ. ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿದರೆ ಅವರಿಗೆ ಚಿಕಿತ್ಸೆ ನೀಡುವುದು ಹೇಗೆ ಆರೋಗ್ಯ ಸಿಬ್ಬಂದಿಯನ್ನು ಹೇಗೆ ನಿಯೋಜಿಸುವುದು ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ 500 ರೈಲ್ವೆ ಕೋಚ್ ಗಳನ್ನು ನೀಡಿದೆ. ಆದರೆ ದೆಹಲಿಯಲ್ಲಿರುವ ಹವಾಮಾನ ಬಿಸಿಲಿನ ತಾಪಮಾನಕ್ಕೆ ಕೋಚ್ ಗಳಲ್ಲಿ ಕ್ವಾರಂಟೈನ್ ಮಾಡುವುದು ಕಷ್ಟ. ಹೊಸ ಆದೇಶಗಳಿಂದ ತೊಂದರೆಗಳು ಹೆಚ್ಚು ಹೀಗಾಗಿ ಆದೇಶ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಹಿಂದೆ ದೆಹಲಿ ಆಸ್ಪತ್ರೆಗಳಲ್ಲಿ ದೆಹಲಿ ನಾಗರಿಕರಿಗೆ ಮಾತ್ರ ಚಿಕಿತ್ಸೆ ನೀಡಲಾಗುವುದು ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಬಹಿರಂಗವಾಗಿ ವಿರೋಧಿಸಿದ್ದ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಸರ್ಕಾರದ ಆದೇಶ ರದ್ದು ಮಾಡಿದ್ದರು. ಈ ವೇಳೆಯೂ ಗವರ್ನರ್ ಮತ್ತು ಸಿಎಂ ನಡುವೆ ಮಾತಿನ ಸಮರ ನಡೆದಿತ್ತು.