ನಾನು ಬಿಜೆಪಿ ಶಿಸ್ತಿನ ಸಿಪಾಯಿ, ಡಿಸಿಎಂ ಸ್ಥಾನಕ್ಕೆ ಲಾಬಿ ಮಾಡಲ್ಲ: ರಾಮುಲು

Public TV
1 Min Read

ಬಳ್ಳಾರಿ: ಡಿಸಿಎಂ ಸ್ಥಾನಕ್ಕಾಗಿ ನಾನು ಲಾಬಿ ನಡೆಸಿದ್ದೇನೆ ಎನ್ನುವುದು ಶುದ್ಧ ಸುಳ್ಳು, ನಾನೊಬ್ಬ ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷದಲ್ಲಿ ಯಾವುದೇ ಸ್ಥಾನ ಕೊಟ್ಟರೂ ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಡಿಸಿಎಂ ಆಗಬೇಕು ಎನ್ನುವುದು ನನ್ನನ್ನು ನಂಬಿರುವ ಜನರ ಆಸೆ. ಆದರೆ ಡಿಸಿಎನ್ ಆಗಬೇಕೆಂದು ಯಾರ ಬಳಿಯೂ ಹೇಳಿಲ್ಲ, ಯಾವುದೇ ಬೇಡಿಕೆಯನ್ನು ಇಟ್ಟಿಲ್ಲ ಎಂದಿದ್ದಾರೆ.

ಬುಧವಾರ ನಡೆದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಿಂದ ದೂರ ಉಳಿದಿದ್ದಾರೆ ಎನ್ನುವ ಸುದ್ದಿ ಸುಳ್ಳು. ನನಗೆ ವೈಯಕ್ತಿಕ ಕೆಲಸ ಇತ್ತು. ಕಳೆದ ಒಂದು ವರ್ಷದಿಂದ ಮನೆಯಲ್ಲಿ ದೇವರ ಕಾರ್ಯ ಮಾಡಬೇಕಿತ್ತು. ಹೀಗಾಗಿ ನಾನು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಿಲ್ಲ ಎಂದು ಹೇಳುವ ಮೂಲಕ ಡಿಸಿಎಂ ಸ್ಥಾನ ಕೈತಪ್ಪಿದ್ದು, ಮುನಿಸಿಕೊಂಡಿದ್ದಾರೆ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಸರಳ, ಸಜ್ಜನಿಕೆಗೆ ಹೆಸರಾದ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಡಿಸಿಎಂ ಹುದ್ದೆ ನೀಡುವ ವಿಚಾರ ಪಕ್ಷಕ್ಕೆ ಬಿಟ್ಟಿದ್ದು. ನಾನು ಯಾರ ಮೇಲೂ ಮುನಿಸಿಕೊಂಡಿಲ್ಲ, ಲಾಬಿನೂ ಮಾಡಿಲ್ಲ, ಮಾಡೋದು ಇಲ್ಲ. ನಾನು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತ, ಪಕ್ಷದ ನಿಷ್ಟೆ, ತತ್ವ ಸಿದ್ಧಾಂತಗಳನ್ನು ಪಾಲಿಸುತ್ತಾ, ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ನಾನು ಜನರಿಂದ ಮೇಲೆ ಬಂದಿದ್ದೇನೆ, ಪಕ್ಷ ನನಗೆ ಸೂಕ್ತ ಅವಕಾಶ ನೀಡಲಿದೆ ಎನ್ನುವ ನಂಬಿಕೆ ಇದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *