ನಾಲ್ಕೈದು ದಿನ ಮತ್ತೆ ಭಾರೀ ಮಳೆ, ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Public TV
1 Min Read

– ಇಂದು, ನಾಳೆ ಹೆಚ್ಚು ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ ನಾಲ್ಕೈದು ದಿನಗಳಲ್ಲಿ ರಾಜ್ಯದ ಬಹುತೇಕ ಎಲ್ಲ ಕಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ಮುನ್ನೆಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಮಳೆ ಸ್ಥಿತಿಗತಿ ಕುರಿತು ಮಾಹಿತಿ ನೀಡಿರುವ ಅವರು, ಬಂಗಾಳಕೊಲ್ಲಿಯ ಮಧ್ಯ ಭಾಗದಲ್ಲಿ 5.8 ಕಿಲೋಮೀಟರ್ ಎತ್ತರದಲ್ಲಿ ಸಕ್ರ್ಯೂಲೇಷನ್ ಇದೆ. ಮುಂದಿನ 24 ಗಂಟೆಗಳಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಅಕ್ಟೋಬರ್ 19 ರಿಂದ 23 ರವರೆಗೆ ಕರ್ನಾಟಕದ ಕರಾವಳಿಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ಭಾರೀ ಮಳೆ ಹಿನ್ನೆಲೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ 20-23ರ ವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 19-23 ರವರೆಗೆ ಮಳೆಯಾಗುವ ನಿರೀಕ್ಷೆ ಇದೆ. ಅಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಬೀದರ್, ಚಿಕ್ಕಬಳ್ಳಾಪುರ, ಗದಗ ಜಿಲ್ಲೆಗಳಿಗೆ ಅಕ್ಟೋಬರ್ 19-22 ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಲ್ಲಿ ಇಂದು ಹಾಗೂ ಮಂಗಳವಾರ ಮಳೆಯಾಗುವ ಸಾಧ್ಯತೆ ಇದೆ.

ವಾಯುಭಾರ ಕುಸಿತ ಹಿನ್ನೆಲೆ ಅಕ್ಟೋಬರ್ 21, 22 ಹಾಗೂ 23ರಂದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಬೆಂಗಳೂರಲ್ಲಿ ನಿನ್ನೆ 4 ಸೆಂ.ಮೀ. ಮಳೆಯಾಗಿದೆ. ಇಂದು ಹಾಗೂ ನಾಳೆ ಹೆಚ್ಚಿನ ಮಳೆಯಾಗಲಿದೆ ಎಂದು ಸಿ.ಎಸ್.ಪಾಟೀಲ್ ಎಚ್ಚರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *