ಪಕ್ಷದಲ್ಲಿ ಗೊಂದಲವಿಲ್ಲ, ಅಧಿಕಾರ ಹಿಡಿಯುವುದೇ ನಮ್ಮ ಗುರಿ: ಡಿ.ಕೆ ಸುರೇಶ್

Public TV
2 Min Read

ಹಾಸನ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ನಾಯಕತ್ವ ಗೊಂದಲ ಇಲ್ಲ, ಅಧಿಕಾರ ಹಿಡಿಯುವುದೇ ನಮ್ಮ ಗುರಿಯಾಗಿದೆ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರವಾಗಿ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಅಭಿಮಾನಿಗಳು ಮತ್ತು ಅನುಯಾಯಿಗಳು ತಮ್ಮ ಮುಖಂಡರನ್ನು ಓಲೈಸುವುದಕ್ಕಾಗಿ ಮನದಾಳದ ಮಾತುಗಳನ್ನು ಹೇಳುತ್ತಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷದ ಗುರಿ ಏನಿದ್ದರೂ 2023ರ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಹಿಡಿಯುವುದೇ ಆಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕರು ಕಾರ್ಯಕರ್ತರು ಬಿಜೆಪಿ ವಿರುದ್ಧ ಹೋರಾಡಿ ಅಧಿಕಾರಕ್ಕೆ ಬರಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿ ಯಾರು ಎಂದು ಚುನಾವಣೆ ನಂತರ ಅಧಿಕಾರ ಹಿಡಿಯುವ ವೇಳೆ ಕೇಂದ್ರದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಮುಂದಿನ ಜುಲೈ 23ಕ್ಕೆ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರೈಕೆ ಆಗಲಿದೆ ರಾಜ್ಯ ಬಿಜೆಪಿ ಸರ್ಕಾರ ಒಟ್ಟಾಗಿ ಹೇಳಬೇಕಾದರೆ 10 ಮಾರ್ಕ್ಸ್ ಕೂಡ ಸಿಗುವುದಿಲ್ಲ. ಇದಕ್ಕೆ ಕಾರಣ ಅವರ ಆಂತರಿಕ ಕಿತ್ತಾಟ, ಮಂತ್ರಿಗಳು ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ ಹಾಗೂ ತಮ್ಮ ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯವನ್ನು ಮರೆತು ಹಾಗೂ ಸಚಿವ ಸ್ಥಾನದ ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದಾರೆ. ರಾಜ್ಯದಲ್ಲಿ ಎರಡು ವರ್ಷಗಳಿಂದ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ದೂರಿದರು.

ಬಿಜೆಪಿ ಸರ್ಕಾರದ ಎಲ್ಲಾ ಸಚಿವರು ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಪಕ್ಷದಲ್ಲಿ ಗೊಂದಲಗಳಿರುವುದು ಪ್ರತಿನಿತ್ಯ ನಾವು ನೋಡುತ್ತಲೇ ಇದ್ದೇವೆ. ಇದನ್ನು ಜನರು ಸಹ ಗಮನಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ. ಬಿಜೆಪಿ ಸರ್ಕಾರ ಬೆಲೆ ಏರಿಕೆ ನಿಯಂತ್ರಣ, ಉದ್ಯೋಗ ಸೃಷ್ಟಿ ಮಾಡುವಲ್ಲಿ ವಿಫಲವಾಗಿದ್ದು, ಎರಡು ವರ್ಷಗಳಿಂದ ಹಿಂದೆಂದೂ ಕಾಣದಂತಹ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಇಂತಹ ಕೆಟ್ಟ ಪರಿಸ್ಥಿತಿಯನ್ನು ನಾವು ಕಾಣುವಂತಾಗಿದೆ ಎಂದು ಹೇಳಿದ ಅವರು, ಬಿಜೆಪಿ ಪಕ್ಷದ ಶಾಸಕರೇ ಸರ್ಕಾರದ ಕೆಟ್ಟ ಆಡಳಿತದ ಬಗ್ಗೆ ಪ್ರಶ್ನಿಸುತ್ತಿದ್ದಾರೆ ಎಂದು ಟೀಕಿಸಿದರು

Share This Article
Leave a Comment

Leave a Reply

Your email address will not be published. Required fields are marked *