ಪೆಟ್ರೋಲ್, ಡೀಸೆಲ್ ಸುಂಕ ವಿನಾಯಿತಿ ಪ್ರಸ್ತಾಪ ಇಲ್ಲ: ಸಿಎಂ

Public TV
2 Min Read

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕದ ವಿನಾಯಿತಿ ಕುರಿತು ಯಾವುದೇ ಪ್ರಸ್ತಾಪವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಈ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ದರ ಏರಿಕೆ ಕುರಿತು ಪ್ರಸ್ತಾಪಿಸಿದರು. ರಾಜ್ಯದಿಂದ ಸುಂಕ ವಿನಾಯಿತಿಯ ಪ್ರಸ್ತಾಪ ಇಲ್ಲ. ಆ ರೀತಿಯ ಯಾವುದೇ ವಿಚಾರ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮಹಾರಾಷ್ಟ್ರ ಮಾದರಿಯಲ್ಲಿ ಲಾಕ್‍ಡೌನ್ ಸಡಿಲಿಕೆ ಕುರಿತು ಮಾತನಾಡಿದ ಸಿಎಂ, ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಯಾವ ವಿನಾಯಿತಿ ಕೊಡಬೇಕು ಎಂದು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಮೂಲಕ ಲಾಕ್‍ಡೌನ್ ಅವಧಿ ಮುಗಿದ ಕೂಡಲೇ ನಾನ್ ಹಾಟ್ ಸ್ಪಾಟ್ ಜಿಲ್ಲೆಗಳಲ್ಲಿ ರಿಲ್ಯಾಕ್ಸೇಷನ್ ಕೊಡುವ ಸುಳಿವು ನೀಡಿದರು. ಇದನ್ನೂ ಓದಿ: ಅನ್‍ಲಾಕ್ ಸುಳಿವು ನೀಡಿದ್ರು ಸಿಎಂ ಯಡಿಯೂರಪ್ಪ

ಮೈಸೂರು ಐಎಎಸ್ ಅಧಿಕಾರಿಗಳ ಜಟಾಪಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ, ಮುಖ್ಯ ಕಾರ್ಯದರ್ಶಿಗಳು ನಿನ್ನೆ ಹೋಗಿ ಚರ್ಚೆ ಮಾಡಿ ಬಂದಿದ್ದಾರೆ. ಈ ಸಂಬಂಧ ಮುಖ್ಯಕಾರ್ಯದರ್ಶಿಗಳು ಮಾಹಿತಿ ಕೊಟ್ಟಿದ್ದಾರೆ. ಮೈಸೂರು ವಿಚಾರದ ಬಗ್ಗೆ ಇಂದು ಸಂಜೆ ಕೂತು ಚರ್ಚೆ ಮಾಡುತ್ತೇವೆ. ಬಳಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಟ್ಟಡ ನಿರ್ಮಾಣ ಕಾರ್ಮಿಕರು ಮತ್ತು ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರವು ಇಂದಿನಿಂದ ಲಾಕ್‍ಡೌನ್ ಪರಿಹಾರ ವಿತರಿಸುತ್ತಿದೆ. ಸಿಎಂ ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಮಿಕರ ಬ್ಯಾಂಕ್ ಖಾತೆಗೆ ಸಾಂಕೇತಿಕವಾಗಿ ಪರಿಹಾರದ ಹಣ ವರ್ಗಾಯಿಸುವ ಮೂಲಕ ಚಾಲನೆ ನೀಡಿದರು. ಮೊದಲ ಹಂತದಲ್ಲಿ ಘೋಷಿಸಿದಂತೆ ಸುಮಾರು 25 ಲಕ್ಷ ಕಾರ್ಮಿಕರ ಪೈಕಿ ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ. ಆರ್ಥಿಕ ನೆರವನ್ನು ಇಂದಿನಿಂದ ನೇರವಾಗಿ ಅವರ ಖಾತೆಗೆ ವರ್ಗಾಯಿಸಲಾಗುತ್ತಿದೆ. ಅಸಂಘಟಿತ ಕಾರ್ಮಿಕರಿಗೆ ತಲಾ 2 ಸಾವಿರ ರೂ. ಪರಿಹಾರ ನೀಡಲಾಗುತ್ತಿದೆ. ಇದಕ್ಕಾಗಿ 749.55 ಕೋಟಿ ಪರಿಹಾರ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ. ಕಾರ್ಮಿಕ ಇಲಾಖೆ ಇಂದು 3.5 ಲಕ್ಷ ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕರಿಗೆ ಪರಿಹಾರ ವಿತರಣೆ ಮಾಡಿದೆ.

ಕ್ಷೌರಿಕರು, ಅಗಸರು, ಟೈಲರ್ ಗಳು, ಹಮಾಲರು, ಗೃಹ ಕಾರ್ಮಿಕರು, ಮೆಕ್ಯಾನಿಕ್ ಗಳು, ಚಿಂದಿ ಆಯುವವರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕರು ಸೇರಿದಂತೆ 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ತಲಾ 2 ಸಾವಿರ ರೂ. ನೆರವು ಘೋಷಿಸಲಾಗಿದ್ದು, ಇದಕ್ಕಾಗಿ ಸೇವಾ ಸಿಂಧುವಿನಡಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಸುಮಾರು 3.3 ಲಕ್ಷ ಫಲಾನುಭವಿಗಳಿಗೆ ಇದರಿಂದ ಅನುಕೂಲವಾಗಲಿದೆ.

Share This Article
Leave a Comment

Leave a Reply

Your email address will not be published. Required fields are marked *