– 1.20 ಲಕ್ಷ ಮೌಲ್ಯದ ಚಿನ್ನದ ಸರ ಕಳ್ಳತನ
ಹಾಸನ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಮಹಿಳೆಯ ಮನೆಗೆ ಬಂದು ಚಿನ್ನದ ಸರ ಕದ್ದ ಆಘಾತಕಾರಿ ಘಟನೆ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.
ಚಿಕ್ಕಮಗಳೂರು ನಿವಾಸಿ ರಂಗಪ್ಪ ಬಂಧಿತ ಆರೋಪಿ. ಬಂಧಿತನಿಂದ 1.20 ಲಕ್ಷ ಮೌಲ್ಯದ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೊಳೆನರಸೀಪುರದ ಮಹಿಳೆಯನ್ನು ರಂಗಪ್ಪ ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಮಾಡಿಕೊಂಡಿದ್ದ. ಫೆ.13 ರಂದು ಮಹಿಳೆ ಮನೆಗೆ ಬಂದಿದ್ದ ರಂಗಪ್ಪ, ಟಿವಿ ಸ್ಟ್ಯಾಂಡ್ ಮೇಲೆ ಇಟ್ಟಿದ್ದ 30 ಗ್ರಾಂ. ಚಿನ್ನದ ಸರವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ.
ಮಹಿಳೆ ಹಲವು ಬಾರಿ ಫೋನ್ ಮಾಡಿದರೂ ಮೊಬೈಲ್ ಸ್ವೀಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದ. ನಂತರ ಮಹಿಳೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಂಗಳೂರಿನ ಚಿಕ್ಕಸಂದ್ರದ ಬಳಿ ಪೊಲೀಸರು ಬಂಧಿಸಿದ್ದಾರೆ. ಇದೇ ರೀತಿ ಇತರರಿಗೆ ವಂಚನೆ ಮಾಡಿರುವ ಬಗ್ಗೆ ತನಿಖೆ ನಡೆಯುತ್ತಿದೆ.
ಮತ್ತೊಂದು ಪ್ರಕರಣದಲ್ಲಿ ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರು ನಾಲ್ವರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿ, 31 ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣ, ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. ಗವಿರಾಜ್, ರಂಗನಾಥ್, ಲೋಕೇಶ್, ವೆಂಕಟೇಶ್ ಬಂಧಿತ ಆರೋಪಿಗಳಾಗಿದ್ದಾರೆ.