ಬೆಳಗಾವಿ ಜಿಲ್ಲಾ ಕಾಂಗ್ರೆಸ್‍ಗೆ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ ಎಂಟ್ರಿ

Public TV
2 Min Read

ಬೆಳಗಾವಿ: ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಜಿಲ್ಲಾ ಯೂಥ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಹಾಗೂ ಸತೀಶ ಶುಗರ್ಸ್ ಲಿ. ವತಿಯಿಂದ ಸದಸ್ಯರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ಗಳನ್ನು ವಿತರಿಸುವ ಮೂಲಕ ಅಧಿಕೃತವಾಗಿ ಜಿಲ್ಲಾ ರಾಜಕಾರಣಕ್ಕೆ ಎಂಟ್ರಿಯಾಗಿದ್ದಾರೆ.

ರಾಹುಲ್ ಜಾರಕಿಹೊಳಿ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಅವರು ಜಿಲ್ಲಾ ರಾಜಕಾರಣದಲ್ಲಿ ತೊಡಗಿಸಿಕೊಳ್ಳುತ್ತಿರುವುದಕ್ಕೆ ಪಕ್ಷದ ಕಾರ್ಯಕರ್ತರು ಹಾಗೂ ಯೂಥ್ ಕಾಂಗ್ರೆಸ್ ಸದಸ್ಯರು ಹರ್ಷ ವ್ಯಕ್ತಪಡಿಸಿದರು.

ಕಳೆದ 2 ವರ್ಷಗಳಿಂದ ಇಡೀ ಜಿಲ್ಲಾದ್ಯಂತ ಪ್ರವಾಹ ಹಾಗೂ ಕೋವಿಡ್ ಸಂದರ್ಭದಲ್ಲಿ ರಾಹುಲ್ ಜಾರಕಿಹೊಳಿ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಅವರು ನಿರಂತರವಾಗಿ ಸಮಾಜಸೇವೆ ಮಾಡಿದ್ದಾರೆ. ಹೀಗಾಗಿ, ಇಂದು ಅಧಿಕೃತವಾಗಿ ರಾಷ್ಟ್ರೀಯ ಪಕ್ಷಕ್ಕೆ ಎಂಟ್ರಿ ಕೊಟ್ಟಿರುವುದರಿಂದ, ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಆನೆ ಬಲ ಬಂದಾಂತಾಗಿದೆ ಎಂದು ಪಕ್ಷದ ಮುಖಂಡರು ಸಂಸತ ವ್ಯಕ್ತಪಡಿಸಿದರು.

ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ರಾಹುಲ್ ಜಾರಕಿಹೊಳಿ ಅವರನ್ನು ಪರಿಚಯಿಸಿ, ಇಂದಿನಿಂದ ಅವರು ಜಿಲ್ಲಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದರು. ರಾಹುಲ್ ಅವರನ್ನು ಸಭೆಯಲ್ಲಿ ಹಾಜರಿದ್ದ ಎಲ್ಲ ಸದಸ್ಯರು ಹಾಗೂ ಮುಖಂಡರು ಭರ್ಜರಿಯಾಗಿ ಸ್ವಾಗತ ಮಾಡಿಕೊಂಡರು.

ಪಕ್ಷ ಸಂಘಟನೆಯ ಮೂಲಕ ಸಾಮರ್ಥ್ಯ ಪ್ರದರ್ಶಿಸಿ:
ಯೂಥ್ ಕಾಂಗ್ರೆಸ್ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ರಾಜಕೀಯದಲ್ಲಿ ತೊಡಗಿಸಿಕೊಳ್ಳುವರು ಮೊದಲು ಸಮಾಜ, ಸಮಾಜಸೇವೆ ಹಾಗೂ ಪಕ್ಷ ಎಂದರೇನು ಎಂಬುದನ್ನು ತಿಳಿದುಕೊಳ್ಳಬೇಕು. ಇದನ್ನು ಅರಿತಾಗ ಮಾತ್ರ ಅವರು ಯಶಸ್ವಿಯಾಗಲು ಸಾಧ್ಯ ಎಂದರು.

ಯುವ ಮುಖಂಡರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದು ಅಧಿಕೃತವಾಗಿ ಜಿಲ್ಲಾ ರಾಜಕಾರಣದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಪಕ್ಷ ಸಂಘಟನೆಯ ಮೂಲಕ ಅವರು ತಮ್ಮ ಸಾಮರ್ಥ್ಯ ಪ್ರದರ್ಶಿಸಬೇಕು” ಎಂದು ಹೇಳಿದರು. ರಾಹುಲ್ ಮತ್ತು ಪ್ರಿಯಾಂಕಾ ಇಬ್ಬರು ತಮಗೆ ಅವಕಾಶವಿರುವಲ್ಲಿ ಹಾಗೂ ಎಲ್ಲಿ ಜನ ತಮ್ಮ ಸೇವೆ ಬಯಸುತ್ತಾರೊ ಅಲ್ಲೆಲ್ಲಾ ಹೋಗಿ ಸೇವೆ ಮಾಡಬೇಕು. ಜೊತೆಗೆ ಪಕ್ಷವನ್ನು ಬಲಪಡಿಸಬೇಕು. ಹಿರಿಯರು, ಕಿರಿಯರೊಂದಿಗೆ ಬೆರೆತು ಅವರು ಕೊಡುವ ಸಲಹೆ, ಸೂಚನೆಗಳನ್ನು ಪಾಲಿಸಬೇಕು. ತಮ್ಮ ವಿಚಾರಗಳನ್ನು ಅವರಿಗೆ ತಿಳಿಸಬೇಕು. ಪಕ್ಷ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಮೂರು ತಿಂಗಳ ಹಿಂದೆಯೇ ಸದಸ್ಯತ್ವ:
ಈಗಾಗಲೇ ರಾಹುಲ್ ಹಾಗೂ ಪ್ರಿಯಾಂಕಾ ಇಬ್ಬರು ಕೂಡ ಕಳೆದ ಮೂರು ತಿಂಗಳ ಹಿಂದೆಯೇ ಅಧಿಕೃತವಾಗಿ ಪಕ್ಷದ ಸದಸ್ಯತ್ವ ಪಡೆದಿದ್ದಾರೆ. ಇಬ್ಬರ ಮೇಲೂ ಸಾಕಷ್ಟು ಜವಾಬ್ದಾರಿ ಇದೆ. ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಾರೆ ಎಂದು ಅವರ ಮೇಲೆ ನಮಗೆ ವಿಶ್ವಾಸವಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ನಾವು ಸಂಚರಿಸಬೇಕಾಗುತ್ತದೆ. ಹೀಗಾಗಿ, ರಾಹುಲ್ ಹಾಗೂ ಪ್ರಿಯಾಂಕಾ ಇನ್ನು ಮೇಲೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗುತ್ತಾರೆ. ಕಾರ್ಯಕರ್ತರು ನನಗೆ ತೋರಿಸಿರುವ ಪ್ರೀತಿ, ಅಭಿಮಾನ ಸಹಕಾರವನ್ನು ಅವರಿಗೂ ನೀಡಬೇಕು. ಅವರಿಂದ ಕೆಲಸ ಪಡೆಯಬೇಕು ಎಂದು ಮನವಿ ಮಾಡಿದರು.

ಕೋವಿಡ್ ಸಂದರ್ಭದಲ್ಲಿ ಪಕ್ಷದ ಶಾಸಕರು, ಮಾಜಿ ಶಾಸಕರು, ಎಲ್ಲ ಮುಖಂಡರು ಹಾಗೂ ಕಾರ್ಯಕರತರು ನಿರೀಕ್ಷೆಗೂ ಮೀರಿ ಕೆಲಸ ಮಾಡಿದ್ದಾರೆ. ಎಲ್ಲರ ಕೆಲಸವೂ ನಮಗೆ ತೃಪ್ತಿ ತಂದಿದೆ. ಮುಂದೆಯೂ ಕೂಡ ಸಮಾಜಕ್ಕೆ ಸೇವೆಯ ಅಗತ್ಯವಿದೆ. ಹೀಗಾಗಿ, ಕಾರ್ಯಕರ್ತರು ಸದಾ ಸನ್ನದ್ಧರಾಗಿರಬೇಕು ಎಂದು ಸತೀಶ ಜಾರಕಿಹೊಳಿ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *