ಭತ್ತ, ಹತ್ತಿ ಖರೀದಿ ಕೇಂದ್ರ ತೆರೆಯಲು ರೈತರ ಆಗ್ರಹ – ರಾಯಚೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ

Public TV
1 Min Read

ರಾಯಚೂರು: ಭತ್ತ ಹಾಗೂ ಹತ್ತಿ ಬೆಳೆಗಳ ಬೆಲೆ ಕುಸಿತವಾಗಿರುವುದರಿಂದ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ರೈತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸೇರಿದಂತೆ ವಿವಿಧ ರೈತ ಸಂಘಗಳ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ಭತ್ತ, ಸಜ್ಜೆ, ಹತ್ತಿ ಬೆಲೆ ಮುಕ್ತ ಮಾರುಕಟ್ಟೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಅದಕ್ಕೆ ರಾಜ್ಯ ಸರ್ಕಾರ 300 ರೂಪಾಯಿ ಪ್ರೋತ್ಸಾಹ ಧನ ಕೊಡಬೇಕು. ಭತ್ತಕ್ಕೆ 1,850 ರೂಪಾಯಿ ಕೊಟ್ಟರೆ ರಾಜ್ಯ ಸರ್ಕಾರ 300 ರೂಪಾಯಿ ಪ್ರೋತ್ಸಾಹ ಧನ ನೀಡಿ ಆರ್ಥಿಕ ದಿವಾಳಿಯತ್ತ ಸಾಗಿರುವ ರೈತರನ್ನ ಕಾಪಾಡಬೇಕು ಅಂತ ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳಿಗೆ ಖರೀದಿ ಕೇಂದ್ರ ಆರಂಭಿಸಲು ಸಾಕಷ್ಟು ಬಾರಿ ಮನವಿ ಮಾಡಿದರು ಪ್ರಯೋಜನವಾಗಿಲ್ಲ. ಹೀಗಾಗಿ ಸಿರವಾರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನಾ ಮೆರವಣಿಗೆ ಮೂಲಕ ಎಚ್ಚರಿಕೆ ನೀಡಿದ್ದಾರೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಕೂಡಲೇ ಎಲ್ಲಾ ಕೃಷಿ ಉತ್ಪನ್ನಗಳ ಖರೀದಿ ಕೇಂದ್ರ ಆರಂಭಿಸಬೇಕು ಅಂತ ಒತ್ತಾಯಿಸಿದ್ದಾರೆ. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟವಧಿ ಧರಣಿ ನಡೆಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಶಾಸಕ ಹಂಪಯ್ಯ ನಾಯಕ್, ತಡವಾಗಿ ಭತ್ತ ಖರೀದಿ ಕೇಂದ್ರ ಆರಂಭಿಸಿದರೆ ಶ್ರೀಮಂತ ರೈತರಿಗೆ ಅನುಕೂಲವಾಗುತ್ತೆ. ಬಡ ರೈತರು ಬೀದಿಗೆ ಬರುತ್ತಾರೆ,. ಹೀಗಾಗಿ ಕೂಡಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಅಂತ ಆಗ್ರಹಿಸಿದರು.

Share This Article
Leave a Comment

Leave a Reply

Your email address will not be published. Required fields are marked *