ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ಮಳೆ ಸುರಿಯುತ್ತಿದೆ. ಜಿಲ್ಲೆಯ ಭಾಗಮಂಡಲದಲ್ಲಿ ದಾಖಲೆಯ 48 ಸೆಂ.ಮೀ. ಮಳೆಯಾಗಿದೆ. ಗುರುವಾರ ಬೆಳಗ್ಗೆ ಸ್ವಲ್ಪ ಮಟ್ಟಿಗೆ ಕಡಿಮೆಯಾದಂತೆ ಕಂಡುಬಂದರೂ ಸಹ, ಮಧ್ಯಾಹ್ನದ ನಂತರ ಬಿರುಗಾಳಿ ಸಹಿತ ಮಳೆ ಮುಂದುವರಿದಿದೆ.
ಕೊಡಗು ಜಿಲ್ಲೆಯ ಮಳೆ ವಿವರ: ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ ಮಳೆ 177.07 ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 76.97 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1298.78 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1016.13 ಮಿ.ಮೀ ಮಳೆಯಾಗಿತ್ತು.
ಹಾರಂಗಿ: ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು. ಇಂದಿನ ನೀರಿನ ಮಟ್ಟ 2855.16 ಅಡಿಗಳು, ಕಳೆದ ವರ್ಷ ಇದೇ ದಿನ 2835.16 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 38.20 ಮಿ.ಮೀ., ಕಳೆದ ವರ್ಷ ಇದೇ ದಿನ 16.80 ಮಿ.ಮೀ. ಇಂದಿನ ನೀರಿನ ಒಳಹರಿವು 9081 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 2559 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 11811, ನಾಲೆಗೆ 300. ಕಳೆದ ವರ್ಷ ಇದೇ ದಿನ ನದಿಗೆ 1400, ನಾಲೆಗೆ 700 ಕ್ಯುಸೆಕ್.
ನಾಡಿನ ಜೀವನದಿ ಕಾವೇರಿ, ಲಕ್ಷ್ಮಣ ತೀರ್ಥ ನದಿಗಳು ಉಕ್ಕಿ ಹರಿಯುತ್ತಿವೆ. ಬಲಮುರಿ ಸೇರಿದಂತೆ ಹಲವು ಕಡೆಗಳಲ್ಲಿ ಪ್ರವಾಹ ಉಂಟಾಗಿದೆ. ಮಲ್ಲಳ್ಳಿ, ಅಬ್ಬಿ, ಇರ್ಪು, ಚೇಲಾವರ ಸೇರಿದಂತೆ ಹಲವು ಜಲಪಾತಗಳು ಭೋರ್ಗರೆಯುತ್ತಿವೆ. ಜಿಲ್ಲೆಯಾದ್ಯಂತ ಮುಂಗಾರು ಚುರುಕಾಗಿದೆ. ಜುಲೈ ತಿಂಗಳ ಅಂತ್ಯದ ವೇಳೆಗೆ ಕೊಂಚ ವಿರಾಮ ನೀಡಿದ್ದ ಮಳೆ, ಆಗಸ್ಟ್ ಮೊದಲನೆಯ ವಾರದಲ್ಲಿ ಮತ್ತಷ್ಟು ಬಿರುಸುಗೊಂಡಿದೆ. ಈ ಮೂಲಕ ಜಿಲ್ಲೆಯ ಕೆರೆ ಕಟ್ಟೆ ಮತ್ತು ನದಿಯಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ. ಕರುನಾಡ ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆ.
ಆಗಸ್ಟ್ 1 ರ ಶನಿವಾರ ದಂದು 15.51 ಮಿ.ಮೀ ಇದ್ದ ಜಿಲ್ಲಾ ಸರಾಸರಿ ಮಳೆ, ಆಗಸ್ಟ್ 2 ರ ಭಾನುವಾರದಂದು 11.53 ಮಿ.ಮೀಗೆ ಇಳಿಕೆ ಕಂಡಿತು. ಆದರೆ ಸೋಮವಾರದ ವೇಳೆಗೆ ಮುಂಗಾರು ಬಿರುಸುಗೊಂಡಿದ್ದರಿಂದ ಆಗಸ್ಟ್ 3 ರಂದು ಜಿಲ್ಲಾ ಸರಾಸರಿ ಮಳೆ 50.92 ಮಿ.ಮೀ ಗೆ ಏರಿಕೆ ಕಂಡಿತು. ಬಳಿಕ ಮತ್ತಷ್ಟು ಚುರುಕಾದ ಮುಂಗಾರಿನಿಂದಾಗಿ ಆಗಸ್ಟ್ 4 ರಂದು ಜಿಲ್ಲಾ ಸರಾಸರಿ 106.12 ಮಿ.ಮೀಗೆ ಏರಿತು. ಆಗಸ್ಟ್ 5 ರ ಬುಧವಾರದಂದು ಜಿಲ್ಲಾ ಸರಾಸರಿ ಮಳೆಯು 142.59 ಮಿ.ಮೀ ದಾಖಲಾಯಿತು. ಆಗಸ್ಟ್ 6 ರ ಗುರುವಾರದ ವೇಳೆಗೆ ಜಿಲ್ಲಾ ಸರಾಸರಿ ಮಳೆಯು 162.4 ಮಿ.ಮೀಗೆ ಏರಿಕೆ ಕಂಡಿತು.
ಭಾಗಮಂಡಲ ಹೋಬಳಿಯಲ್ಲಿ ಗುರುವಾರ ಬೆಳಗ್ಗೆ 8:30 ರ ವೇಳೆಗೆ ಸುರಿದ ಮಳೆಯ ಪ್ರಮಾಣ 486.6 ಮಿ.ಮೀ ಆಗಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ದಾಖಲೆಯ ಪ್ರಮಾಣದಲ್ಲಿ ಸುರಿದ ಮಳೆಯಿಂದಾಗಿ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಜರಿದು ತಲಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಬಿದ್ದಿದೆ. ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ತಂಡ ತಕ್ಷಣ ಕಾರ್ಯಾಚರಣೆ ತಂಡವು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಕೈಗೊಂಡಿದ್ದು, ಅವರು ನೀಡಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಎರಡು ಮನೆಗಳ ಪೈಕಿ ಒಬ್ಬರು ಅರ್ಚಕರು ಹೊಸ ಮನೆ ನಿರ್ಮಿಸಿಕೊಂಡು ಕುಟುಂಬದೊಂದಿಗೆ ಭಾಗಮಂಡಲದಲ್ಲಿ ನೆಲೆಸಿದ್ದಾರೆ.