ಮಂಗಳೂರು: ರಾಜ್ಯದಾದ್ಯಂತ ಸಾರಿಗೆ ಇಲಾಖೆ ನೌಕರರ ಮುಷ್ಕರ ತಾರಕಕ್ಕೇರಿದ್ದು, ಬೇಡಿಕೆ ಈಡೇರಿಸುವ ವರೆಗೆ ಹೋರಾಟ ನಡೆಸುವುದಾಗಿ ಪಟ್ಟು ಹಿಡಿದ್ದಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಸ್ ಸಂಚಾರ ಎಂದಿನಂತೆ ಮುಂದುವರಿದಿದ್ದು, ಪ್ರಯಾಣಿಕರು ಮಾತ್ರ ಬಸ್ ಹತ್ತುತ್ತಿಲ್ಲ.
ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರಿಗೆ ನೌಕರರ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗದೆ ಎಂದಿನಂತೆ ಕೆಲಸಕ್ಕೆ ಹಾಜರಾಗಿದ್ದು, ಕೆಎಸ್ಆರ್ಟಿಸಿಟಿ ಬಸ್ಸುಗಳು ಎಂದಿನಂತೆ ಸಂಚಾರ ನಡೆಸಿವೆ. ಆದರೆ ಪ್ರಯಾಣಿಕರು ಮಾತ್ರ ಹೊರಗೆ ಬರುತ್ತಿಲ್ಲ. ಹೀಗಾಗಿ ಕಡಿಮೆ ಜನ ಇದ್ದರೂ, ಬಸ್ಗಳು ಎಂದಿನಂತೆ ಸಂಚರಿಸುತ್ತಿವೆ.
ಮಂಗಳೂರಿನಿಂದ ಬೆಂಗಳೂರು ಸೇರಿದಂತೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೆ ಬಸ್ ಸಂಚಾರ ನಡೆಸಿದೆ. ಆದರೆ ಹೊರ ಜಿಲ್ಲೆಗಳಿಂದ ಬರುವ ಬಸ್ಸುಗಳ ಸಂಖ್ಯೆ ಕಡಿಮೆಯಾಗಿದೆ. ಜೊತೆಗೆ ಪ್ರಯಾಣಿಕರಿಗೂ ಗೊಂದಲ ಸೃಷ್ಟಿಯಾಗಿದ್ದು, ಹೊರ ಜಿಲ್ಲೆಗೆ ಹೋದ ಬಳಿಕ ಸಮಸ್ಯೆಯಾಗಬಹುದೆಂದು ಕೆಲವು ಪ್ರಯಾಣಿಕರು ಟಿಕೆಟ್ ಕ್ಯಾನ್ಸಲ್ ಮಾಡಿಸಿದ್ದಾರೆ. ಬಸ್ ಗಳಲ್ಲಿ ಪ್ರಯಾಣಿಕರು ಕಡಿಮೆ ಇದ್ದರೂ ಎಲ್ಲ ಬಸ್ಸುಗಳು ಸಂಚರಿಸುತ್ತಿವೆ.