ಮತದಾರರು ಮೋದಿ ಸರ್ಕಾರದ ಅಭಿವೃದ್ಧಿಗೆ ಮೆಚ್ಚಿ ಬಿಜೆಪಿಗೆ ಮತ ಹಾಕುತ್ತಾರೆ: ಬಿಎಸ್‍ವೈ

Public TV
1 Min Read

– ಶಿರಾ, ಆರ್.ಆರ್ ನಗರ ಎರಡರಲ್ಲೂ ನಾವು ಗೆಲ್ಲುತ್ತೇವೆ

ಶಿವಮೊಗ್ಗ: ಬೆಂಗಳೂರಿನ ಆರ್.ಆರ್ ನಗರ ಮತ್ತು ಶಿರಾ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಪರವಾದ ಒಲವಿದೆ. ಎರಡು ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಶಿಕಾರಿಪುರಕ್ಕೆ ಆಗಮಿಸಿದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಬಿಎಸ್‍ವೈ, ಶಿರಾ ಹಾಗೂ ಆರ್.ಆರ್ ನಗರ ಎರಡೂ ಕ್ಷೇತ್ರಗಳಲ್ಲಿನ ಮತದಾರರು ಕೇಂದ್ರದ ಮೋದಿ ಸರ್ಕಾರದ ಅಭಿವೃದ್ಧಿ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯ ಮೆಚ್ಚಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ಹಾಕಲಿದ್ದಾರೆ. ಜೊತೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಎರಡು ದಿನಗಳಿಂದ ಶಿರಾದಲ್ಲಿಯೇ ಠಿಕಾಣಿ ಹೂಡಿದ್ದಾರೆ. ಆದ್ದರಿಂದ ಎರಡು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು.

ಸಿಗಂದೂರು ದೇವಾಲಯದಲ್ಲಿ ಅರ್ಚಕರು ಹಾಗೂ ಟ್ರಸ್ಟಿ ನಡುವೆ ಗಲಾಟೆ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್‍ವೈ ಈ ಬಗ್ಗೆ ದೇವಾಲಯದ ಪ್ರಮುಖರ ಜೊತೆ ಜಿಲ್ಲಾಧಿಕಾರಿ ಚರ್ಚೆ ನಡೆಸಿದ್ದಾರೆ. ದೇವಾಲಯದಲ್ಲಿ ಗಲಾಟೆ ನಡೆಯಬಾರದು. ಅದು ಶೋಭೆ ತರುವಂತಹದ್ದಲ್ಲ. ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸುವ ಬಗ್ಗೆ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ, ಶಾಸಕರಾದ ಹಾಲಪ್ಪ, ಕುಮಾರ ಬಂಗಾರಪ್ಪನವರ ಜೊತೆ ಚರ್ಚೆ ನಡೆಸುತ್ತೇವೆ. ಜಿಲ್ಲಾಧಿಕಾರಿಯಿಂದ ವರದಿ ತರಿಸಿಕೊಳ್ಳುತ್ತೇನೆ ಎಂದು ತಿಳಿಸಿದರು.

ಉತ್ತರ ಕರ್ನಾಟಕ ಪ್ರವಾಹದ ಬಗ್ಗೆ ಮಾತನಾಡಿದ ಸಿಎಂ, ಈ ಬಗ್ಗೆ ಪ್ರಧಾನಿಯವರ ಜೊತೆ ಮಾತನಾಡಿದ್ದೇನೆ. ಹೆಚ್ಚಿನ ಪರಿಹಾರ ನೀಡುವಂತೆ ಮನವಿ ಮಾಡಿದ್ದೇನೆ. ಕೇಂದ್ರದಿಂದ ಹೆಚ್ಚಿನ ಪರಿಹಾರ ಕೊಡುವ ನಿರೀಕ್ಷೆ ಇದೆ ಎಂದರು. ಶಿವಮೊಗ್ಗ ಜಿಲ್ಲೆ ಹಾಗೂ ಶಿಕಾರಿಪುರ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ನಡೆಯುತ್ತಿವೆ. ಜಿಲ್ಲೆ ಹಾಗೂ ಕ್ಷೇತ್ರ ರಾಜ್ಯದಲ್ಲಿಯೇ ಮಾದರಿಯಾಗಿದೆ. ಮೂರು ದಿನಗಳ ಕಾಲ ಕ್ಷೇತ್ರದಲ್ಲಿಯೇ ಪ್ರವಾಸ ಕೈಗೊಳ್ಳಲಿದ್ದೇನೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *