ಮಾಜಿ ಸಚಿವ ಹರತಾಳು ಹಾಲಪ್ಪ, ಪತ್ನಿಗೆ ಕೊರೊನಾ ದೃಢ

Public TV
1 Min Read

ಬೆಂಗಳೂರು: ಸಿಎಂ ಬಿಎಸ್‍ವೈ, ಮಾಜಿ ಸಿಎಂ ಸಿದ್ದರಾಮಯ್ಯ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಶಾಸಕ ಹರತಾಳು ಹಾಲಪ್ಪ ಅವರಿಗೂ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಮಾಜಿ ಸಚಿವರು, ಸಾಗರ ಕ್ಷೇತ್ರದ ಜನಪ್ರಿಯ ಶಾಸಕ ಹರತಾಳು ಹಾಲಪ್ಪನವರು ಮತ್ತು ಅವರ ಪತ್ನಿ ಕೊರೊನಾ ಸೋಂಕಿನಿಂದ ಬೇಗನೆ ಗುಣಮುಖರಾಗಲಿ, ಸಂಪೂರ್ಣವಾಗಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕಾರ್ಯಪ್ರವೃತ್ತರಾಗಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಇದಕ್ಕೂ ಮೊದಲು ಸಿದ್ದರಾಮಯ್ಯ ಅವರ ಆರೋಗ್ಯದ ಬಗ್ಗೆಯೂ ಶುಭಹಾರೈಸಿರುವ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊರೊನಾ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ, ಉತ್ತಮ ಆರೋಗ್ಯದೊಂದಿಗೆ ಮತ್ತೆ ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುವುದಾಗಿ ತಿಳಿಸಿದ್ದರು.

ಆಗಸ್ಟ್ 2 ರಂದು ರಾತ್ರಿ 11 ಗಂಟೆಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ದಾಖಲಿಸಿಕೊಳ್ಳಲಾಗಿದೆ. ಅವರಿಗೆ ಕೊರೊನಾ ರೋಗ ಲಕ್ಷಣದ ತೀವ್ರತೆ ಕಡಿಮೆ ಇದೆ. ಸದ್ಯಕ್ಕೆ ಸಿಎಂ ಅವರ ಆರೋಗ್ಯ ಉತ್ತಮವಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಇತ್ತ ನಿನ್ನೆ ರಾತ್ರಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಪುತ್ರ ಯತೀಂದ್ರ, ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು, ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆಂಟಿಜೆನ್ ಟೆಸ್ಟ್ ಮಾಡಲಾಗಿದ್ದು, ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ಆಗಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಅವರು ಹೇಳಿದ್ದರು.

Share This Article
Leave a Comment

Leave a Reply

Your email address will not be published. Required fields are marked *