ಮೃತನ ಅಂತ್ಯಕ್ರಿಯೆಗೆ ಕುಟುಂಬಸ್ಥರು ಹಿಂದೇಟು- ಗ್ರಾ.ಪಂ ಅಧ್ಯಕ್ಷ, ಪಿಡಿಒನಿಂದ ಶವಸಂಸ್ಕಾರ

Public TV
1 Min Read

ಹಾವೇರಿ: ಕಿಡ್ನಿ ವೈಫಲ್ಯದಿಂದ ಮೃತಪಟ್ಟಿದ್ದ ವ್ಯಕ್ತಿಯ ಅಂತ್ಯಕ್ರಿಯೆ ಮಾಡಲು ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಹಿಂದೇಟು ಹಾಕಿದ ಘಟನೆ ಬ್ಯಾಡಗಿ ತಾಲೂಕಿನ ಹೆಡಿಗ್ಗೊಂಡ ಗ್ರಾಮದಲ್ಲಿ ನಡೆದಿದೆ. ಇದರಿಂದಾಗಿ ಗ್ರಾಮ ಪಂಚಾಯತ್ ಅಧ್ಯಕ್ಷ, ಪಿಡಿಒ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಶವಸಂಸ್ಕಾರ ನಡೆಸಿ ಮಾನವೀಯತೆ ಮೆರದಿದ್ದಾರೆ.

ಕಿಡ್ನಿ ವೈಫಲ್ಯದಿಂದ ಹೆಡಿಗ್ಗೊಂಡದ ನಿವಾಸಿ ಹುಚ್ಚಪ್ಪ ಗೋಣಿ(50) ಮೃತಪಟ್ಟಿದ್ದರು. ಆದರೆ ಕೊರೊನಾ ಭೀತಿ ಇರುವ ಹಿನ್ನೆಲೆಯಲ್ಲಿ ಮೃತನ ಶವಸಂಸ್ಕಾರ ನಡೆಸಲು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹಿಂದೇಟು ಹಾಕಿದ್ದರು. ಇಂದರಿಂದಾಗಿ ಪಿಪಿಇ ಕಿಟ್ ಸೇರಿದಂತೆ ಸುರಕ್ಷತಾ ಕ್ರಮಗಳನ್ನ ಕೈಗೊಂಡು ಪಿಡಿಒ, ಅಧ್ಯಕ್ಷ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಅಗ್ನಿಸ್ಪರ್ಶ ಮಾಡಿದರು.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹುಚ್ಚಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಗುರುವಾರ ಹುಚ್ಚಪ್ಪ ಮೃತಪಟ್ಟಿದ್ದರು. ಇತ್ತ ಕೊರೊನಾ ಟೆಸ್ಟ್ ರಿಪೋರ್ಟ್ ಕೈ ಸೇರದ್ದರಿಂದ ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಸಹ ಹಿಂದೇಟು ಹಾಕಿದರು. ಸ್ಮಶಾನಕ್ಕೆ ಬಂದರೂ ದೂರವೇ ನಿಂತು ಅಂತ್ಯಸಂಸ್ಕಾರವನ್ನು ನೋಡಿದರು.

ಇಂದು ಬೆಳಗ್ಗೆ ಹುಚ್ಚಪ್ಪ ಅವರ ಕೊರೊನಾ ಟೆಸ್ಟ್ ರಿಪೋರ್ಟ್ ಬಂದಿದ್ದು, ಜಿಲ್ಲೆ ಹಾಗೂ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೂ 22 ಮಂದಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ 11 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 11 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *