ಮೇಕೆದಾಟು ಬಳಿ ಡ್ಯಾಂ ನಿರ್ಮಿಸಲು ಬಿಡುವುದಿಲ್ಲ: ದೊರೈ ಮುರುಗನ್

Public TV
1 Min Read

ಚೆನೈ: ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡವಾಗಿ ಡ್ಯಾಂ ನಿರ್ಮಿಸಲು ಬಿಡುವುದಿಲ್ಲ, ಈ ಬಗ್ಗೆ ಕಾನೂನು ಹೋರಾಟ ಮಾಡುತ್ತೇವೆ ಎಂದು ನೂತನ ತಮಿಳುನಾಡು ಸರ್ಕಾರದ ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಹೇಳಿದ್ದಾರೆ.

ಮೇಕೆದಾಟು ಯೋಜನೆ ಬಗ್ಗೆ ಇತ್ತೀಚೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್‍ಜಿಟಿ) ಸಮಿತಿ ರಚಿಸಿದೆ. ಇದಾದ ಬೆನ್ನಲ್ಲೇ ಸುಪ್ರಿಂಕೋರ್ಟ್ ನಲ್ಲಿ ಬಾಕಿ ಉಳಿದಿರುವ ತಮಿಳುನಾಡು ಮನವಿ ಅರ್ಜಿಗಳ ಬಗ್ಗೆ ಮಾತನಾಡಿರುವ ದೊರೈ ಮುರುಗನ್, ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರದ ಬಗ್ಗೆ ಕಾನೂನು ಹೋರಾಟ ಮಾಡಿಯೇ ಸಿದ್ಧ. ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಮಕ್ಕೆ ಮುಂದಾಗುತ್ತೇವೆ ಎಂದು ತಿಳಿಸಿದ್ದಾರೆ.

ಮೇಕೆದಾಟಿನಲ್ಲಿ ಅನಧೀಕೃತ ನಿರ್ಮಾಣ ಚಟುವಟಿಕೆಗಳು ನಡೆಯುತ್ತಿವೆ ಎಂಬ ವರದಿಯನ್ನು ಗಂಭೀರವಾಗಿ ತೆಗೆದುಕೊಂಡಿರುವ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ದಕ್ಷಿಣ ವಲಯ, ಈ ಆರೋಪಗಳ ಬಗ್ಗೆ ಪರಿಶೀಲಿಸಲು ಜಂಟಿ ಸಮಿತಿ ರಚಿಸಿದ ಬೆನ್ನಲ್ಲೇ ದೊರೈಮುರುಗನ್ ಈ ಹೇಳಿಕೆ ನೀಡಿದ್ದಾರೆ.

ಮೇಕೆದಾಟು ಬಳಿ ಹೊಸ ಅಣೆಕಟ್ಟು ನಿರ್ಮಾಣಕ್ಕೆ ಸಮಗ್ರ ಯೋಜನಾ ವರದಿ ಸಿದ್ಧಪಡಿಸುವ ಕಾರ್ಯ ಮುಂದುವರಿಸುವಂತೆ ಕೇಂದ್ರೀಯ ಜಲ ಆಯೋಗ ಕರ್ನಾಟಕಕ್ಕೆ ನೀಡಿರುವ ಅನುಮತಿಗೆ ತಡೆ ನೀಡುವಂತೆ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ 2018ರಲ್ಲಿ ಮನವಿ ಅರ್ಜಿ ಸಲ್ಲಿಸಿತ್ತು. ಆ ಬಳಿಕ ಇದೀಗ ಮತ್ತೆ ಈ ಯೋಜನೆಯ ಬಗ್ಗೆ ಚರ್ಚೆ ನಡೆಯುತ್ತಿದ್ದು, ಯೋಜನೆಯಿಂದ ಪರಿಸರಕ್ಕೆ ಧಕ್ಕೆಯಾಗಲಿದೆಯೇ ಎಂದು ಅಧ್ಯಯನ ಮಾಡಲು ಸಮಿತಿ ರಚನೆಯಾಗಿದೆ. ಸಮಿತಿ ರಚನೆ ಬೆನ್ನಲ್ಲೇ ತಮಿಳುನಾಡು ಜಲಸಂಪನ್ಮೂಲ ಸಚಿವರು ವಕೀಲರ ಜೊತೆ ಚರ್ಚಿಸಿ ಕಾನೂನು ಹೋರಾಟಕ್ಕೆ ನಿರ್ಧಾರದ ಬಗ್ಗೆ ಸುಳಿವು ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *