ಬೆಂಗಳೂರು: ಮೇ 12ರ ಬಳಿಕ ಮತ್ತೊಂದು ವಾರ ಜನತಾ ಲಾಕ್ಡೌನ್ ವಿಸ್ತರಣೆ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಕೊರೊನಾ ವೈರಸ್ ವೇಗ ದಿನದಿಂದ ದಿನಕ್ಕೆ ವೇಗ ಪಡೆದುಕೊಳ್ಳುತ್ತಿರೋದು ಸರ್ಕಾರದ ಆತಂಕಕ್ಕೆ ಕಾರಣವಾಗಿದೆ. ಸದ್ಯದಲ್ಲೇ ಸಚಿವರು ಮತ್ತು ತಜ್ಞರ ಜೊತೆ ಸಿಎಂ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೊರೊನಾ ನಿಯಂತ್ರಣಕ್ಕೆ ಸಿಗದಿದ್ರೆ ಮೇ 19ರವರೆಗೆ ಜನತಾ ಲಾಕ್ಡೌನ್ ವಿಸ್ತರಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆದಿವೆ. ರಾಜ್ಯದಲ್ಲಿ ಏಪ್ರಿಲ್ 27 ರಾತ್ರಿ 9 ಗಂಟೆಯಿಂದ ಜನತಾ ಲಾಕ್ಡೌನ್ ಆರಂಭವಾಗಿದ್ದು, ಬೆಳಗ್ಗೆ 6 ರಿಂದ ಬೆಳಗ್ಗೆ 10ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅನುಮತಿ ಕಲ್ಪಿಸಲಾಗಿದೆ.
ಬುಧವಾರ ರಾಜ್ಯದಲ್ಲಿ ಅತ್ಯಧಿಕ ಕೊರೊನಾ ಪ್ರಕರಣಗಳು ವರದಿಯಾಗಿದೆ. ಬುಧವಾರ 39,047 ಹೊಸ ಪ್ರಕರಣಗಳು ವರದಿಯಾಗಿತ್ತು. 229 ಜನರು ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡಿದ್ದರು. ರಾಜ್ಯದಲ್ಲಿ ಕೋವಿಡ್ ಸೋಂಕಿನ ಖಚಿತ ಪ್ರಮಾಣ ಶೇ.22.70ಕ್ಕೇರಿಕೆ ಆಗಿದ್ದು ರಾಜ್ಯ ಸರ್ಕಾರದ ಆತಂಕಕ್ಕೆ ಕಾರಣವಾಗಿದೆ. ಇತ್ತ ಸಾವಿನ ಪ್ರಮಾಣವೂ ಏರಿಕೆಯಾಗುತ್ತಿದೆ. ಬುಧವಾರ ಬೆಂಗಳೂರು ನಗರದಲ್ಲಿಯೇ 22 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದ್ದವು. ಇಂದು ಸಹ ಬೆಂಗಳೂರಿನಲ್ಲಿ 20 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗುವ ಸಾಧ್ಯತೆಗಳಿವೆ.