ಯಲಹಂಕ ವೀರ ಸಾವರ್ಕರ್ ಮೇಲ್ಸೇತುವೆ ಉದ್ಘಾಟನೆ

Public TV
1 Min Read

– ಬಿಗಿ ಭದ್ರತೆಯಲ್ಲಿ ನಡೆಯಿತು ಕಾರ್ಯಕ್ರಮ

ಬೆಂಗಳೂರು: ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರನ್ನು ನಾಮಕರಣ ಮಾಡಿದೆ.

ಇಂದು ನಾಮಕರಣದ ಕಾರ್ಯಕ್ರಮವನ್ನು ಸಿಎಂ ಯಡಿಯೂರಪ್ಪನವರು ಉದ್ಘಾಟನೆ ಮಾಡಿದ್ದಾರೆ. ಯಲಹಂಕದ ಡೈರಿ ಸರ್ಕಲ್ ಬಳಿ ಇರುವ ಮೇಲ್ಸೇತುವೆಗೆ ವೀರ ಸಾವರ್ಕರ್ ಅವರ ಹೆಸರನ್ನು ಇಡಲಾಗಿದೆ. 388.35 ಮೀಟರ್ ಉದ್ದದ ಈ ಮೇಲ್ಸೇತುವೆಯನ್ನು ಬಿಬಿಎಂಪಿಯಿಂದ 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ಕಾಂಗ್ರೆಸ್, ಜೆಡಿಎಸ್ ವಿರೋಧಿಸಿತ್ತು. ಹೀಗಾಗಿ ಯಾವುದೇ ಪ್ರತಿಭಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಎಸ್‍ಆರ್ ವಿಶ್ವನಾಥ್, ಸಚಿವರಾದ ಸಿಟಿ ರವಿ, ಡಿಸಿಎಂ ಅಶ್ವಥ್ ನಾರಾಣ್, ಗೃಹ ಸಚಿವ ಬಸವರಾಜ್ ಬೊಮ್ಮಯಿ ಮತ್ತು ಬೈರತಿ ಬಸವರಾಜು ಉಪಸ್ಥಿತರಿದ್ದರು.

ಬೆಂಗಳೂರಿನ ಯಲಹಂಕ ಮೇಲ್ಸೇತುವೆಗೆ ವೀರ್ ಸಾವರ್ಕರ್ ಹೆಸರಿಡಲು ಸರ್ಕಾರ ಈ ಹಿಂದೆಯೇ ಮುಂದಾಗಿತ್ತು. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದ್ದವು. ಈ ಹಿನ್ನೆಲೆ ಸರ್ಕಾರ ಮೇಲ್ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡಿತ್ತು. ಮೇಲ್ಸೇತುವೆಗೆ ಸಾವರ್ಕರ್ ಹೆಸರು ಬೇಡ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ವಿರೋಧ ಮಾಡಿದ್ದರು. ಜೊತೆಗೆ ಕಾಂಗ್ರೆಸ್ ಪಕ್ಷದ ನಾಯಕರು ಕೂಡ ಸರ್ಕಾರದ ನಡೆಗೆ ವಿರೋಧ ವ್ಯಕ್ತಪಡಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *