ರೈತ ಕಾಯ್ದೆಗೆ ವಿರೋಧ – ಉಡುಪಿಯಲ್ಲಿ ಬೃಹತ್ ಹೋರಾಟಕ್ಕೆ ಎಡಪಕ್ಷ ಸಿದ್ಧತೆ

Public TV
1 Min Read

ಉಡುಪಿ: ದೇಶದ ಸುಮಾರು ಮುನ್ನೂರು ರೈತ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 8ರ ಭಾರತ ಬಂದ್‍ಗೆ ಉಡುಪಿ ಜಿಲ್ಲೆಯಲ್ಲಿ ಎಡಪಕ್ಷಗಳು ಬೆಂಬಲ ಘೋಷಿಸಿದೆ. ಉಡುಪಿಯಲ್ಲಿ ಸಭೆ ಸೇರಿದ ಸಿಐಟಿಯು ಸಂಘಟನೆಯ ಸದಸ್ಯರು, ರೈತರ ಹೋರಾಟಕ್ಕೆ ಬೆಂಬಲ ನೀಡಲು ನಿರ್ಧರಿಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ನೂತನ ರೈತರ ಕಾಯ್ದೆ ತಿದ್ದುಪಡಿ ರೈತ ವಿರೋಧಿಯಾಗಿದೆ. ಕಾರ್ಪೊರೇಟ್ ಕಂಪೆನಿಗಳ ಪರವಾಗಿರುವ ಈ ತಿದ್ದುಪಡಿಯನ್ನು ನಾವು ವಿರೋಧಿಸುತ್ತೇವೆ ಎಂದು ಸಿಪಿಎಂ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಮಾತನಾಡದ ಅವರು, ಅದಾನಿ, ಅಂಬಾನಿಗೆ ಬೆಂಬಲ ನೀಡುವ ಇಂತಹ ಕಾಯ್ದೆಗಳಿಗೆ ನಮ್ಮ ಬೆಂಬಲವಿಲ್ಲ. ಕೇಂದ್ರ ಸರ್ಕಾರದ ಜೊತೆ ಆರು ಸುತ್ತುಗಳ ಮಾತುಕತೆ ನಡೆದರೂ ಫಲ ನೀಡದ ಕಾರಣ ಭಾರತ ಬಂದ್ ನಡೆಸುವುದು ಅನಿವಾರ್ಯವಾಗಿದೆ. ಮೋದಿ ಸರ್ಕಾರದ ಸರ್ವಾಧಿಕಾರಿ ಧೋರಣೆಯ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ರೈತ ವಿರೋಧಿ ಕಾಯಿದೆಗಳನ್ನು ವಾಪಸ್ ಪಡೆಯಲು ವಿಶೇಷ ಅಧಿವೇಶನ ಕರೆಯಲು ಆಗ್ರಹಿಸಿ ಕಳೆದ 11 ದಿನಗಳಿಂದ ದೆಹಲಿಯಲ್ಲಿ ರೈತರು ಧರಣಿ ನಡೆಸುತ್ತಿದ್ದಾರೆ. ರೈತರ ಮುಂದಿನ ಹೋರಾಟದ ಭಾಗವಾಗಿ 300 ರೈತ ಸಂಘಟನೆಗಳು ರೈತರ ಬೇಡಿಕೆಗಳಿಗಾಗಿ ಡಿ.8 ರಂದು ಜನತಾ ಕಫ್ರ್ಯೂ- ಅಖಿಲಭಾರತ ಬಂದ್ ಗೆ ಕರೆ ನೀಡಿರುವುದನ್ನು ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ. ಈ ಕಾಯಿದೆಗಳು ಜಾರಿಯಾದಲ್ಲಿ ಈಗಾಗಲೇ ಸಂಕಷ್ಟಕ್ಕೆ ಒಳಗಾಗಿರುವ ರೈತರು, ದವಸ ಧಾನ್ಯಗಳ ಉತ್ಪಾದನೆ ತೀವ್ರವಾಗಿ ಕುಂಠಿತಗೊಳ್ಳುತ್ತದೆ. ಡಿ.8ರಂದು ಜಿಲ್ಲೆಯ ಮೂರು ತಾಲೂಕುಗಳಲ್ಲಿ ಸಮಾನ ಮನಸ್ಕ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಲಿದೆ ಎಂದು ಸಿಐಟಿಯು ಅಧ್ಯಕ್ಷ ಶಂಕರ್, ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *