ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ – ಕೊರೊನಾ ನಿಯಮ ಉಲ್ಲಂಘಿಸಿದ ಶಿಕ್ಷಕರು, ಅಧಿಕಾರಿಗಳು

Public TV
1 Min Read

ನೆಲಮಂಗಲ: ಕರ್ನಾಟಕ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಆದರೆ ಜನ ಸಾಮಾನ್ಯರು ಹಾಗೂ ಮಕ್ಕಳಿಗೆ ಜಾಗೃತಿ ಮೂಡಿಸಬೇಕಿದ್ದ ಶಿಕ್ಷಕರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರಾಜ್ಯದಲ್ಲಿ ಮಹಾಮಾರಿಯಂತೆ ಹರಡುತ್ತಿರುವ ಎರಡನೇ ಅಲೆ ಕೊರೊನಾ ಸೋಂಕಿನ ನಿಯಮವನ್ನು ಗಾಳಿಗೆ ತೂರಿದ್ದಾರೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ವಿವಿಎಸ್ ಗಾರ್ಡನ್‍ನಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದಿಂದ ವಿಶ್ವ ಮಹಿಳಾ ದಿನಾಚರಣೆ ವೇಳೆ ಈ ಘಟನೆ ನಡೆದಿದೆ. ನೆಲಮಂಗಲ ತಾಲೂಕಿನ ಸುಮಾರು 200 ಶಿಕ್ಷಕರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮಕ್ಕೆ ನೆಲಮಂಗಲ ಶಾಸಕ ಡಾ.ಕೆ ಶ್ರೀನಿವಾಸ್ ಮೂರ್ತಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿಕ್ಷಣ ಇಲಾಖೆಯ ಡಿಡಿಪಿಐ ಗಂಗ ಮರೇಗೌಡ, ನೆಲಮಂಗಲ ಬಿಇಓ ರಮೇಶ್ ಚಾಲನೆ ನೀಡಿದರು.

ರಾಜ್ಯದಲ್ಲಿ ಸೇರಿದಂತೆ ನೆಲಮಂಗಲ ತಾಲೂಕಿನಲ್ಲಿಯೂ ಮಹಾಮಾರಿ ಕೊರೊನಾ ದಿನೇದಿನೇ ಹೆಚ್ಚುತ್ತಿದೆ. ಹೀಗಾಗಲೇ ಸರ್ಕಾರ ಹಾಗೂ ಆರೋಗ್ಯ ಇಲಾಖೆಯಿಂದ ಸಾಕಷ್ಟು ನಿಯಮವನ್ನು ಜಾರಿಗೆ ತರಲಾಗಿದೆ. ಜನರು ಮಾಸ್ಕ್ ಧರಿಸಬೇಕು ಸಾಮಾಜಿಕ ಅಂತರ, ಸ್ಯಾನಿಟೈಜರ್ ಬಳಸುವಂತೆ ಹೀಗೆ ಇನ್ನಿತರ ಮಾರ್ಗಸೂಚಿಯನ್ನು ಜಾರಿಗೆ ತರಲಾಗಿದೆ. ಆದರೆ ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಮಾಸ್ಕ್ ಬಳಸದೇ ಕೊರೊನಾ ನಿಯಮವನ್ನ ಗಾಳಿಗೆ ತೂರಲಾಗಿತ್ತು.

ಸಾಮಾಜಿಕ ಅಂತರವಿಲ್ಲದೆ ಹಲವು ಶಿಕ್ಷಕರುಗಳು ಮಾಸ್ಕ್ ಧರಿಸದೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕೊರೊನಾ 2ನೇ ಅಲೆ ಬೆಂಗಳೂರು ಗ್ರಾಮಾಂತರದಲ್ಲಿ ಹೆಚ್ಚುತ್ತಿದ್ದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಶಿಕ್ಷಕರುಗಳು ಕೊರೊನಾ ನಿಯಮವನ್ನು ಗಾಳಿಗೆ ತೂರಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *