ಸಂಚಾರದ ಹಾದಿಯಲ್ಲಿ ಹೆಜ್ಜೆಗುರುತು ಮೂಡಿಸಿ ಹೋದ ವಿಜಯ್: ಅರವಿಂದ ಲಿಂಬಾವಳಿ ಶೋಕ

Public TV
3 Min Read

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್ ಅವರ ನಿಧನಕ್ಕೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ವಿಜಯ್ ತಮ್ಮ ಜೀವನ ಯಾನದ ಸಂಚಾರವನ್ನು ಅಪೂರ್ಣವಾಗಿಸಿ ಬದುಕು ತೊರೆದು ಹೋಗಿದ್ದಾರೆ. ಆದರೆ ಬದುಕಿನ ಸಂಚಾರದ ಹಾದಿಯಲ್ಲಿ ಅವರು ಅಂಗಾಂಗ ದಾನ ಮಾಡುವ ಮೂಲಕ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ. ಇದು ಅತ್ಯಂತ ಭಾವನಾತ್ಮಕ, ಮನಮಿಡಿಯುವ ಸಂದರ್ಭ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಅತ್ಯಂತ ಚಿಕ್ಕ ವಯಸ್ಸಿನಲ್ಲಿ ಜೀವನದ ಪಯಣ ಮುಗಿಸಿದ ವಿಜಯ್ ಹಲವೇ ಚಿತ್ರಗಳಲ್ಲಿ ಅಭಿನಯಿಸಿದ್ದರೂ, ಅವೆಲ್ಲವೂ ಚಲನಚಿತ್ರ ಪ್ರೇಮಿಗಳ ಮನದಲ್ಲಿ ಅಚ್ಚಳಿಯದೆ ಉಳಿದಿದೆ ‘ನಾನು ಅವನಲ್ಲ ಅವಳು’ ಚಿತ್ರದ ಅವರ ಮನೋಜ್ಞ ಅಭಿನಯ ಅವರಿಗೆ ರಾಷ್ಟ್ರಪ್ರಶಸ್ತಿ ತಂದುಕೊಟ್ಟಿತ್ತು.ಸಂಚಾರಿ ಥಿಯೇಟರ್ಸ್ ಮೂಲಕ ರಂಗಭೂಮಿಯ ಬದುಕಿಗೆ ಕಾಲಿಟ್ಟ ವಿಜಯ್ ಅನೇಕ ಮಹತ್ವದ ನಾಟಕಗಳಲ್ಲಿ ಪಾತ್ರ ವಹಿಸಿದ್ದರು. ಆನಂತರ ಕಿರುತೆರೆ ಮತ್ತು ಹಿರಿತೆರೆಗಳಿಗೂ ಪ್ರವೇಶಿಸಿ ತಮ್ಮ ಅಭಿನಯದ ಮೂಲಕ ಎಲ್ಲರ ಗಮನಸೆಳೆದರು.ಕೃಷ್ಣ ತುಳಸಿ ಚಿತ್ರದ ಅಂಧ ಯುವಕನ ಪಾತ್ರ ಸದಾ ಮನದಲ್ಲಿ ಉಳಿಯುವಂಥದ್ದು, ರಂಗಪ್ಪ ಹೋಗ್ಬಿಟ್ಟ, ಒಗ್ಗರಣೆ, ನಾತಿಚರಾಮಿ, ಪಿರಂಗಿಪುರ ಮತ್ತು ಹರಿವು ಮುಂತಾದ ಚಿತ್ರಗಳು ಅವರಿಗೆ ಅಪಾರ ಹೆಸರು ತಂದುಕೊಟ್ಟಿದೆ.

ಭವಿಷ್ಯದಲ್ಲಿ ಇನ್ನೂ ದೊಡ್ಡ ಹೆಸರು ಮಾಡುವ ಎಲ್ಲಾ ಅವಕಾಶಗಳು ಇದ್ದ ವಿಜಯ್ ಅವರ ನಿಧನ ದುಃಖದಾಯಕ. ಪ್ರಗತಿಪರ ಚಿಂತನೆಯುಳ್ಳ, ಸಂವೇದನಾಶೀಲ ನಟ ಎನಿಸಿಕೊಂಡಿದ್ದ ವಿಜಯ್ ಸಾವಿನಲ್ಲೂ ತಮ್ಮ ಆದರ್ಶ ಮೆರೆದಿದ್ದಾರೆ. ಅಂಗಾಂಗ ದಾನ ಮಾಡಿದ ಅವರ ಕುಟುಂಬದ ನಿರ್ಣಯಕ್ಕೆ ನನ್ನ ಅನಂತ ವಂದನೆಗಳು. ಇಂತಹ ನಿರ್ಧಾರ ಕೈಗೊಳ್ಳುವುದು ಸಾಮಾನ್ಯ ಸಂಗತಿಯಲ್ಲ ,ಇತರರಿಗೆ ಮಾದರಿಯಾದ ಅವರ ಕುಟುಂಬಕ್ಕೆ ನನ್ನ ಕೃತಜ್ಞತೆಗಳು ಮತ್ತು ಸಂತಾಪಗಳನ್ನು ಸಲ್ಲಿಸುತ್ತೇನೆ. ಅವರ ದುಃಖ ದಲ್ಲಿನಾನೂ ಭಾಗಿ, ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಚಿಕಿತ್ಸೆ ಪಡೆಯುತ್ತಿದ್ದ ವಿಜಯ್ ಬದುಕಿ ಬರುತ್ತಾರೆ ಎಂಬ ವಿಶ್ವಾಸ ನಂಬಿಕೆ ನನಗಿತ್ತು. ಅವರ ಕುಟುಂಬ ಸದಸ್ಯರು, ಅಭಿಮಾನಿಗಳಂತೆ ನಾನು ಕೂಡ ಪ್ರಾರ್ಥನೆ ಮಾಡಿದ್ದೆ. ಸೋಮವಾರ ಆಸ್ಪತ್ರೆಗೂ ಭೇಟಿ ನೀಡಿ ವೆಂಟಿಲೇಟರ್ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಉಸಿರಾಡುತ್ತಿದ್ದರು. ಹೀಗಾಗಿ ಅವರು ಬದುಕುಳಿಯುತ್ತಾರೆಂಬ ನಿರೀಕ್ಷೆ ಇತ್ತು. ಕೆಲ ದಿನಗಳ ಚಿಕಿತ್ಸೆ ನಂತರ ಅವರು ಮನೆ ಮರಳಲಿದ್ದಾರೆಂಬ ವಿಶ್ವಾಸ ಬಂದಿತ್ತು. ಆದರೆ, ಎಲ್ಲರ ನಿರೀಕ್ಷೆ ಹುಸಿ ಮಾಡಿ ಅವರು ಅಗಲಿದ್ದಾರೆ. ಇದು ನನಗೆ ವೈಯಕ್ತಿಕವಾಗಿ ಬಹಳಷ್ಟು ದುಃಖ ಉಂಟು ಮಾಡಿದೆ ಎಂದು ಡಾ.ಸಿ.ಎನ್.ಅಶ್ವತ್ಥನಾರಾಯಣ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಕನ್ನಡಕ್ಕೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟ ಹಿರಿಮೆ ಅವರದ್ದು. ‘ನಾನು ಅವನಲ್ಲ…ಅವಳು’ ಚಿತ್ರದಲ್ಲಿ ಅವರದ್ದು ಅಮೋಘ ನಟನೆ. ಅಷ್ಟೇ ಅಲ್ಲ ಅವರು ನಟಿಸಿದ ಎಲ್ಲ ಪಾತ್ರಗಳಲ್ಲೂ ಜೀವಿಸುತ್ತಿದ್ದರು. ಅವರ ನಿಧನ ಕನ್ನಡ ಚಿತ್ರರಂಗಕ್ಕೆ ಭರಿಸಲಾಗದ ನಷ್ಟ. ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬದ ಸದಸ್ಯರಿಗೆ, ಅಭಿಮಾನಿಗಳಿ ಹಾಗೂ ಚಿತ್ರರಂಗಕ್ಕೆ ದಯಪಾಲಿಸಲಿ ಎಂದು ಡಿಸಿಎಂ ಪ್ರಾರ್ಥನೆ ಮಾಡಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *