ಸರ್ಕಾರದ ಭ್ರಷ್ಟಾಚಾರವನ್ನು ಎಳೆಎಳೆಯಾಗಿ ತಿಳಿಸುವೆ: ಮಾಜಿ ಸಚಿವ ಹೆಚ್.ಡಿ.ರೇವಣ್ಣ

Public TV
1 Min Read

ಹಾಸನ: ಸರ್ಕಾರ ದ್ವೇಷದ ರಾಜಕಾರಣ ಮಾಡಿದರೆ ಹೋರಾಟ ಅನಿವಾರ್ಯ ಎಂದು ಮಾಜಿ ಸಚಿವ ರೇವಣ್ಣ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು ಜುಲೈ ತಿಂಗಳು ಕಳೆದರೂ ನಾಲೆಗಳಿಗೆ ನೀರು ಬಿಟ್ಟಿಲ್ಲ. ಸರ್ಕಾರ ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆಯಬೇಕು. ಹನ್ನೆರಡು ತಿಂಗಳಿಂದ ಯಾವುದೇ ಹೊಸ ನೀರಾವರಿ ಯೋಜನೆ ಆರಂಭಿಸಿಲ್ಲ. ಕೊರೊನದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಸನ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಹಾಸನ ಜಿಲ್ಲೆಯ ಜನ ಏನು ಮಾಡಿದ್ದಾರೆ. ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಅಂಬುಲೆನ್ಸ್ ಸೇವೆಗೆ ದರ ನಿಗದಿ ಮಾಡುತ್ತೇವೆಂದ ರಾಮುಲು

ಜಿಲ್ಲೆಯ ಎಲ್ಲಾ ಜೆಡಿಎಸ್ ಶಾಸಕರ ಸಭೆ ಕರೆದು, ಎಲ್ಲರ ಅಭಿಪ್ರಾಯ ಪಡೆದು ಸಿಎಂಗೆ ಪತ್ರ ಬರೆಯುತ್ತೇನೆ. ನಮ್ಮ ಪತ್ರಕ್ಕೆ ಸ್ಪಂದಿಸದಿದ್ದರೆ ದೇವೇಗೌಡರೊಂದಿಗೆ ಶಾಂತಿಯಿಂದ ಹೋರಾಟ ಮಾಡಬೇಕಾಗುತ್ತದೆ. ತಾಳ್ಮೆಯಿಂದ ಹನ್ನೆರಡು ತಿಂಗಳು ಕಾದಿದ್ದೇವೆ. ಜೆಡಿಎಸ್ ಶಾಸಕರು ಸುಮ್ಮನಿದ್ದಾರೆ ಎಂದು ಭಾವಿಸುವುದು ಸರಿಯಲ್ಲ ಎಂದರು.

ಇದೇ ವೇಳೆ ಸರ್ಕಾರದಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಸಮಯ ಬಂದಾಗ ಎಳೆಎಳೆಯಾಗಿ ತಿಳಿಸುವೆ. ಅಧಿಕಾರಿಗಳ ವರ್ಗಾವಣೆಯಲ್ಲಿ ದಂಧೆ ನಡೆಯುತ್ತಿದೆ. ಹಾಸನ-ಬೇಲೂರು-ಚಿಕ್ಕಮಗಳೂರು ರೈಲ್ವೆ ಮಾರ್ಗ, ವಿಮಾನ ನಿಲ್ದಾಣ ಸೇರಿದಂತೆ ಯಾವ ಕಾಮಗಾರಿಗಳು ಆರಂಭಗೊಂಡಿಲ್ಲ ಎಂದು ರೇವಣ್ಣ ಸರ್ಕಾರದ ವಿರುದ್ಧ ಕಿಡಿಕಾರಿದರು.

Share This Article
Leave a Comment

Leave a Reply

Your email address will not be published. Required fields are marked *