ಸಿದ್ದರಾಮಯ್ಯ ಹಸಿವಿನಿಂದ ಒದ್ದಾಡುತ್ತಿರುವ ಇಲಿ: ಈಶ್ವರಪ್ಪ ವ್ಯಂಗ್ಯ

Public TV
1 Min Read

ಮೈಸೂರು: ಸಿಎಂ ಬಸವರಾಜ ಬೊಮ್ಮಾಯಿ ಬೆಟ್ಟ ಅಗೆದು ಇಲಿ ಹಿಡಿದಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್‍ಗೆ ಸಚಿವ ಈಶ್ವರಪ್ಪ ಮೈಸೂರಿನಲ್ಲಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಒಂಥರ ಹಸಿವಿನಿಂದ ಒದ್ದಾಡುತ್ತಿರುವ ಇಲಿ ಥರ ಆಗಿದ್ದಾರೆ. ಸಿದ್ದರಾಮಯ್ಯ ಹುಲಿಯಾಗುತ್ತಾರೆ ಅಂದುಕೊಂಡಿದ್ದೇವು. ಆದರೆ ಅವರು ಇಲಿಯಾಗಿ ವಿಲ ವಿಲ ಒದ್ದಾಡುತ್ತಿದ್ದಾರೆ. ಅವರು ರಾಜ್ಯಕ್ಕೆ ಹುಲಿಯಾಗುವ ಬದಲು ಡಿ.ಕೆ. ಶಿವಕುಮಾರ್ ಮೇಲೆ ಹುಲಿಯಾಗಿದ್ದಾರೆ ಎಂದಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ನಿಂತು ಹೇಳುತ್ತಿದ್ದೇನೆ, ಡಾ.ಜಿ. ಪರಮೇಶ್ವರ್ ಅವರನ್ನು ಕಳೆದ ಬಾರಿಯ ಚುನಾವಣೆಯಲ್ಲಿ ಸೋಲಿಸಿದ್ದು ಸಿದ್ದರಾಮಯ್ಯ. ಸಿಎಂ ಸ್ಥಾನಕ್ಕೆ ಅಡ್ಡಿಯಾಗುತ್ತಾರೆ ಎಂದು ಅವರನ್ನು ಸಿದ್ದರಾಮಯ್ಯ ಸೋಲಿಸಿದರು. ಸಿದ್ದರಾಮಯ್ಯ ಒಬ್ಬ ಕುರುಬರನ್ನು ಬೆಳೆಸಲಿಲ್ಲ. ನೆಪ ಮಾತ್ರಕ್ಕೆ ತಾತ್ಕಾಲಿಕವಾಗಿ ಕೆಲವು ಕುರುಬರನ್ನು ಸಚಿವರನ್ನಾಗಿ ಮಾಡಿದ್ದರು. ಪೂರ್ಣಾವಧಿಯಲ್ಲಿ ಯಾರಿಗೂ ಸಚಿವ ಸ್ಥಾನ ನೀಡಲಿಲ್ಲ ಎಂದು ಕಿಡಿಕಾರಿದರು.

ನಮ್ಮಲ್ಲಿ ಹಿಂದುಳಿದವರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ತರುತ್ತೇವೆ. ಪಕ್ಷ ನಿಷ್ಠ ಕಾರ್ಯಕರ್ತರೊಂದಿಗೆ ಅಧಿಕಾರಕ್ಕೆ ಬರುತ್ತೇವೆ. ಇದುವರೆಗೂ ಯಾವತ್ತು ಬಿಜೆಪಿ ಪೂರ್ಣಪ್ರಮಾಣದಲ್ಲಿ ಬಹುಮತ ಬಂದಿಲ್ಲ. ಕಾಂಗ್ರೆಸ್ – ಜೆಡಿಎಸ್ ಅವರನ್ನು ಸೇರಿಸಿಕೊಂಡು ಆಡಳಿತ ಮಾಡಿದ್ದೇವೆ. ಇದರಿಂದಾಗಿಯೇ ಸಣ್ಣ ಪುಟ್ಟ ಗೊಂದಲಗಳಿದ್ದವು. ಮುಂದೆ ಈ ರೀತಿ ಆಗುವುದಿಲ್ಲ ಎಂದು ಹೇಳಿದ್ದಾರೆ.

ಮತ್ತೊಂದೆಡೆ ಮುಂದಿನ ಬಾರಿ ಬಿಜೆಪಿಯಲ್ಲಿ ರಾಷ್ಟ್ರೀಯವಾದಿ ಮುಖ್ಯಮಂತ್ರಿಯಾಗುತ್ತಾರೆ. ನಾನು ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಆಗಬೇಕೆಂದು ಬೆಂಬಲಿಗರು ಬಯಸಿದ್ದರು. ಆದರೆ ಸಚಿವನೂ ಆಗುವುದಿಲ್ಲ ಅಂತ ಕೆಲವರು ಬಿಂಬಿಸಿದ್ದರು. ಹೈಕಮಾಂಡ್ ನನ್ನನ್ನು ಹೇಗೆ ಪರಿಗಣಿಸಿದೆ ಅಂತ ಈಗ ಎಲ್ಲರಿಗೂ ಗೊತ್ತಾಗಿದೆ. ಮುಂದಿನ ಚುನಾವಣೆಯಲ್ಲಿ ನಾವು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ. ಮುಂದಿನ ಬಾರಿ ರಾಷ್ಟ್ರವಾದಿಯನ್ನು ಬಿಜೆಪಿ ಮುಖ್ಯಮಂತ್ರಿ ಮಾಡುತ್ತೆ. ಹಿಂದುಳಿದವರೋ ದಲಿತರೋ ಯಾರೇ ಆಗಲಿ ಒಬ್ಬ ರಾಷ್ಟ್ರವಾದಿ ಸಿಎಂ ಆಗುತ್ತಾರೆ ಎಂದಿದ್ದಾರೆ. ಇದನ್ನೂ ಓದಿ:ನಮ್ಮ ಸಿಎಂ ನಮ್ಮನ್ನ ತಿರಸ್ಕರಿಸಿದ್ದಕ್ಕೆ ಸಚಿವ ಸ್ಥಾನ ತಪ್ತು: ಶಾಸಕ ನೆಹರೂ ಓಲೇಕಾರ್ ಕಿಡಿ

Share This Article
Leave a Comment

Leave a Reply

Your email address will not be published. Required fields are marked *