ಹುಬ್ಬಳ್ಳಿಯಲ್ಲಿ ವರುಣನ ಅಬ್ಬರ- ರಾಷ್ಟ್ರೀಯ ಹೆದ್ದಾರಿ ಬಂದ್, ಟ್ರಾಫಿಕ್ ಜಾಮ್

Public TV
1 Min Read

– ಮೈಸೂರಿನಲ್ಲಿ ಸಹ ಅಬ್ಬರಿಸಿದ ಮಳೆ

ಹುಬ್ಬಳ್ಳಿ/ಮೈಸೂರು: ನಗರದಲ್ಲಿಂದು ಧಾರಾಕಾರವಾಗಿ ಮಳೆ ಸುರಿದಿದ್ದು, ಮಧ್ಯಾಹ್ನ ಒಂದು ಗಂಟೆಗೂ ಅಧಿಕ ಕಾಲ ಸುರಿದ ಭಾರೀ ಮಳೆಗೆ ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.

ಭಾರೀ ಮಳೆಯಿಂದಾಗಿ ಹುಬ್ಬಳ್ಳಿಯ ಕುಂದಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ಸೇತುವೆ ಕಾಮಗಾರಿಯಿಂದಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿತು. ಮಳೆಯ ನೀರು ಹೆಚ್ಚು ಬಂದ ಪರಿಣಾಮ ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಹೀಗಾಗಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಾಕಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು. ಹುಬ್ಬಳ್ಳಿ- ಕುಂದಗೋಳ ರಸ್ತೆ ಹಾಗೂ ಹುಬ್ಬಳ್ಳಿ ಬೆಂಗಳೂರು ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಪರದಾಡುವಂತಾಯಿತು.

ನೂರಾರು ವಾಹನಗಳು ರಸ್ತೆಯಲ್ಲಿಯೇ ನಿಂತಿದ್ದವು. ರಸ್ತೆಯಲ್ಲಿ ನೀರಿನ ಪ್ರಮಾಣ ಕಡಿಮೆ ಆದ ಬಳಿಕ ಟ್ರಾಫಿಕ್ ಜಾಮ್ ಸ್ವಲ್ಪ ತಗ್ಗಿತು. ಹೆದ್ದಾರಿಯಲ್ಲಿ ಸೇತುವೆ ಕಾಮಗಾರಿ ನಡೆಯುತ್ತಿರುವ ಪರಿಣಾಮ ಮಳೆ ನೀರಿನಿಂದ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು. ಹೀಗಾಗಿ ಕೆಲ ಕಾಲ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಾಹನ ಸವಾರರು ಪರದಾಡುವಂತಾಯಿತು. ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಇಂದು ಮತ್ತೆ ಸುರಿಯಿತು.

ಇತ್ತ ಮೈಸೂರಿನಲ್ಲಿಯೂ ಧಾರಾಕಾರ ಮಳೆ ಸುರಿದಿದ್ದು, ಸಂಜೆಯ ವೇಳೆಗೆ ದಿಢೀರ್ ಆರಂಭವಾದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಯಿತು. ಭಾರೀ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಮಳೆ ನೀರು ರಸ್ತೆಗಳಲ್ಲಿ ಉಕ್ಕಿ ಹರಿಯಿತು. ಇನ್ನೂ ಹಲವೆಡೆ ತಗ್ಗು ಪ್ರದೇಶಗಳಿಗೆ ಮಳೆಯ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ದಿಢೀರ್ ಮಳೆಗೆ ಮೈಸೂರು ಜನ ಹೈರಾಣಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *