140 ಶಾಸಕರು ನಮ್ಮೊಂದಿಗಿದ್ದಾರೆ, ವಿಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ: ಸಿಎಂ

2 Min Read

– ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ
-ಬಿಜೆಪಿಯವರು ಸದಾ ವಿಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ

ಬೆಳಗಾವಿ: 140 ಶಾಸಕರು ನಮ್ಮೊಂದಿಗಿದ್ದಾರೆ, ವಿಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ. 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ (Congress) ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಇಂದು (ಡಿ.16) ವಿಧಾನಸಭಾ ಕಲಾಪದಲ್ಲಿ ವಿರೋಧ ಪಕ್ಷದವರ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡಿದ ಅವರು, ಉರಿಯುವುದರ ಮೇಲೆ ಉಪ್ಪು ಹಾಕಬಾರದೆಂಬ ಎಂಬ ಗಾದೆ ಮಾತಿದೆ. ವಿರೋಧ ಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು. ವಿರೋಧಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸರ‍್ಯಾರೂ ಪ್ರಚೋದಿತರಾಗುವುದಿಲ್ಲ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. 140 ಶಾಸಕರು ನಮ್ಮೊಂದಿಗಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ ಎಂದರು.ಇದನ್ನೂ ಓದಿ: ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ: ಸದನದಲ್ಲಿ ಸಿದ್ದರಾಮಯ್ಯ ಪುನರುಚ್ಚಾರ

ಜನರ ನಾಡಿಮಿಡಿತ ಕಾಂಗ್ರೆಸ್ ಸರ್ಕಾರಕ್ಕೆ ತಿಳಿದಿದೆ:
2023ರಲ್ಲಿ ಜನರು ಆಶೀರ್ವಾದ ಮಾಡಿದಂತೆ 2028ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬರಲಿದೆ. ಜನರ ನಾಡಿಮಿಡಿತ ಸರ್ಕಾರಕ್ಕೆ ತಿಳಿದಿದೆ. ಕರ್ನಾಟಕದ ಜನ ಬಿಜೆಪಿಯನ್ನು ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎರಡು ಬಾರಿ ಅಧಿಕಾರ ನಡೆಸಿದರೂ, ಒಂದು ಬಾರಿಯೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. 2008, 2018ರಲ್ಲಿ ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. 2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಜೆಡಿಎಸ್‌ನೊಂದಿಗೆ ಸರ್ಕಾರ ರಚಿಸಲಾಯಿತು. ಆದರೆ ಬಿಜೆಪಿಯವರು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಉದ್ದೇಶದ ಬಗ್ಗೆ ಪ್ರಶ್ನಿಸಿದರು.

ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ:
ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಮಾತು ಅಂತಿಮವಾಗಿರುತ್ತದೆ. ಆದರೆ ಬಿಜೆಪಿಯ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತ ಸಾಧಿಸಿಲ್ಲ. ಬಿಜೆಪಿಯವರಿಗೆ ಅಸೂಯೆ ಕಾಡುತ್ತಿದೆ. ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ ಮತ್ತೆ ಚುನಾವಣೆ ಎದುರಿಸಿ 2028ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. 2013ರಲ್ಲಿ, 2023ರಲ್ಲಿಯೂ ಕಾಂಗ್ರೆಸ್‌ಗೆ ಜನರು ಆಶೀರ್ವಾದ ಮಾಡಿದ್ದಾರೆ. ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ. ಬಿಜೆಪಿಯವರು ಸದಾ ವಿರೋಧ ಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ. ನಾನು ಹೋದರೆ ಹೋದೇನು ಅಂತ ಕನಕದಾಸರು ಹೇಳಿದ್ದರು. ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ. ಈಗಲೂ ನಾನೇ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದು ತಿಳಿಸಿದರು.ಇದನ್ನೂ ಓದಿ: ಜಮ್ಮು-ಕಾಶ್ಮೀರ; ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿಯಲ್ಲಿ ಪೊಲೀಸ್‌ ಹುತಾತ್ಮ

Share This Article