ಚಳಿಗಾಲದ ಅಧಿವೇಶನಕ್ಕೆ 16 ಮಂದಿ ಶಾಸಕರು ಗೈರಾಗಲು ಪ್ಲಾನ್ – ಸಮ್ಮಿಶ್ರ ಸರ್ಕಾರಕ್ಕೆ ಬಂಡಾಯದ ಬಿಸಿ?

Public TV
1 Min Read

ಬೆಂಗಳೂರು: ಸಮ್ಮಿಶ್ರ ಸರ್ಕಾರ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳಲ್ಲಿ ಅಸಮಾಧಾನಗೊಂಡಿದ್ದ ಎರಡು ಪಕ್ಷದ ಒಟ್ಟು 16 ಶಾಸಕರು ಮುಂದಿನ ಚಳಿಗಾಲದ ಅಧಿವೇಶನಕ್ಕೆ ಗೈರಾಗಿ ಬಿಸಿ ಮುಟ್ಟಿಸಲು ಪ್ಲಾನ್ ಮಾಡಿಕೊಂಡಿದ್ದಾರೆ.

ಶಾಸಕರ ಬಂಡಾಯ ವಿಚಾರ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ದೇವೇಗೌಡರಿಗೆ ತಿಳಿಯುತ್ತಿದ್ದಂತೆ ಬಂಡಾಯವನ್ನು ಶಮನ ಮಾಡಲು ಕಾರ್ಯಪ್ರವೃತ್ತರಾಗಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.

ಒಂದೊಮ್ಮೆ ತಮ್ಮ ಬೇಡಿಕೆ ಈಡೇರಿಸದಿದ್ದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆಲ ಶಾಸಕರು ಸಿದ್ಧರಾಗಿದ್ದು, ಈ ಮೂಲಕ ಸರ್ಕಾರದ ಮೇಲೆ ಒತ್ತಡ ತರುವ ಪ್ರಯತ್ನ ನಡೆಸಿದ್ದಾರೆ.

ಕಾಂಗ್ರೆಸ್ ಮಾಜಿ ಸಚಿವ ರಾಮಲಿಂಗ ರೆಡ್ಡಿ, ಯಶವಂತಪುರ ಕ್ಷೇತ್ರದ ಶಾಸಕ ಎಸ್‍ಟಿ ಸೋಮಶೇಖರ್, ಚಿಕ್ಕಬಳ್ಳಾಪುರ ಶಾಸಕ ಡಾ ಸುಧಾಕರ್, ಹೋಸಕೋಟೆ ಶಾಸಕ ಎಂಟಿಬಿ ನಾಗರಾಜ್, ಶಿವಾಜಿ ನಗರ ಶಾಸಕ ರೋಷನ್ ಬೇಗ್, ಭದ್ರಾವತಿ ಶಾಸಕ ಸಂಗಮೇಶ್,  ಹಗರಿಬೊಮ್ಮನಹಳ್ಳಿ ಶಾಸಕ ಪರಮೇಶ್ವರ್ ನಾಯಕ್, ಹುಬ್ಬಳ್ಳಿ ಧಾರಾವಾಡ ಪೂರ್ವ ಕ್ಷೇತ್ರದ ಶಾಸಕ ಅಬ್ಬಯ್ಯ ಪ್ರಸಾದ್, ಕುಷ್ಠಗಿ ಶಾಸಕ ಅಮರೇಗೌಡ, ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ, ಬಂಗಾರಪೇಟೆ ಶಾಸಕ ನಾರಾಯಣ ಸ್ವಾಮಿ ಅಸಮಾಧಾನಗೊಂಡಿರುವ ಪ್ರಮುಖ ಶಾಸಕರು ಎನ್ನಲಾಗಿದೆ.

ಅಸಮಾಧಾನದ ಕುರಿತು ಮಾಹಿತಿ ಲಭಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಹಾಗೂ ಎಚ್‍ಡಿಡಿ ಹಲವು ಸಭೆ ನಡೆಸಿ ಚರ್ಚೆ ನಡೆಸಿದ್ದು ಅಸಮಾಧಾನಗೊಂಡಿರುವ ಶಾಸಕರ ಮನವೊಲಿಕೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಪ್ರಮುಖವಾಗಿ ಈ ಹಿಂದೆ ಸರ್ಕಾರದ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಕೆಲ ಶಾಸಕರು ಅಧಿವೇಶನಕ್ಕೆ ಗೈರು ಹಾಜರಿ ಹಾಕುವ ಸಾಧ್ಯತೆಯಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *