ಮಹಾರಾಷ್ಟ್ರದಲ್ಲಿ ಬ್ಯಾರಿಕೇಡ್‍ಗೆ ಡಿಕ್ಕಿ ಹೊಡೆದು ಟ್ರಕ್ ಪಲ್ಟಿ- ಮಹಿಳೆಯರು ಸೇರಿ ವಿಜಯಪುರದ 17 ಮಂದಿ ದುರ್ಮರಣ

Public TV
1 Min Read

ಮುಂಬೈ: ಮಹಾರಾಷ್ಟ್ರದಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ಮೆರೆದಿದ್ದು, ಟ್ರಕ್ ಹೆದ್ದಾರಿಯ ಬ್ಯಾರ್‍ಕೇಡ್ ಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾದ ಪರಿಣಾಮ 17 ಮಂದಿ ಮೃತಪಟ್ಟಿದ್ದಾರೆ.

ಈ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಖಂಡಾಲಾದ ಬಳಿ ನಡೆದಿದೆ. ಘಟನೆಯಲ್ಲಿ ಹಲವು ಮಹಿಳೆಯರು ಸೇರಿ 17 ಮಂದಿ ಕಟ್ಟಡ ಕಾರ್ಮಿಕರು ಮೃತಪಟ್ಟಿದ್ದಾರೆ. 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ವಿಜಯಪುರದಿಂದ ಪುಣೆ ಕಡೆ ತೆರಳುತ್ತಿತ್ತು. ಟ್ರಕ್ ಮುಂಬೈ- ಬೆಂಗಳೂರು ಹೆದ್ದಾರಿಯಲ್ಲಿ ತೆರಳುತ್ತಿದ್ದಂತೆಯೇ ಖಂಬಡ್ಕಿ ಘಾಟ್ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರಕ್ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದಿದ್ದು, ಪಲ್ಟಿಯಾಗಿದೆ ಅಂತ ಸತಾರಾ ಎಸ್‍ಪಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಮುಂಬೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಖಂಡಾಲಾ ಸರಂಗ ಮಾರ್ಗವು `ಎಸ್’ ಆಕಾರದ ತಿರುವಿನಲ್ಲಿದೆ. ಈ ಮೊದಲು ಇಲ್ಲಿ ಅನೇಕ ಅಪಘಾತಗಳು ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಹೀಗಾಗಿ ಇದೊಂದು ಅಪಘಾತವಲಯವಾಗಿದೆ ಎನ್ನಲಾಗಿದೆ.

ಘಟನೆಯಲ್ಲಿ 17 ಮಂದಿ ಸ್ಥಳದಲ್ಲೇ ಮೃತಪಟ್ಟರೆ, 15ಕ್ಕೂ ಹೆಚ್ಚು ಮಂದಿ ಗಾಯಗಳಾಗಿವೆ. ಅಪಘಾತ ಸಂಭವಿಸಿದ ಕೂಡಲೇ ಖಂಡಾಲಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಾಟೀಲ್ ತಿಳಿಸಿದ್ದಾರೆ.

ಸದ್ಯ ಘಟನೆಗೆ ಕಾರಣವೇನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಾಲಕ ನಿದ್ದೆಯ ಮಂಪರಿನಲ್ಲಿ ಈ ಅವಘಡ ಸಂಭವಿಸರಬಹುದೆಂದು ಅವರು ಶಂಕಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಮೃತ ದೇಹಗಳನ್ನು ಪೋಸ್ಟ್ ಮಾರ್ಟಮ್ ಗೆ ರವಾನಿಸಲಾಗಿದ್ದು, ಮೃತರ ಗುರುತು ಪತ್ತೆ ಇನ್ನಷ್ಟೇ ತಿಳಿದುಬರಬೇಕಿದೆ.

Share This Article
Leave a Comment

Leave a Reply

Your email address will not be published. Required fields are marked *