ಚಿತ್ರದುರ್ಗ: ಇಲಿ ಪಾಶಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಹುಡುಗಿ ಮೃತಪಟ್ಟಿರುವ ಘಟನೆ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.
ಜಿಲ್ಲೆಯ ಹಿರಿಯೂರು ತಾಲೂಕಿನ ತಳವರಹಟ್ಟಿ ಗ್ರಾಮದ ಕಮಲ (17) ಮೃತ ವಿದ್ಯಾರ್ಥಿನಿ. ತಡರಾತ್ರಿ ವೈದ್ಯರು ನಿರ್ಲಕ್ಷ್ಯ ಮಾಡಿದ್ದರಿಂದ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಕಮಲ ಮೃತಪಟ್ಟಿದ್ದಾಳೆ ಎಂದು ಪೋಷಕರು ಆರೋಪಿಸಿದ್ದು, ವೈದ್ಯರು ಮತ್ತು ಮೃತ ಸಂಬಂಧಿಕರ ನಡುವೆ ವಾಗ್ವಾದ ಹಾಗೂ ಮಾತಿನ ಚಕಮಕಿ ನಡೆದಿದೆ.
ಶುಕ್ರವಾರ ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 9 ರವರೆಗೂ ಚೆನ್ನಾಗಿ ಇದ್ದಾರೆ ಎಂದು ಹೇಳುತ್ತಿದ್ದ ವೈದ್ಯರು. ಇದ್ದಕ್ಕಿದ್ದಂತೆ ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾರೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ತಡರಾತ್ರಿ ಆಸ್ಪತ್ರೆಯಲ್ಲಿ ಪ್ರತಿಭಟನೆ ಮಾಡಿದ್ದಾರೆ.
ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಜಿಲ್ಲಾ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಘಟನೆ ಬಗ್ಗೆ ತನಿಖೆ ಮಾಡುವುದಾಗಿ ಹೇಳಿ ಮೃತ ಹುಡುಗಿಯ ಪೋಷಕರು ಮತ್ತು ಸಂಬಂಧಿಕರಿಗೆ ಸಮಾಧಾನ ಮಾಡಿದ್ದಾರೆ. ಜೊತೆಗೆ ಸ್ಥಳಕ್ಕೆ ಆಗಮಿಸಿ ಚಿತ್ರದುರ್ಗ ನಗರ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಮೃತ ಕಮಲ ಹುಡುಗನ ಜೊತೆ ಮಾತನಾಡುತ್ತಿದ್ದಳು. ಹೀಗಾಗಿ ಅವರ ತಾಯಿ ಕರೆದು ಬುದ್ಧಿವಾದ ಹೇಳಿದ್ದಾರೆ. ಇದರಿಂದ ಆಕೆ ಇಲಿಪಾಶಾಣ ಸೇವನೆ ಮಾಡಿದ್ದಾಳೆ ಎಂದು ಸಂಬಂಧಿಕರು ಹೇಳಿದ್ದಾರೆ. ಸದ್ಯಕ್ಕೆ ಮೃತ ಕಮಲ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸಿದ ಬಳಿಕ ಸತ್ಯಾಸತ್ಯತೆ ತಿಳಿಯುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv