Karnool Bus Fire | ಮೃತರ ಕುಟುಂಬಸ್ಥರಿಗೆ ಕೇಂದ್ರದಿಂದ ತಲಾ 2 ಲಕ್ಷ ಪರಿಹಾರ ಘೋಷಣೆ

Public TV
2 Min Read

– ಮೃತರಿಗೆ ತಲಾ 5 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಿಸಿದ ಆಂಧ್ರ ಸಾರಿಗೆ ಸಚಿವ

ನವದೆಹಲಿ/ಹೈದರಾಬಾದ್: ಆಂಧ್ರದ ಕರ್ನೂಲಿನಲ್ಲಿ (Karnool) ನಡೆದ ಭೀಕರ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಧನ ಘೋಷಿಸಿದೆ.

ಗುರುವಾರ (ಅ.23) ಮಧ್ಯರಾತ್ರಿ 3ರ ಸುಮಾರಿಗೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಬಸ್ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದು, 24 ಜನರು ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಈ ಕುರಿತು ಪಿಎಂ ಕಚೇರಿ (PMO) ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪಿಎಂ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ನೀಡುವುದಾಗಿ ತಿಳಿಸಿದೆ.ಇದನ್ನೂ ಓದಿ: Kurnool Bus Fire | ಬೆಂಕಿ ವ್ಯಾಪಿಸಲು ಬೆಂಗಳೂರಿಗೆ ಸಾಗಿಸುತ್ತಿದ್ದ ಮೊಬೈಲ್ ಫೋನ್‌ಗಳು ಒಟ್ಟಾಗಿ ಸ್ಫೋಟಿಸಿದ್ದೂ ಕಾರಣ!

ಈ ಕುರಿತು ಆಂಧ್ರಪ್ರದೇಶ ಸಾರಿಗೆ ಸಚಿವ ರಾಮ್ ಪ್ರಸಾದ್ ರೆಡ್ಡಿ (Ram Prasad Reddy) ಮಾತನಾಡಿ, ಇದು ಹಳೆಯ ಬಸ್ ಆಗಿದ್ದ ಕಾರಣ ಇದರಲ್ಲಿ ಸ್ವಯಂಚಾಲಿತ ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆ ಇರಲಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಹೈದ್ರಾಬಾದ್‌ನಿಂದ ಬೆಂಗಳೂರಿಗೆ ಬರ್ತಿದ್ದ ಖಾಸಗಿ ಎಸಿ ಬಸ್ ಆಂಧ್ರದ ಕರ್ನೂಲ್ ಬಳಿ ಬೈಕ್‌ವೊಂದಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತವಾದ ಬಳಿಕವೂ ಡ್ರೈವರ್‌ ಬಸ್ ನಿಲ್ಲಿಸದೇ ಸವಾರನ ಸಮೇತ ಬೈಕ್ ಅನ್ನು ಸುಮಾರು 300 ಮೀಟರ್ ಎಳೆದೊಯ್ದಿದ್ದಾನೆ. ಈ ವೇಳೆ, ಬೈಕ್‌ನಲ್ಲಿದ್ದ ಪೆಟ್ರೋಲ್ ಚೆಲ್ಲಿ ಬಸ್ ಅಡಿ ಬೆಂಕಿ ಹೊತ್ತಿಕೊಂಡಿದೆ. ನಂತರ ಇಡೀ ಬಸ್‌ಗೆ ಬೆಂಕಿ ಹಬ್ಬಿದೆ. ಎಸಿ ಬಸ್ ಆಗಿದ್ದ ಕಾರಣ ಕ್ಷಣಾರ್ಧದಲ್ಲಿ ಇಡೀ ಬಸ್‌ಗೆ ಬೆಂಕಿ ಆವರಿಸಿದೆ.

ಮುಂಜಾನೆ 3 ಗಂಟೆ ಸುಮಾರಿನಲ್ಲಿ ದುರಂತ ಸಂಭವಿಸಿದ್ದು, ಪ್ರಯಾಣಿಕರು ನಿದ್ದೆಯಲ್ಲಿದ್ದರು. ಹೀಗಾಗಿ, 20 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದರೂ ಕೂಡ ಸುಟ್ಟಗಾಯಗಳಿಂದಾಗಿ ಒದ್ದಾಡುತ್ತಿದ್ದಾರೆ. ದುರಂತಕ್ಕೆ ತೆಲಂಗಾಣ-ಆಂಧ್ರಪ್ರದೇಶ-ಕರ್ನಾಟಕದ ಮುಖ್ಯಮಂತ್ರಿಗಳು, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.ಇದನ್ನೂ ಓದಿ: ಡ್ರೈವರ್‌, ಕಂಡಕ್ಟರ್ ಬೆಂಕಿ ನಂದಿಸ್ತಿದ್ದರು, 5 ಸೆಕೆಂಡ್‌ಲ್ಲಿ ಜೀವ ಉಳಿಸಿಕೊಂಡ್ವಿ – ಪ್ರಾಣಾಪಾಯದಿಂದ ಪಾರಾದ ಆಕಾಶ್ ಮಾತು

Share This Article