ಪ್ರಸಾದ ಸೇವನೆ ಪ್ರಕರಣ: 101 ರೋಗಿಗಳ ಪೈಕಿ ಮೂವರ ಸ್ಥಿತಿ ಗಂಭೀರ-ಡಿಹೆಚ್‍ಓ

Public TV
1 Min Read

ಮೈಸೂರು: ಮಾರಮ್ಮ ದೇವಾಲಯದ ಪ್ರಸಾದ ಸೇವನೆಯಿಂದಾಗಿ ಇದೂವರೆಗೂ ನಗರದಾದ್ಯಂತ 101 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ(ಡಿಎಚ್‍ಓ) ಬಸವರಾಜ್ ತಿಳಿಸಿದ್ದಾರೆ.

ನಗರದ ಕೆ.ಆರ್. ಆಸ್ಪತ್ರೆಯ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮೈಸೂರಿನಾದ್ಯಂತ ಇದುವರೆಗೂ ಒಟ್ಟು 101 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲಾ ಆಸ್ಪತ್ರೆಗಳಿಂದ 75 ಮಂದಿಯನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಉಳಿದಂತೆ 26 ರೋಗಿಗಳಿಗೆ ತೀವ್ರ ನಿಗಾ ಘಟಕದಲ್ಲೇ ಚಿಕಿತ್ಸೆ ಮುಂದುವರಿಸಿದ್ದೇವೆ. ಇದರಲ್ಲಿನ 3 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ.

ಮೀಸೆ ಮಾದಯ್ಯ ಎಂಬ ರೋಗಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ನಾರಾಯಣ ಹೃದಯಾಲಯದ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದಂತೆ ಎಲ್ಲ ರೋಗಿಗಳು ಕ್ಷೇಮವಾಗಿದ್ದಾರೆ. ವಿಷ ಪ್ರಸಾದ ಸೇವನೆಯಿಂದಾಗಿ ಇದುವರೆಗೂ 14 ಮಂದಿ ಮೃತಪಟ್ಟಿದ್ದಾರೆಂದು ಸ್ಪಷ್ಟನೆ ನೀಡಿದ್ದಾರೆ.

ಏನಿದು ಘಟನೆ?
ಸುಲ್ವಾಡಿ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ ಗೋಪುರದ ಶಂಕುಸ್ಥಾಪನೆ ನಡೆದಿತ್ತು. ಈ ಕಾರ್ಯಕ್ರಮದ ನಿಮಿತ್ತ ಭಕ್ತರಿಗೆ ಹಾಗೂ ಸ್ಥಳೀಯರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಭಕ್ತರು ಪ್ರಸಾದದ ರೂಪದಲ್ಲಿ ರೈಸ್‍ಬಾತ್ ಸೇವಿಸಿದ್ದರು. ಸ್ವಲ್ಪ ಸಮಯದ ನಂತರ ರೈಸ್‍ಬಾತ್ ಸೇವಿಸಿದ್ದ 80ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿ ಬಿದ್ದಿದ್ದರು. ಇದನ್ನು ಕಂಡ ಸ್ಥಳೀಯರು 108 ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದರು.

ಪ್ರಸಾದದಲ್ಲಿ ಏನಿತ್ತು?
ಪ್ರಸಾದದ ವರದಿ ಕುರಿತು ಪ್ರತಿಕ್ರಿಯಿಸಿದ್ದ ಐಜಿಪಿ ಶರತ್ ಚಂದ್ರ ಅವರು, ಪ್ರಸಾದದಲ್ಲಿ ಆರ್ಗಾನ್ ಪಾಸ್ಪಾರಸ್ ಕಾಂಪೌಂಡ್ ಮೊನೊ ಕ್ರೋಟೋ ಫೋಸ್ ಮಿಶ್ರಣ ಆಗಿದೆ ಎನ್ನುವ ವರದಿ ಬಂದಿದೆ. ಇದನ್ನು ಕೀಟನಾಶಕ್ಕೆ ಬಳಸುತ್ತಾರೆ. ಗಿಡಕ್ಕೆ ಹುಳು ಮತ್ತು ರೋಗ ಬಂದಾಗ ಈ ಕೀಟನಾಶಕವನ್ನು ಸಿಂಪಡಿಸಲಾಗುತ್ತದೆ. ಇದೇ ಕ್ರಿಮಿನಾಶಕವನ್ನು ಬೆರೆಸಿರುವುದು ಸ್ಪಷ್ಟವಾಗಿದೆ. ಈ ಕುರಿತು ಸದ್ಯಕ್ಕೆ ಅನುಮಾನ ಬಂದಂತಹ ವ್ಯಕ್ತಿಗಳನ್ನು ವಿಚಾರಣೆ ಮಾಡಲಾಗುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *