ಒಂದೇ ಬೈಕಿನಲ್ಲಿದ್ದ ನಾಲ್ವರು ಬಲಿ – ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ

2 Min Read

– ತಲಾ 50 ಸಾವಿರ ವೈಯಕ್ತಿಕ ಪರಿಹಾರ ನೀಡಿದ ಸಂಸದ ಸುಧಾಕರ್‌

ಚಿಕ್ಕಬಳ್ಳಾಪುರ: ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಬೈಕ್‌ನಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballpura) ತಾಲೂಕಿನ ಅಜ್ಜವಾರ ಗ್ರಾಮದ ಗೇಟ್ ಬಳಿ ನಡೆದಿದ್ದು, ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿರುವುದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ʻಚಿಕ್ಕಬಳ್ಳಾಪುರ ನಗರದ ಹೊರವಲಯದ ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ (Tipper Bike Accident) ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಕ್ರಿಸ್ಮಸ್ ಸಂಭ್ರಮದಲ್ಲಿದ್ದ ಕುಟುಂಬಗಳು ಹೀಗೆ ಸೂತಕದ ಮನೆಯಾಗಿ ಬದಲಾದುದ್ದು ದುರದೃಷ್ಟಕರ. ಮನೆಗೆ ಆಧಾರವಾಗಿದ್ದ ಈ ಹುಡುಗರ ನಿಧನದಿಂದ ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ನೆರವಾಗಲು ತಲಾ ರೂ.5 ಲಕ್ಷ ಪರಿಹಾರ ನೀಡುತ್ತಿದ್ದೇವೆ. ತಮ್ಮವರನ್ನ ಕಳೆದುಕೊಂಡು ನೋವಿನಲ್ಲಿರುವ ಜೀವಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆʼ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಿಲ್ಲ: ಹೆಚ್‌ಡಿಡಿ

ವೈಯಕ್ತಿಕ ಪರಿಹಾರ ನೀಡಿದ ಸಂಸದ ಸುಧಾಕರ್‌
ಇನ್ನೂ ಅಜ್ಜವಾರ ಗ್ರಾಮಕ್ಕೆ ಸಂಸದ ಡಾ. ಕೆ.ಸುಧಾಕರ್ ಭೇಟಿ ನೀಡಿ ಮೃತ ಯುವಕರ ಅಂತಿಮ ದರ್ಶನ ಪಡೆದಿದ್ದಾರೆ. ಇದೆ ವೇಳೆ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರ್ ಸಮಯದಲ್ಲಿ ಸೈನ್ಯಕ್ಕೆ ನೆರವು – 10ರ ಬಾಲಕ ಶ್ರವಣ್ ಸಿಂಗ್‌ಗೆ ಪಿಎಂ ರಾಷ್ಟ್ರೀಯ ಬಾಲ ಪುರಸ್ಕಾರ

ಇದೆ ವೇಳೆ ಮಾತನಾಡಿದ ಸುಧಾಕರ್ ಅವರು, ಇದೊಂದು ಆಘಾತಕಾರಿ ಘಟನೆ, ಒಂದೇ ಮನೆಯಲ್ಲಿ ಅಣ್ಣ ತಮ್ಮ ಇಬ್ಬರೂ ಕೂಡ ಮೃತಪಟ್ಟಿದ್ದಾರೆ. ತಾಯಿಗೆ ಆಧಾರವಾಗಿದ್ದ ಗಂಡು ಮಕ್ಕಳು ಇಲ್ಲದೆ ತಾಯಿ ದಿಕ್ಕು ತೋಚದಂತಾಗಿದ್ದಾರೆ ಇಂತಹ ಸ್ಥಿತಿ ಯಾವ ತಾಯಿಗೂ ಬೇಡವಾದದ್ದು ಅಂತ ಘಟನೆಯ ಬಗ್ಗೆ ಮರುಕ ವ್ಯಕ್ತಪಡಿಸಿದರು. ಮೃತರಿಗೆ ಪರಿಹಾರ ಘೋಷಣೆ ಮಾಡಿರುವ ರಾಜ್ಯ ಸರ್ಕಾರ ಸಿಎಂ ಸಿದ್ದರಾಮಯ್ಯನವರಿಗೆ ಸಂಸದ ಸುಧಾಕರ್ ಅಭಿನಂದನೆ ಸಲ್ಲಿಸಿದರು. ಪ್ರಧಾನಿಗಳಿಗೂ ಮೃತ ಕುಟುಂಬಸ್ತರಿಗೆ ಪರಿಹಾರ ನೀಡಲು ಮನವಿ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.

Share This Article