ಸ್ಯಾಂಡಲ್ವುಡ್ ನಟಿ ರಮ್ಯಾ (Ramya) ಅವರು ದೀಪಾವಳಿ ಹಬ್ಬಕ್ಕೆ ಅಭಿಮಾನಿಗಳಿಗೆ ವಿಶೇಷವಾಗಿ ಶುಭಕೋರಿದ್ದಾರೆ. ತಮ್ಮ ಮೊದಲ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swathi Muttina Male Haniye) ಸಿನಿಮಾದಿಂದಲೇ ಮತ್ತೆ ಕಮ್ಬ್ಯಾಕ್ ಆಗುತ್ತಾರೆ ಎಂದು ಹೇಳಲಾಗಿತ್ತು. ಬಳಿಕ ಚಿತ್ರದಿಂದ ಹೊರಬಂದಿದ್ದೇಕೆ ಎಂದು ಇದೀಗ ನಟಿ ಪ್ರತಿಕ್ರಿಯೆ ನೀಡಿದ್ದಾರೆ.
‘ಸ್ವಾತಿ ಮುತ್ತಿನ ಮಳೆ ಹನಿಯೇ’ ಇದು ನನಗೆ ಬಹಳ ವಿಶೇಷವಾದ ಚಿತ್ರ. ನಿರ್ಮಾಪಕಿಯಾಗಿ ನನ್ನ ಮೊದಲ ಚಿತ್ರ ಎಂದಷ್ಟೇ ಅಲ್ಲ. ಜೀವನದ ಬಗ್ಗೆ ನನ್ನ ದೃಷ್ಟಿಕೋನವನ್ನು ಸಂಪೂರ್ಣವಾಗಿ ಬದಲಿಸಿದ ವಿಷಯಾಧರಿತ ಚಿತ್ರ ಎಂದು ಸಿನಿಮಾದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಅಪಘಾತ ಪ್ರಕರಣ: ನಟ ನಾಗಭೂಷಣ್ ವಿರುದ್ಧ 70 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ
ನಿಮ್ಮಲ್ಲಿ ಹಲವರಿಗೆ ಈ ಪ್ರಶ್ನೆ ಇದೆ ಎಂದು ನನಗೆ ತಿಳಿದಿದೆ. ನಾನು ಚಿತ್ರದಿಂದ ಹೊರಗುಳಿದದ್ದು ಏಕೆಂದರೆ ಅದು ಓಟಿಟಿಯಲ್ಲಿ ಬಿಡುಗಡೆಯಾಗುವುದೆಂದು ನಿರ್ಧರಿಸಿದ್ದೆವು. ನನ್ನ ಕಮ್ಬ್ಯಾಕ್ ಚಿತ್ರವು ಚಿತ್ರಮಂದಿರದಲ್ಲಿಯೇ ಬಿಡುಗಡೆಯಾಗಬೇಕೆಂದು ನಾನು ಬಯಸಿದ್ದೆ. ಚಿತ್ರವನ್ನು ಖರೀದಿಸುವುದಾಗಿ ಭರವಸೆ ನೀಡಿದ ಓಟಿಟಿ ವೇದಿಕೆಯು ನಂತರ ಹಿಂದೆ ಸರಿಯಿತು. ಕನ್ನಡದಲ್ಲಿ ಇದು ಹೆಚ್ಚಾಗಿ ನಡೆಯುತ್ತದೆ. ಆದರೆ, ನಿಮ್ಮನ್ನು ಸೇರಲು ಹಲವು ಮಾರ್ಗಗಳನ್ನು ಹುಡುಕುತ್ತೇವೆ ಎಂದು ನಟಿ ತಿಳಿಸಿದ್ದಾರೆ.

ರಾಜ್ ಬಿ ಶೆಟ್ಟಿ, ಸಿರಿ ರವಿಕುಮಾರ್ ಸೇರಿದಂತೆ ಇಡೀ ಚಿತ್ರತಂಡಕ್ಕೆ ಮತ್ತು ಕೆವಿಎನ್ ಸಂಸ್ಥೆಯ ರೂವಾರಿ ಕಾರ್ತಿಕ್-ಯೋಗಿಗೆ, ರಮ್ಯಾ ಧನ್ಯವಾದಗಳನ್ನ ತಿಳಿಸಿದ್ದಾರೆ. ನವೆಂಬರ್ 24ಕ್ಕೆ ರಿಲೀಸ್ ಆಗುತ್ತಿರೋ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನೋಡಿ ಎಂದು ಮನವಿ ಮಾಡಿದ್ದಾರೆ.

 
			

 
		 
		 
                                
                              
		