ನ್ಯಾಯಾಲಯಕ್ಕೆ ಸಿ ರಿಪೋರ್ಟ್ ಸಲ್ಲಿಸಿದ್ದ 3 ತಿಂಗಳಿನಲ್ಲಿ ಆರೋಪಿ ಅರೆಸ್ಟ್

Public TV
2 Min Read

ಬೆಂಗಳೂರು: ಕಾರ್ಪೊರೇಷನ್ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಅವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ನ್ಯಾಯಾಲಯಕ್ಕೆ 2016ರ ನವೆಂಬರ್‍ನಲ್ಲಿ ಸಿ ರಿಪೋರ್ಟ್ ಸಲ್ಲಿಸಿದ್ದರು. ಸಿ ರಿಪೋರ್ಟ್ ಸಲ್ಲಿಸಿದ್ದ ಮೂರೇ ತಿಂಗಳ ಒಳಗಡೆ ಆರೋಪಿ ಮಧುಕರ್ ರೆಡ್ಡಿಯ ಬಂಧನವಾಗಿದೆ.

ಆಂಧ್ರಪ್ರದೇಶ, ತಮಿಳುನಾಡು ಸೇರಿ ಹಲವೆಡೆ ಸಿಕ್ಕಿರುವ ಸಾಕ್ಷ್ಯಗಳನ್ನು ಆಧಾರಿಸಿ ಹುಡುಕಾಟ ನಡೆಸಿದ್ದೇವೆ ಆದರೆ ಆರೋಪಿಯ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಪೊಲೀಸರು ಹೇಳಿದ್ದರು.

ಸಿ ರಿಪೋರ್ಟ್ ಸಲ್ಲಿಕೆಯಾಗಿದ್ದರೂ ವಿಶೇಷ ತಂಡಗಳು ಆರೋಪಿ ಬಗ್ಗೆ ಸಾಕ್ಷ್ಯಗಳನ್ನು ಸಂಗ್ರಹಿಸಲಿವೆ. ಸಣ್ಣ ಸುಳಿವು ಸಿಕ್ಕರೂ ನ್ಯಾಯಾಲಯದ ಅನುಮತಿ ಪಡೆದು ಮತ್ತೆ ಪ್ರಕರಣದ ತನಿಖೆ ಮುಂದುವರಿಸಲಾಗುವುದು ಪೊಲೀಸರು ತಿಳಿಸಿದ್ದರು.

ಏನಿದು ಸಿ ರಿಪೋರ್ಟ್
ಪ್ರಕರಣ ನಡೆದಿರುತ್ತದೆ. ಆದರೆ, ತನಿಖೆ ವೇಳೆ ಸಂಗ್ರಹಿಸಿದ ಸಾಕ್ಷ್ಯಗಳಿಂದ ಆರೋಪಿ ಸಿಕ್ಕಿಲ್ಲ ಎನ್ನುವುದನ್ನು ನ್ಯಾಯಾಲಯಕ್ಕೆ ತಿಳಿಸಲು ಸಿ ರಿಪೋರ್ಟ್ ಸಲ್ಲಿಸಲಾಗುತ್ತದೆ.

10 ಲಕ್ಷ ರೂ. ಬಹುಮಾನ:
ರಾಜ್ಯ ಸರ್ಕಾರ ಆರಂಭದಲ್ಲಿ ಆರೋಪಿ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಹೇಳಿತ್ತು. ಆದರೆ 2014ರ ನವೆಂಬರ್ 29 ರಂದು ಅಂದಿನ ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ ಆರೋಪಿಯ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ತಿಳಿಸಿದ್ದರು. ಆರೋಪಿಯ ಪತ್ತೆಗಾಗಿ 500ಕ್ಕೂ ಹೆಚ್ಚು ಸಿಬ್ಬಂದಿ, 15 ವಿಶೇಷ ತಂಡಗಳು ಕೆಲಸ ಮಾಡಿತ್ತು.

ಅಂದು ಏನಾಗಿತ್ತು?
2013ರ ನವೆಂಬರ್ 19ರಂದು ಬೆಳಗ್ಗೆ ಬೆಂಗಳೂರಿನ ಬಿಬಿಎಂಪಿ ಕಚೇರಿ ಮುಂಭಾಗದಲ್ಲಿನ ಕಾರ್ಪೊರೇಷನ್ ಬ್ಯಾಂಕ್ ಎಟಿಎಂನಲ್ಲಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಕಾರ್ಪೊರೇಷನ್  ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್ ಅವರ ಮೇಲೆ ಅಪರಿಚಿತ ವ್ಯಕ್ತಿ ಎಲ್‍ಐಸಿ ಕಟ್ಟಡದಲ್ಲಿರುವ ಎಟಿಎಂನಲ್ಲಿ 2013ರ ನ.19ರಂದು ಬೆಳಗ್ಗೆ 7.10ರ ಸುಮಾರಿಗೆ ಹಲ್ಲೆ ನಡೆಸಿದ್ದ.

ಹಲ್ಲೆ ನಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೃತ್ಯ ನಡೆದು 3 ವರ್ಷ ಕಳೆದಿದ್ದರೂ ಆರೋಪಿ ಸಿಕ್ಕಿರಲಿಲ್ಲ. ಹಲ್ಲೆಯಿಂದ ಗಾಯಗೊಂಡಿದ್ದ ಜ್ಯೋತಿ ಉದಯ್ ಅವರು ಕೆಲವು ತಿಂಗಳ ಕಾಲ ಚಿಕಿತ್ಸೆ ಪಡೆದು, ಗುಣಮುಖರಾಗಿ ಬ್ಯಾಂಕಿನಲ್ಲಿ ಕೆಲಸ ಮುಂದುವರಿಸಿದ್ದಾರೆ. ಜ್ಯೋತಿ ಉದಯ್ ಅವರ ಮೇಲೆ ಹಲ್ಲೆ ನಡೆಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *